‘ನಮ್ಮ ಪಕ್ಷದಲ್ಲಿ ರಾಜ್ಯಾಧ್ಯಕ್ಷರ ಅವಧಿ 3 ವರ್ಷ. ನಾನೀಗ ರಾಜ್ಯಾಧ್ಯಕ್ಷನಾಗಿ ನಾಲ್ಕು ವರ್ಷ ಪೂರೈಸಿದ್ದೇನೆ. ನನ್ನ ಅಧಿಕಾರದ ಅವಧಿ ಮುಗಿದಿದೆ. ಸಹಜವಾಗಿ ಬದಲಾವಣೆ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಕೇಂದ್ರ ನಾಯಕರಿಂದ ತೀರ್ಮಾನವಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

ಬಳ್ಳಾರಿ (ಜೂ.25): ‘ನಮ್ಮ ಪಕ್ಷದಲ್ಲಿ ರಾಜ್ಯಾಧ್ಯಕ್ಷರ ಅವಧಿ 3 ವರ್ಷ. ನಾನೀಗ ರಾಜ್ಯಾಧ್ಯಕ್ಷನಾಗಿ ನಾಲ್ಕು ವರ್ಷ ಪೂರೈಸಿದ್ದೇನೆ. ನನ್ನ ಅಧಿಕಾರದ ಅವಧಿ ಮುಗಿದಿದೆ. ಸಹಜವಾಗಿ ಬದಲಾವಣೆ ಪ್ರಕ್ರಿಯೆ ನಡೆಯಲಿದೆ. ಈ ಬಗ್ಗೆ ಕೇಂದ್ರ ನಾಯಕರಿಂದ ತೀರ್ಮಾನವಾಗಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ತಿಳಿಸಿದ್ದಾರೆ.

Add Asianetnews Kannada as a Preferred SourcegooglePreferred

ಶನಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಕುರಿತು ಸ್ಪಷ್ಟನೆ ನೀಡಿ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಈಗಾಗಲೇ ನಾನು ಅಧ್ಯಕ್ಷನಾಗಿ 4 ವರ್ಷ ಪೂರೈಸಿದ್ದೇನೆ. ನನ್ನ ಅಧಿಕಾರದ ಅವಧಿ ಮುಗಿದಿದೆ. ಸಹಜವಾಗಿ ಬದಲಾವಣೆ ಪ್ರಕ್ರಿಯೆ ನಡೆಯಲಿದೆ’ ಎನ್ನುವ ಮೂಲಕ ರಾಜೀನಾಮೆ ವಿಚಾರವನ್ನು ಖಚಿತಪಡಿಸದೆ ಜಾರಿಕೊಂಡರು.

ನಳಿನ್‌ ಕುಮಾರ್‌ ಕಟೀಲ್‌ ಮನೆಗೆ ಮಾರಿ, ಪರರಿಗೆ ಉಪಕಾರಿ: ಸಚಿವ ದಿನೇಶ್‌ ಗುಂಡೂರಾವ್‌

ಕಳೆದ ವಿಧಾನಸಭಾ ಚುನಾವಣೆಯ ಸೋಲಿನ ಹೊಣೆ ಹೊರುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ಸೋಲಿಗೆ ಕಾರಣವಾದ ಸಂಗತಿಗಳನ್ನು ಕೇಂದ್ರ ನಾಯಕರಿಗೆ ತಿಳಿಸಿದ್ದೇನೆ. ಅಲ್ಲದೆ, ರಾಜ್ಯ ಚುನಾವಣೆಯ ಸೋಲಿಗೆ ನಾನು ನೈತಿಕ ಹೊಣೆ ಹೊತ್ತಿದ್ದೇನೆ. ನೀವು ಯಾವುದೇ ತೀರ್ಮಾನ ತೆಗೆದುಕೊಳ್ಳಬಹುದು ಎಂದು ರಾಷ್ಟ್ರೀಯ ನಾಯಕರಿಗೆ ಮೌಖಿಕವಾಗಿ ತಿಳಿಸಿದ್ದೇನೆ. ಸೂಕ್ತ ಸಮಯದಲ್ಲಿ ಕೇಂದ್ರದ ನಾಯಕರಿಂದ ತೀರ್ಮಾನವಾಗಲಿದೆ’ ಎಂದು ಹೇಳಿದರು.

ನಾನು ರಾಜೀನಾಮೆ ನೀಡಿಲ್ಲ: ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಈ ಕುರಿತಂತೆ ಮಾಧ್ಯಮಗಳಲ್ಲಿ ಬರುತ್ತಿರುವ ಮಾಹಿತಿಯು ಸತ್ಯಕ್ಕೆ ದೂರವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಸ್ಪಷ್ಟಪಡಿಸಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ನಾನು ಅಧ್ಯಕ್ಷ ಸ್ಥಾನದಲ್ಲಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಹಲವು ಮಾಧ್ಯಮಗಳಲ್ಲಿ ಮಾಹಿತಿ ಬರುತ್ತಿದೆ. ಇದು ಸತ್ಯಕ್ಕೆ ದೂರವಾಗಿದ್ದು, ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿಲ್ಲ ಎಂದು ಪತ್ರಿಕಾಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಕ್ಕಿಯನ್ನು ಮೋದಿಯವರಿಗೆ ಕೇಳಿ ಕೊಡುತ್ತೇನೆ ಎಂದು ಸಿದ್ದು ಹೇಳಿದ್ದರಾ?: ನಳಿನ್‌ ಕುಮಾರ್‌ ಕಟೀಲ್‌

ಬಳ್ಳಾರಿಯಲ್ಲಿ ಮಾಜಿ ಸಚಿವ ವಿ.ಸೋಮಣ್ಣ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷೆಯನ್ನು ಪ್ರಕಟಿಸಿದ್ದರು. ಈ ಪ್ರಶ್ನೆಗೆ ಉತ್ತರಿಸುವ ವೇಳೆ ಸೋಲಿನ ನೈತಿಕ ಹೊಣೆ ಹೊರುತ್ತೇನೆ ಎಂದಿದ್ದೇನೆ. ಸೋಲಿನ ಕಾರಣಗಳ ಕುರಿತಂತೆ ಪಕ್ಷದ ಹಿರಿಯರಿಗೆ ಮಾಹಿತಿ ನೀಡಿದ್ದೇನೆ. ಪಕ್ಷದ ರಾಜ್ಯಾಧ್ಯಕ್ಷರ ನೇಮಕ ಕುರಿತಂತೆ ಪಕ್ಷವು ಸೂಕ್ತ ಸಂದರ್ಭದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ನಾನು ಹೇಳಿಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿವೆ ಎಂದರು.