‘ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಆದಾಯ ತೆರಿಗೆ ಇಲಾಖೆಯಿಂದ (ಐಟಿ) ದಾಳಿ ನಡೆಯುವುದಿಲ್ಲ. ಇನ್ನು ಪಂಚರಾಜ್ಯ ಚುನಾವಣೆಗೆ ರಾಜ್ಯದಿಂದ ಹಣ ಕಳುಹಿಸಲಾಗುತ್ತಿದೆ ಎಂಬ ಹಾದಿ ಬೀದಿಯಲ್ಲಿ ಹೋಗುವವರ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.  

ಬೆಂಗಳೂರು (ಅ.14): ‘ರಾಜಕೀಯ ಉದ್ದೇಶವಿಲ್ಲದೆ ದೇಶದಲ್ಲಿ ಆದಾಯ ತೆರಿಗೆ ಇಲಾಖೆಯಿಂದ (ಐಟಿ) ದಾಳಿ ನಡೆಯುವುದಿಲ್ಲ. ಇನ್ನು ಪಂಚರಾಜ್ಯ ಚುನಾವಣೆಗೆ ರಾಜ್ಯದಿಂದ ಹಣ ಕಳುಹಿಸಲಾಗುತ್ತಿದೆ ಎಂಬ ಹಾದಿ ಬೀದಿಯಲ್ಲಿ ಹೋಗುವವರ ಆರೋಪಗಳಿಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮತ್ತೆ ಬೆಂಗಳೂರಿನಲ್ಲಿ ಐಟಿ ದಾಳಿ ಆರಂಭವಾಗಿದೆ. 

Add Asianetnews Kannada as a Preferred SourcegooglePreferred

ಇದರ ಹಿಂದೆ ರಾಜಕೀಯ ಉದ್ದೇಶ ಇದೆಯೇ ಎಂಬ ಪ್ರಶ್ನೆಗೆ, ‘ರಾಜಕೀಯ ಇಲ್ಲದೆ ಯಾವುದೇ ಐಟಿ ದಾಳಿಯೂ ನಡೆಯುವುದಿಲ್ಲ’ ಎಂದರು. ಪಂಚರಾಜ್ಯಗಳ ಚುನಾವಣೆಗೆ ಕರ್ನಾಟಕದಿಂದ ಹಣ ಕಳುಹಿಸಲಾಗುತ್ತಿದೆ ಎಂಬ ಮಾಜಿ ಸಚಿವ ಅಶ್ವಥ್ ನಾರಾಯಣ ಹೇಳಿಕೆಗೆ, ‘ಹಾದಿ ಬೀದಿಯಲ್ಲಿ ಹೋಗುವವರ ಮಾತಿಗೆ ನಾನು ಉತ್ತರಿಸುವುದಿಲ್ಲ’ ಎಂದು ಟಾಂಗ್ ನೀಡಿದರು.

ನಾನೂ ಸಿಎಂ ಸ್ಥಾನದ ಆಕಾಂಕ್ಷಿ: ಸಚಿವ ಶರಣಬಸಪ್ಪ ದರ್ಶನಾಪುರ ಹೊಸ ಬಾಂಬ್‌

ಕೆಂಪಣ್ಣ ಆಂತಕ ಪಡಬೇಕಿಲ್ಲ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ನಮ್ಮ ಪರಿಸ್ಥಿತಿ ರೈತರಿಗಿಂತ ಶೋಚನೀಯವಾಗಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ‘ಬಿಲ್ ಪಾವತಿ ವಿಚಾರದಲ್ಲಿ ಕೆಂಪಣ್ಣ ಆತಂಕ ಪಡುವ ಅಗತ್ಯವಿಲ್ಲ. ಏನಾದರೂ ಇದ್ದರೆ ಬಂದು ನಮ್ಮ ಬಳಿ ಮಾತನಾಡಲಿ. ನಾವು ನ್ಯಾಯ ಒದಗಿಸುತ್ತೇವೆ ಎಂದರು. ಕೆಂಪಣ್ಣ ಮನವಿ ಮೇರೆಗೆ ನಾವು ತನಿಖೆ ಪಕ್ಕಕ್ಕಿಟ್ಟು, ಆದ್ಯತೆ ಮೇರೆಗೆ ಕಾಮಗಾರಿಗಳ ಶೇ.60-70 ರಷ್ಟು ಹಣ ಬಿಡುಗಡೆ ಮಾಡಿದ್ದೇವೆ. ಬಿಲ್ ಪಾವತಿ ಸಮಯದಲ್ಲಿ ಜಿಎಸ್‌ಟಿ ಕೂಡ ಪಾವತಿ ಮಾಡಬೇಕು. ಹೀಗಾಗಿ ತನಿಖೆ ವರದಿ ಬರುವ ಮುನ್ನವೇ ನಾವು ಸುಮಾರು ಮುಕ್ಕಾಲು ಭಾಗ ಹಣ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.

ಮಹಾರಾಷ್ಟ್ರದ ಗಡಿ ಕ್ಯಾತೆ ನಾವು ಸಹಿಸಲ್ಲ: ‘ಮಹಾರಾಷ್ಟ್ರ ಹಾಗೂ ರಾಜ್ಯದ ಗಡಿ ವಿಚಾರದಲ್ಲಿ ಅನಗತ್ಯ ಕ್ಯಾತೆ ತೆಗೆಯುವುದನ್ನು ನಾವು ಸಹಿಸುವುದಿಲ್ಲ. ಮಹಾರಾಷ್ಟ್ರವು ಸುಮ್ಮನೆ ಅಶಾಂತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದು, ನಾವು ಅದಕ್ಕೆ ಅವಕಾಶ ನೀಡಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಮ್ಮ ರಾಜ್ಯದಲ್ಲಿ ನಾವು ಯೋಜನೆಗಳನ್ನು ಮಾಡುತ್ತೇವೆ, ಅವರ ರಾಜ್ಯದಲ್ಲಿ ಅವರು ಮಾಡಲಿ. ಸುಮ್ಮನೆ ಅಶಾಂತಿ ಮೂಡಿಸುವ ಪ್ರಯತ್ನ ಮಾಡುವುದು ಬೇಡ. ಅದನ್ನು ಅವರು ಮಾಡುತ್ತಿದ್ದು, ನಾವು ಅದಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಬಿಜೆಪಿ ಕೊಟ್ಟ ಅನುದಾನವೆಷ್ಟು: ಸಚಿವ ರಾಮಲಿಂಗಾರೆಡ್ಡಿ

ಕಾವೇರಿ ಆದೇಶದ ಬಗ್ಗೆ ಮೇಲ್ಮನವಿ ಸಲ್ಲಿಸುತ್ತೇವೆ: ನಿತ್ಯ 3 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸುವಂತೆ ಪ್ರಾಧಿಕಾರ ನೀಡಿರುವ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿ, ‘ಕಾವೇರಿ ನೀರಿನ ಹಂಚಿಕೆ ವಿಚಾರವಾಗಿ ಮತ್ತೊಮ್ಮೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸುತ್ತೇವೆ. ಬೆಂಗಳೂರಿನ ಸುತ್ತಮುತ್ತ ಮಳೆ ಸುರಿದಿರುವ ಪರಿಣಾಮ ಬಿಳಿಗುಂಡ್ಲುವಿಗೆ ಹರಿಯುವ ನೀರಿನ ಪ್ರಮಾಣ ಅಲ್ಪ ಪ್ರಮಾಣದಲ್ಲಿ ಸರಿದೂಗಿದೆ. ಮಳೆ ಸುರಿದಿದ್ದು ಎರಡು ಮೂರು ದಿನ ಮಾತ್ರ. 200ಕ್ಕೂ ಹೆಚ್ಚು ತಾಲ್ಲೂಕುಗಳಲ್ಲಿ ಬರ ಪರಿಸ್ಥಿತಿ ಇದ್ದು, ಸಂಕಷ್ಟದಲ್ಲಿ ಇದ್ದೇವೆ. ಈ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು’ ಎಂದು ಹೇಳಿದರು.