ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಹೇಗೆ ಬರ್ಬಾದ್ ಆಗುತ್ತಿದೆ, ಹೇಗೆ ಅಭಿವೃದ್ಧಿ ಶೂನ್ಯವಾಗುತ್ತಿದೆ ಎಂದು ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ.

ಬೆಂಗಳೂರು (ಜು.01): ಕಾಂಗ್ರೆಸ್ ಸರ್ಕಾರ ದಿನದಿಂದ ದಿನಕ್ಕೆ ಹೇಗೆ ಬರ್ಬಾದ್ ಆಗುತ್ತಿದೆ, ಹೇಗೆ ಅಭಿವೃದ್ಧಿ ಶೂನ್ಯವಾಗುತ್ತಿದೆ ಎಂಬುದಕ್ಕೆ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರೇ ಬೆಂಗಳೂರಿಗೆ ಧಾವಿಸಿ ಶಾಸಕರೊಂದಿಗೆ ಸಮಾಲೋಚನೆ ನಡೆಸಿರುವುದು ಸ್ಪಷ್ಟ ನಿದರ್ಶನ ಎಂದು ವಿಧಾನಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಲೇವಡಿ ಮಾಡಿದ್ದಾರೆ. ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಶಾಸಕರಾದ ಬಿ.ಆರ್.ಪಾಟೀಲ್, ರಾಜು ಕಾಗೆ, ಬೇಳೂರು ಗೋಪಾಲಕೃಷ್ಣ ಹೀಗೆ ಅನೇಕರನ್ನು ಸುರ್ಜೇವಾಲಾ ಕರೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಡಳಿತ ಪಕ್ಷದ ಶಾಸಕರೇ ಅಭಿವೃದ್ಧಿ ಆಗುತ್ತಿಲ್ಲ; ತಮಗೆ ಅನುದಾನ ಸಿಗುತ್ತಿಲ್ಲ, ನಾವು ಕ್ಷೇತ್ರದಲ್ಲಿ ಮುಖ ಇಟ್ಟುಕೊಂಡು ಓಡಾಡುವುದು ಹೇಗೆ, ಜನರಿಗೆ ಏನು ಉತ್ತರ ಕೊಡಬೇಕು ಎಂದು ಅಸಮಾಧಾನದಿಂದ ಮಾತನಾಡಿದ್ದಾರೆ. ಈ ಸಂಖ್ಯೆ ಹೆಚ್ಚಾಗಲಿದೆ ಎಂದು ಸುರ್ಜೇವಾಲಾ ದೌಡಾಯಿಸಿ ಬಂದಿದ್ದಾರೆ ಎಂದು ಹೇಳಿದರು. ನಿಮ್ಮ ಸರ್ಕಾರ ಅಭಿವೃದ್ಧಿ ಶೂನ್ಯ ಎಂಬುದಕ್ಕೆ ಇನ್ನೇನು ಸಾಕ್ಷಿ ಬೇಕು ಸಿದ್ದರಾಮಯ್ಯನವರೇ? ತಮ್ಮ ಶಾಸಕರ ಅಹವಾಲು ಶಮನ ಮಾಡಲು ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ವಿಫಲವಾಗಿದ್ದಾರೆ ಎಂಬುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೇ?

ಅದಕ್ಕಾಗಿಯೇ ಸುರ್ಜೇವಾಲಾ ಬಂದಿದ್ದಾರೆ. ಮುಂದೆ ರಾಹುಲ್ ಗಾಂಧಿ ಕೂಡ ಬರಬೇಕಾಗಿ ಬರಬಹುದು ಎಂದರು.ಹಣ ಬರುವುದಿಲ್ಲ ಎಂಬ ಕಾರಣಕ್ಕೆ ರಾಜ್ಯದ ಗುತ್ತಿಗೆದಾರರು ರಸ್ತೆ, ಕಟ್ಟಡ ಕಾಮಗಾರಿಗೆ ಟೆಂಡರ್ ಕರೆದರೆ ಅವುಗಳಿಗೆ ಅರ್ಜಿ ಹಾಕುತ್ತಿಲ್ಲ. ಅನುದಾನ ಸಿಗುತ್ತಿಲ್ಲ ಎಂಬ ಅಸಮಾಧಾನ ಹೊಂದಿರುವ ಶಾಸಕರ ದೊಡ್ಡ ಪಟ್ಟಿಯೇ ಕಾಂಗ್ರೆಸ್ಸಿನಲ್ಲಿ ಇದೆ ಎಂದು ರವಿಕುಮಾರ್ ತಿಳಿಸಿದರು.

25 ಪರ್ಸೆಂಟ್‌ ಸರ್ಕಾರ: ರಾಜ್ಯದಲ್ಲಿ ಅಧಿಕಾರದಲ್ಲಿರುವುದು 25 ಪರ್ಸೆಂಟ್‌ ಸರ್ಕಾರ ಎಂದು ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಎನ್.ರವಿಕುಮಾರ್ ವ್ಯಂಗ್ಯವಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯ ಹಣ ದುರ್ಬಳಕೆ ಮಾಡಿದೆ ಎಂದು ಆರೋಪಿಸಿ ಜಿಲ್ಲಾಧಿಕಾರಿ ಕಚೇರಿ ಬಳಿ ಶುಕ್ರವಾರ ಬಿಜೆಪಿ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ರಾಜ್ಯದ ದಲಿತರ ಅಭಿವೃದ್ಧಿಗೆ ವಿವಿಧ ನಿಗಮಗಳಲ್ಲಿ ತೆಗೆದಿರಿಸಲಾಗಿದ್ದ ಅನುದಾನದಲ್ಲಿ ಶೇ.25ರಷ್ಟು ಮಾತ್ರ ಬಳಕೆ ಮಾಡಿದೆ. ಆದ್ದರಿಂದ ಇದು 25 ಪರ್ಸೆಂಟ್‌ ಸರ್ಕಾರ ಎಂದರು.

ಉಳಿದ ಶೇ.75 ಅನುದಾನವನ್ನು ತನ್ನ ಗ್ಯಾರಂಟಿ ಯೋಜನೆಗೆ ಬಳಸಿ, ದಲಿತರಿಗೆ, ಹಿಂದುಳಿದವರಿಗೆ ಮೋಸ ಮಾಡಿದ್ದು, ಇದು ದಲಿತ ವಿರೋಧಿ ಸರ್ಕಾರ ಎಂದರು. ಬಿಜೆಪಿ ಸರ್ಕಾರ ಕೋವಿಡ್‌ ಸಂದರ್ಭದಲ್ಲಿಯೂ ದಲಿತರಿಗಾಗಿ ಶೇ.97 ಅನುದಾನ ಸದ್ಬಳಕೆ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ 2023ರಲ್ಲಿ ದಲಿತರ ಮೀಸಲು ಅನುದಾನದಲ್ಲಿ ₹11,000 ಕೋಟಿ ಮತ್ತು 2024ರಲ್ಲಿ ₹14,000 ಕೋಟಿ ಗ್ಯಾರಂಟಿಗೆ ಬಳಸಿದೆ. ಯಾಕೆಂದರೆ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ ಎಂದು ವ್ಯಂಗ್ಯವಾಡಿದರು.