ಸಿಎಂ ನಾಯಕತ್ವ ಬದಲಾವಣೆ ವಿಚಾರ : ಬಿಜೆಪಿ ಸ್ಪಷ್ಟನೆ
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಹಲವು ದಿನಗಳಿಂದ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಈ ಬಗ್ಗೆ ಮುಖಂಡರು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರು (ಸೆ.23): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನಾಯಕತ್ವದ ಕುರಿತ ವರದಿಗಳು ಸಂಪೂರ್ಣವಾಗಿ ನಿರಾಧಾರ ಮತ್ತು ಸತ್ಯಕ್ಕೆ ದೂರವಾದದ್ದು ಎಂದು ರಾಜ್ಯ ಬಿಜೆಪಿ ಸ್ಪಷ್ಟನೆ ನೀಡಿದೆ.
ಈ ಸಂಬಂಧ ಪ್ರಕಟಣೆ ನೀಡಿರುವ ರಾಜ್ಯ ಬಿಜೆಪಿ ವಕ್ತಾರ ಕ್ಯಾ.ಗಣೇಶ್ ಕಾರ್ಣಿಕ್, ‘ಕೆಲವು ಸುದ್ದಿವಾಹಿನಿಗಳು ಪದೇ ಪದೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಯಕತ್ವ ಬದಲಾವಣೆ ಆಗುತ್ತದೆ ಎಂಬ ವರದಿಗಳನ್ನು ಪ್ರಸಾರ ಮಾಡುತ್ತಿವೆ.
ಪಕ್ಷ ಈ ವರದಿಗಳನ್ನು ಖಡಾಖಂಡಿತವಾಗಿ ಅಲ್ಲಗಳೆಯುತ್ತದೆ. ಈ ವರದಿಗಳು ಸಂಪೂರ್ಣವಾಗಿ ನಿರಾಧಾರ ಮತ್ತು ಸತ್ಯ ದೂರವಾಗಿದ್ದು, ಜನರನ್ನು ದಾರಿ ತಪ್ಪಿಸುವಂಥದ್ದಾಗಿದೆ’ ಎಂದು ಸ್ಪಷ್ಟಪಡಿಸಿದ್ದಾರೆ.
ಹಲವು ದಿನಗಳಿಂದಲೂ ಕೂಡ ಸಿಎಂ ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇದ್ದು, ಈ ಬಗ್ಗೆ ಇದೀಗ ಬಿಜೆಪಿ ಮುಖಂಡರು ಸ್ಪಷ್ಟನೆ ನೀಡಿದ್ದಾರೆ.