ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ ನಿವಾರಣೆ ಹಾಗೂ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ.15 ಅಥವಾ 16ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. 

ಬೆಂಗಳೂರು (ಅ.04): ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇ.ಡಿ.)ದಲ್ಲಿ ದೂರು ದಾಖಲಾದ ನಂತರ ರಾಜ್ಯ ಕಾಂಗ್ರೆಸ್‌ನಲ್ಲಿ ಆರಂಭವಾಗಿರುವ ಗೊಂದಲ ನಿವಾರಣೆ ಹಾಗೂ ಮುಂದೇನು ಮಾಡಬೇಕು ಎಂಬ ಬಗ್ಗೆ ರಾಜ್ಯ ನಾಯಕರೊಂದಿಗೆ ಚರ್ಚಿಸಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅ.15 ಅಥವಾ 16ರಂದು ಬೆಂಗಳೂರಿಗೆ ಆಗಮಿಸುವ ಸಾಧ್ಯತೆಯಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೇಂದ್ರ ಸಾರ್ವಜನಿಕ ಲೆಕ್ಕ ಸಮಿತಿಯ ಅಧ್ಯಕ್ಷರೂ ಆಗಿರುವ ವೇಣುಗೋಪಾಲ್ ಅವರು ತಮ್ಮ ಸಮಿತಿಗೆ ಸಂಬಂಧಿಸಿದಂತೆ ಸಭೆಯೊಂದನ್ನು ನಡೆಸಲು ಬೆಂಗಳೂರಿಗೆ ಆಗಮಿಸಲಿದ್ದು, ಇದೇ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯದ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಡಾ ಪ್ರಕರಣದಲ್ಲಿ ಇ.ಡಿ. ಪ್ರವೇಶದ ನಂತರ ಕಾಂಗ್ರೆಸ್‌ನಲ್ಲಿ ಆಂತರಿಕ ತುಮುಲ ಆರಂಭಗೊಂಡಿದೆ. ಒಂದು ವೇಳೆ ಜಾರಿ ನಿರ್ದೇ ಶನಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಆಪ್ತರನ್ನು ಇಕ್ಕಟ್ಟಿಗೆ ಸಿಲುಕಿಸುವಂತಹ ತೀವ್ರ ಕ್ರಮಗಳಿಗೆ ಮುಂದಾದರೆ ಪರಿ ಸ್ಥಿತಿ ಏನಾಗಬಹುದೆಂಬ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲೇ ತೀವ್ರ ಗೊಂದಲಗಳಿವೆ. 

 ಹೀಗಾಗಿಯೇ ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿರುವ ದಲಿತ ಸಚಿವರಾದ ಡಾ. ಎಚ್.ಸಿ.ಮಹದೇವಪ್ಪ, ಡಾ.ಜಿ.ಪರಮೇಶ್ವರ್ ಹಾಗೂ ಸತೀಶ್ ಜಾರಕಿಹೊಳಿ ಅವರು ಗುಪ್ತ ಸಭೆ ನಡೆಸಿ ಮುಂದೇನು ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಸಿದ್ದರಾಮಯ್ಯ ಅವರ ಸ್ಥಾನಕ್ಕೆ ಯಾವುದೇ ಚ್ಯುತಿ ಬರಬಾರದು. ಒಂದು ವೇಳೆ ಅಂತಹ ಪರಿಸ್ಥಿತಿಯೇನಾದರೂ ಬಂದೊದಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಉನ್ನತ ಸ್ಥಾನಕ್ಕೆ ಪ್ರಯತ್ನಿಸಿದರೆ, ತಮ್ಮ ನಿಲುವು ಏನಾಗಬೇಕು ಎಂದು ಚರ್ಚೆ ನಡೆಸಿದರು ಎನ್ನಲಾಗಿದೆ. ಈ ಬಗ್ಗೆ ತೀರ್ಮಾನವೊಂದಕ್ಕೆ ಬಂದಿರುವ ಈ ಸಚಿವರು ತಮ್ಮ ಅಭಿಪ್ರಾಯವನ್ನು ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಎಂದೂ ಉನ್ನತ ಮೂಲಗಳು ತಿಳಿಸಿವೆ. 

ಇನ್ನೊಂದು ವರ್ಷದವರೆಗೂ ಚಾಮುಂಡೇಶ್ವರಿ ಆಶೀರ್ವಾದ ಇರಲಿ: ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ!

ಈ ಬೆಳವಣಿ ಗೆಯ ಬೆನ್ನಲ್ಲೇ ಹಿಂದುಳಿದ ಸಚಿವರು ಹಾಗೂ ನಾಯಕರು ಸಹ ಗುರುವಾರ ಪ್ರತ್ಯೇಕ ಸಭೆ ನಡೆಸಿದ್ದು, ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುವ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ನಲ್ಲಿ ಗೊಂದಲ ನಿರ್ಮಾಣ ವಾಗಿದೆ. ಕುತೂಹಲಕಾರಿ ಸಂಗತಿಯೆಂದರೆ, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ. ಪ್ರವೇಶದ ನಂತರ ಹೈಕಮಾಂಡ್ ರಾಜ್ಯದ ಬೆಳವಣಿಗೆಗಳ ಬಗ್ಗೆ ಮೌನ ವಹಿಸಿದೆ. ಈ ಮೌನವೂಕಾಂಗ್ರೆಸ್‌ನಾಯಕರಗೊಂದಲವನ್ನು ಹೆಚ್ಚಿಸಿದೆ. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ವೇಣುಗೋಪಾಲ್ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.