ರಾಜ್ಯದ ಒಂಬತ್ತು ನೂತನ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಆಗಿಲ್ಲ. ಚರ್ಚೆ ಆಗಬೇಕು. ಇದಕ್ಕೂ ಮೊದಲೇ ಪ್ರತಿಭಟನೆ ಮಾಡುತ್ತಿರುವವರು ತಮ್ಮ ಆಡಳಿತದಲ್ಲಿ ಎಷ್ಟು ಅನುದಾನ ಕೊಟ್ಟಿದ್ದರು ಎಂದು ಹೇಳಲಿ. 

ಬೆಂಗಳೂರು (ಮಾ.05): ರಾಜ್ಯದ ಒಂಬತ್ತು ನೂತನ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಯಾವುದೇ ಅಂತಿಮ ತೀರ್ಮಾನ ಆಗಿಲ್ಲ. ಚರ್ಚೆ ಆಗಬೇಕು. ಇದಕ್ಕೂ ಮೊದಲೇ ಪ್ರತಿಭಟನೆ ಮಾಡುತ್ತಿರುವವರು ತಮ್ಮ ಆಡಳಿತದಲ್ಲಿ ಎಷ್ಟು ಅನುದಾನ ಕೊಟ್ಟಿದ್ದರು ಎಂದು ಹೇಳಲಿ. ಈಗ ಕೇಂದ್ರ ಸರ್ಕಾರದಿಂದಲಾದರೂ ಅನುದಾನ ಕೊಡಿಸುವ ಕೆಲಸ ಮಾಡಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರು ವಿವಿಯ ಜ್ಞಾನಭಾರತಿ ಆವರಣದಲ್ಲಿ ಪಿಎಂ-ಉಷಾ ಯೋಜನೆಯಡಿ 100 ಕೋಟಿ ರು. ವೆಚ್ಚದಲ್ಲಿ ಶೈಕ್ಷಣಿಕ ಮತ್ತು ಸಂಶೋಧನಾ ಭವನ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹಿಂದಿನ ಸರ್ಕಾರದಲ್ಲಿ ಆರಂಭವಾದ 9 ವಿವಿಗಳ ಮುಚ್ಚುವ ನಿರ್ಧಾರ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಯುತ್ತಿದೆಯಲ್ಲಾ ಪ್ರಶ್ನೆಗೆ, ಮಂಡ್ಯ, ಕೊಡಗು ಭಾಗದ ಅನೇಕ ವಿದ್ಯಾರ್ಥಿಗಳು ನಮಗೆ ಮೈಸೂರು ವಿವಿಯ ಹೆಸರಿನಲ್ಲೇ ಓದಬೇಕು ಡಾ.ರಾಧಾಕೃಷ್ಣ, ಕುವೆಂಪು ಅವರಿದ್ದ ಮೈಸೂರು ವಿವಿಯಲ್ಲಿ ಓದಿದರೆ ನಮಗೂ ಬಹಳ ಗೌರವವಿರುತ್ತದೆ ಎಂದು ಮನವಿ ಮಾಡಿದ್ದಾರೆ. ಇನ್ನು ಸಿಬ್ಬಂದಿಗಳು ತಮ್ಮ ಹಿರಿತನ ವ್ಯರ್ಥವಾಗುತ್ತದೆ ಎಂದು ನೂತನ ವಿವಿಗೆ ಆಗಮಿಸಲು ಮುಂದಾಗುತ್ತಿಲ್ಲ ಎಂದು ಹೇಳಿದರು.

3 ತಿಂಗಳಲ್ಲಿ ಪಕ್ಷ ಸಂಘಟಿಸದಿದ್ದರೆ ಅಭ್ಯರ್ಥಿ ಬದಲಾವಣೆ: ಡಿ.ಕೆ. ಶಿವಕುಮಾರ್

ಈ ಹಿನ್ನೆಲೆಯಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ವರದಿ ನೀಡಿತ್ತು. ಇದಕ್ಕಾಗಿ ಸಚಿವ ಸಂಪುಟ ಉಪ ಸಮಿತಿ ಮಾಡಲಾಗಿತ್ತು. ಈ ಸಮಿತಿಯಲ್ಲಿ ನಾನು ಇದ್ದು ಚರ್ಚೆ ಮಾಡಿದ್ದೇನೆ. ಕೆಲವರು ರಾಜಕೀಯವಾಗಿ ಹೋರಾಟ ಮಾಡಬಹುದು. ನಮಗೆ ಮಕ್ಕಳ ವಿದ್ಯಾಭ್ಯಾಸ ಮುಖ್ಯ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಬಗ್ಗೆ ಚರ್ಚೆ ಮಾಡುತ್ತೇವೆ. ಈ ವಿಚಾರವಾಗಿ ಇನ್ನು ಯಾವುದೇ ಅಂತಿಮ ತೀರ್ಮಾನ ಮಾಡಿಲ್ಲ ಎಂದರು.

ಈ ವಿವಿಗಳಿಗಾಗಿ ಬಿಜೆಪಿ ಸರ್ಕಾರ ಕೇವಲ ₹2 ಕೋಟಿ ಹಣವಿಟ್ಟಿತ್ತು. ₹2 ಕೋಟಿ ಹಣದಲ್ಲಿ ವಿವಿ ಸ್ಥಾಪನೆ ಮಾಡಲು ಆಗುವುದಿಲ್ಲ. ಇದಕ್ಕೆ ನೂರಾರು ಎಕರೆ ಜಾಗ ಬೇಕು. ಬೆಂಗಳೂರು ವಿವಿ ಮಾಡುವಾಗ ಹೇಗೆ 1,200 ಎಕರೆ ಜಮೀನು ಇಟ್ಟು ಸ್ಥಾಪಿಸಿದ್ದರೋ, ಅದೇ ರೀತಿ ಇದರಲ್ಲಿ ಅರ್ಧದಷ್ಟು ಜಾಗವನ್ನಾದರೂ ಮೀಸಲಿಡಬೇಕು. ಅಲ್ಲದೆ, ಕೇವಲ ಹೆಸರಿಗಾಗಿ ವಿವಿ ಮಾಡಲು ಆಗುವುದಿಲ್ಲ. 20-30 ಕಾಲೇಜುಗಳಿಗೆ ಒಂದು ವಿವಿ ಮಾಡಲು ಸಾಧ್ಯವಿಲ್ಲ. ಕುಲಪತಿ ಹುದ್ದೆಗಾಗಿ ವಿಶ್ವವಿದ್ಯಾಲಯ ಮಾಡಲು ಆಗುವುದಿಲ್ಲ. ಈ ಹಿಂದೆ ಈ ಪ್ರಯತ್ನ ಮಾಡಲಾಗಿತ್ತು ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಮತ್ತೆ ‘ಡಿಕೆಶಿ ಸಿಎಂ’ ಕೂಗು: ಡಿ.ಕೆ.ಶಿವಕುಮಾರ್‌ ಅವರ ಪರ ಬ್ಯಾಟ್‌ ಬೀಸಿದ ವೀರಪ್ಪ ಮೊಯ್ಲಿ

ಪ್ರತಿಭಟನೆ ಮಾಡುವವರು ಮಾಡುತ್ತಿರುತ್ತಾರೆ. ವಿವಿ ಮಾಡಿದ್ದೇವೆ ಎಂದು ಹೇಳುತ್ತಿರುವವರು ಆ ವಿವಿಗೆ ಎಷ್ಟು ಹಣ ನೀಡಿದ್ದರು ಎಂದು ಹೇಳಬೇಕಲ್ಲವೇ? ₹2 ಕೋಟಿಯಲ್ಲಿ ವಿವಿ ಮಾಡಲು ಸಾಧ್ಯವೇ? ಆ ₹2 ಕೋಟಿಯೂ ಬಿಡುಗಡೆಯಾಗಿಲ್ಲ. ಪ್ರತಿಭಟನೆ ಮಾಡುತ್ತಿರುವವರು ಕೇಂದ್ರ ಸರ್ಕಾರದಿಂದ ನೂರಾರು ಕೋಟಿ ಅನುದಾನ ತಂದು ಕೊಟ್ಟರೆ ಅಗತ್ಯವಿರುವ ಜಾಗ ಖರೀದಿ ಮಾಡಿ ವಿವಿ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದರು.