ಈ ಸರ್ಕಾರದಲ್ಲಿ ಹೊಸ ಮನೆಗಳ ನಿರ್ಮಾಣ ಮಾಡವುದನ್ನು ಬಿಡಲಿ, ನಾನಾ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳಿಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ ಎಂ.ಬಿ.ಪಾಟೀಲ.  

ವಿಜಯಪುರ(ಏ.09): ಡಬಲ್‌ ಎಂಜಿನ್‌ ಸರ್ಕಾರದಲ್ಲಿ ಬಡವರಿಗಾಗಿ ಒಂದೂ ಹೊಸ ಮನೆ ನಿರ್ಮಿಸಿಲ್ಲ. ಚುನಾವಣೆ ಬಳಿಕ ನಾವು ಮತ್ತೆ ಅಧಿಕಾರಕ್ಕೆ ಬಂದು ಬಡ ಜನರಿಗೆ ಸೂರು ಒದಗಿಸುತ್ತೇವೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ ಹೇಳಿದರು. ಬಬಲೇಶ್ವರ ತಾಲುಕಿನ ಕಣಮುಚನಾಳ, ಧನ್ಯಾಳ ಮತ್ತು ತಿಗಣಿಬಿದರಿ ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಮಾತನಾಡಿ, ಈ ಸರ್ಕಾರದಲ್ಲಿ ಹೊಸ ಮನೆಗಳ ನಿರ್ಮಾಣ ಮಾಡವುದನ್ನು ಬಿಡಲಿ, ನಾನಾ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳಿಗೂ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2013-18ರ ಅವಧಿಯಲ್ಲಿ ನಾವು ಅಧಿಕಾರದಲ್ಲಿದ್ದಾಗ 15 ಲಕ್ಷ ಮನೆಗಳನ್ನು ನಿರ್ಮಿಸಿದ್ದೇವೆ. ಜನರ ಕಲ್ಯಾಣಕ್ಕಾಗಿ ಅನ್ನ ಭಾಗ್ಯ, ಕ್ಷೀರ ಭಾಗ್ಯ ಸೇರಿದಂತೆ ಅನೇಕ ಅಭಿವೃದ್ಧಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ. ಆದರೆ, ಬೆಲೆ ಏರಿಕೆ, ನಿರುದ್ಯೋಗ ಹೆಚ್ಚಳ ಸೇರಿದಂತೆ ಅಭಿವೃದ್ಧಿ ಕುಂಠಿತವಾಗಿರುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ಹೇಳಿದರು.

Karnataka Assembly Elections 2023: ಕಾಂಗ್ರೆಸ್‌-ಬಿಜೆಪಿಯಲ್ಲಿ ಟಿಕೆಟ್‌ಗೆ ಹೈವೋಲ್ಟೇಜ್‌ ಫೈಟ್‌..!

ಅಭಿವೃದ್ಧಿ ಮಾಡಿದವರನ್ನು ಬೆಂಬಲಿಸಿ ಪ್ರೋತ್ಸಾಹಿಸಿದರೆ ಹೆಚ್ಚಿಗೆ ಕೆಲಸ ಮಾಡಲು ಹುಮ್ಮಸ್ಸು ಸಿಗುತ್ತದೆ. ಆದರೆ, ಯಾವುದೇ ಕೆಲಸ ಮಾಡದವರನ್ನು ಬೆಂಬಲಿಸಿದರೆ ಏನು ಪ್ರಯೋಜನವಿಲ್ಲ. ಜನರು ಆ ತಪ್ಪನ್ನು ಮಾಡಬಾರದು. ಕೆಲಸ ಮಾಡುವವರಿಗೆ ಗೌರವ ನೀಡಬೇಕು ಎಂದು ಅವರು ಹೇಳಿದರು.

ಕಣಮುಚನಾಳ ಗ್ರಾಮಕ್ಕೆ ಈ ಹಿಂದೆ ಸೇತುವೆ ನಿರ್ಮಾಣ ಮಾಡಿದ್ದೇನೆ. ಸಿ.ಸಿ.ರಸ್ತೆ ಮಾಡಿದ್ದೇನೆ. ಮನೆ ಮನೆಗಳಿಗೆ ಕುಡಿಯುವ ನೀರು ಸಿಗಲು ವ್ಯವಸ್ಥೆ ಮಾಡಿದ್ದೇನೆ. ಅಷ್ಟೇ ಅಲ್ಲ, ಸಮ್ಮಿಶ್ರ ಸರ್ಕಾರ ಅವಧಿಯಲ್ಲಿ ರೇವಣಸಿದ್ಧೇಶ್ವರ ಏತ ನೀರಾವರಿ ಯೋಜನೆಗೆ .250 ಕೋಟಿ ಅನುದಾನ ಮೀಸಲಿಟ್ಟು ಇದೇ ಯೋಜನೆಯಡಿ ಈ ಭಾಗದ ಹತ್ತಾರು ಗ್ರಾಮಗಳಿಗೆ ಕುಡಿಯುವ ನೀರು ಪೂರೈಸಲು ಕ್ರಮ ಕೈಗೊಂಡಿದ್ದೇನೆ. ಸಣ್ಣ ಗ್ರಾಮ, ದೊಡ್ಡ ಗ್ರಾಮ ಎಂದು ಯಾವುದೇ ಭೇದ-ಭಾವವಿಲ್ಲದೆ ಅಭಿವೃದ್ಧಿ ಮಾಡಿದ್ದೇನೆ. ಮುಂದೆಯೂ ಅಭಿವೃದ್ಧಿ ಮಾಡುತ್ತೇನೆ ಎಂದು ಎಂ.ಬಿ.ಪಾಟೀಲ ತಿಳಿಸಿದರು.

ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.