ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನನ್ನ ವಿರುದ್ಧ ನಡೆದ ದಿಗ್ಬಂಧನ, ಅಹಿತಕರ ಘಟನೆಗಳ ಕುರಿತು ದೂರು ಕೊಟ್ಟಿದ್ದರೂ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮೇ.30): ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿ ನನ್ನ ವಿರುದ್ಧ ನಡೆದ ದಿಗ್ಬಂಧನ, ಅಹಿತಕರ ಘಟನೆಗಳ ಕುರಿತು ಪೊಲೀಸ್ ಮಹಾನಿರ್ದೇಶಕರು, ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ದೂರು ಕೊಟ್ಟಿದ್ದರೂ ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ ಎಂದು ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ಬಿಜೆಪಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಚಿತ್ತಾಪುರದಲ್ಲಿ ಐದು ಗಂಟೆಗಳ ಕಾಲ ನನ್ನನ್ನು ಕೂಡಿ ಹಾಕಿದ್ದರು. ನಮ್ಮ ಜನ ಬರದಂತೆ ತಡೆದರು. ನನ್ನ ಕಾರಿನ ಮೇಲೆ ಮಸಿ ಸುರಿದರು.

Add Asianetnews Kannada as a Preferred SourcegooglePreferred

ಕಲ್ಲುಗಳನ್ನು ಜಮಾಯಿಸಿ ಇಟ್ಟಿದ್ದರು. ಮೊಟ್ಟೆ ತೂರಲು, ಕಲ್ಲು ತೂರಾಟಕ್ಕೆ ಸಿದ್ಧತೆ ಮಾಡಿಕೊಂಡಿದ್ದರು ಎಂದು ಗಮನಕ್ಕೆ ತಂದರು. ನಾನು ಅಲ್ಲಿಂದಲೇ ಗೃಹ ಸಚಿವರು, ಎಡಿಜಿಪಿಗೆ ಕರೆ ಮಾಡಿ ಮಾತನಾಡಿದೆ. ಸುಮಾರು 10 ಸಲ ಎಸ್‌ಪಿಗೆ ಮಾತನಾಡಿದ್ದೆ ಎಂದು ವಿವರಿಸಿದರು. ಹಿಂದೆ ನಮ್ಮ ಸರ್ಕಾರ ಇದ್ದಾಗ ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರು ಕೊಡಗಿಗೆ ಭೇಟಿ ಕೊಟ್ಟಿದ್ದರು. ಮೊಟ್ಟೆ ಎಸೆದರೆಂದು ದೊಡ್ಡ ರಾದ್ಧಾಂತ ಮಾಡಿದ್ದರು. ನಾವು ಅವರಿಗೆ ತುಂಬಾ ರಕ್ಷಣೆ ಕೊಟ್ಟಿದ್ದೆವು ಎಂದು ಹೇಳಿದರು.

ದತ್ತಾತ್ರೇಯ ಶಾಂತಪ್ಪ ಇಕ್ಕಲಗಿ ಎಂಬುವವರು ವಿಧಾನಪರಿಷತ್ ವಿಪಕ್ಷದ ಮುಖ್ಯ ಸಚೇತಕ ಎನ್‌.ರವಿಕುಮಾರ್‌ ವಿರುದ್ಧ ದೂರು ನೀಡಿದ್ದಾರೆ. ಅವರು ಸಮಾಜಸೇವಕ. ಅವರಿಗೆ ಕಾಂಗ್ರೆಸ್ ಸರ್ಕಾರವು ಈಚೆಗೆ ಅಂಬೇಡ್ಕರ್‌ ಪ್ರಶಸ್ತಿ ಕೊಟ್ಟಿದೆ. ಪ್ರಶಸ್ತಿ ಋಣ ತೀರಿಸಲು ಅವರು ದೂರು ಕೊಟ್ಟಿದ್ದಾರೆ ಎಂದು ಆರೋಪಿಸಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಛಲವಾದಿ, ವಿಧಾನಪರಿಷತ್ ಪ್ರತಿಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಅವರು ಹೊಲೆಯ, ದಲಿತ ಎಂಬ ಪದಗಳನ್ನು ತಮ್ಮ ಭಾಷಣದ ವೇಳೆ ಬಳಸಿದ್ದರೆ ನಾನೇ ಅವರ ಮೇಲೆ ದೂರು ನೀಡುತ್ತೇನೆ ಎಂದು ಸವಾಲೆಸೆದರು.

ಕಾಂಗ್ರೆಸ್ ಆಡಳಿತ ಗಾರ್ಬೇಜ್ ಗೆ ಸಮ: ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಗಾರ್ಬೇಜ್‌ ಪರಿಸ್ಥಿತಿ ಹೇಗಿದೆಯೋ ಕಾಂಗ್ರೆಸ್‌‍ ಸರ್ಕಾರದ ಆಡಳಿತವೂ ಗಾರ್ಬೇಜ್‌ಗೆ (ಕಸಕ್ಕೆ) ಸಮನಾಗಿದೆ ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ವಾಗ್ದಾಲಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ 40- 45 ವರ್ಷಗಳ ರಾಜಕೀಯ ಜೀವನದಲ್ಲಿ ಇಂತಹ ಕೆಟ್ಟ ಸರ್ಕಾರವನ್ನು ಎಂದೂ ಕೂಡ ನೋಡಿರಲಿಲ್ಲ. ರಾಜ್ಯದಲ್ಲಿ ಸಂಪೂರ್ಣ ಅಭಿವೃದ್ಧಿ ಶೂನ್ಯ ಹಾಗೂ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅತ್ಯಂತ ಕೆಟ್ಟ ಆಡಳಿತ ವ್ಯವಸ್ಥೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪರಿಚಯಿಸಿದ್ದಾರೆ ಎಂದು ಟೀಕಿಸಿದರು.

ರಾಜ್ಯದಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆಯೇ ಆಗುತ್ತಿಲ್ಲ. ರೈತರ ಸಮಸ್ಯೆಗಳಿಗೆ ಗಮನ ಕೊಡುತ್ತಿಲ್ಲ, ಹಿಂದುಳಿದವರು, ದಲಿತರ ಸಮಸ್ಯೆಗಳಿಗೆ ಪರಿಹಾರ ಕೊಡುವ ಬದಲಾಗಿ ಇವರೆಲ್ಲವನ್ನೂ ಮರೆಮಾಚಿದ್ದಾರೆ. ದುಡ್ಡೆಷ್ಟು ಹೊಡೆದಿರಿ. ಆಸ್ತಿ ಎಷ್ಟು ಮಾಡಿದ್ದೀರಿ. ಜನರಿಗೆ ಎಷ್ಟು ತೆರಿಗೆ ಹಾಕಿದ್ದೀರಿ. ಬೆಲೆ ಏರಿಕೆ ಎಷ್ಟು ಮಾಡಿದಿರಿ. ದಲಿತರ ಹಣ ಎಷ್ಟು ಲೂಟಿ ಮಾಡಿದ್ದೀರಿ. ಎಷ್ಟು ಜನರ ಹನಿಟ್ರಾಪ್‌ ಮಾಡಿದಿರಿ? ಫೋನ್‌ ಟ್ಯಾಪಿಂಗ್‌ ಎಷ್ಟಾಗಿದೆ. ಎಂಬ ಚರ್ಚೆ ಆಗುವಂತಾಗಿದೆ. ಇದು ಆಡಳಿತವೇ. ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಈ ಸರ್ಕಾರ ಇರಲೇಬಾರದಿತ್ತು. ಇಂಥ ಪರಿಸ್ಥಿತಿಗೆ ರಾಜ್ಯವನ್ನು ತಳ್ಳುವ ಬದಲಾಗಿ ರಾಜೀನಾಮೆ ಕೊಟ್ಟು ಆ ಕಡೆ ಹೊರಟು ಹೋಗಬೇಕಿತ್ತು ಎಂದು ತಿಳಿಸಿದರು.