ಗ್ಯಾರಂಟಿಗಳಿಂದ ಯಾರೂ ಸೋಮಾರಿಗಳಾಗಿಲ್ಲ. ಹೆಣ್ಣುಮಕ್ಕಳು ಉಚಿತವಾಗಿ ಬಸ್ಸಿನಲ್ಲಿ ಓಡಾಡಿದರೆ ಸೋಮಾರಿಗಳಾಗುತ್ತಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಬೆಂಗಳೂರು : ರಂಭಾಪುರಿ ಮಠದ ಸ್ವಾಮೀಜಿಗಳು ಗ್ಯಾರಂಟಿ ಯೋಜನೆಗಳಿಂದಾಗಿ ಜನ ಸೋಮಾರಿಗಳಾಗಿದ್ದಾರೆ ಎಂದು ಯಾವ ಹಿನ್ನೆಲೆ ಅಥವಾ ಸಂದರ್ಭದಲ್ಲಿ ಹೇಳಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ಗ್ಯಾರಂಟಿಗಳಿಂದ ಯಾರೂ ಸೋಮಾರಿಗಳಾಗಿಲ್ಲ. ಹೆಣ್ಣುಮಕ್ಕಳು ಉಚಿತವಾಗಿ ಬಸ್ಸಿನಲ್ಲಿ ಓಡಾಡಿದರೆ ಸೋಮಾರಿಗಳಾಗುತ್ತಾರೆಯೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದೇ ವೇಳೆ ಗೃಹ ಲಕ್ಷ್ಮೀ ಯೋಜನೆಯಡಿ ಮನೆಯೊಡತಿಗೆ 2,000 ರು. ನೀಡಿದರೆ ಅವರು ಆರ್ಥಿಕವಾಗಿ ಸಬಲರಾಗುತ್ತಾರೆ. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುತ್ತಾರೆ. ಅವರು ಮಕ್ಕಳನ್ನು ಓದಿಸಬಾರದೇ? ಇದರಿಂದ ಸೋಮಾರಿಗಳಾಗುತ್ತಾರೆಯೇ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗುತ್ತದೆ. ಗೃಹಲಕ್ಷ್ಮಿ ಯೋಜನೆಯಡಿ 2000 ರು. ಒದಗಿಸಿದರೆ ಅವರು ಮಕ್ಕಳನ್ನು ಓದಿಸುತ್ತಾರೆ. ಇದರಿಂದ ಮಹಿಳೆಯರು ಸಬಲರಾಗುತ್ತಾರೆಯೇ ವಿನಃ ಸೋಮಾರಿ ಆಗಲು ಹೇಗೆ ಸಾಧ್ಯ? ಅಂಬೇಡ್ಕರ್ ಅವರು ನಮ್ಮ ದೇಶಕ್ಕೆ ದೊರೆತಿರುವ ಸ್ವಾತಂತ್ರ್ಯ ಸಾರ್ಥಕವಾಗಬೇಕಾದರೆ ಪ್ರತಿಯೊಬ್ಬರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು ಎಂದಿದ್ದರು. ಅವರು ಮೇಧಾವಿಗಳಾಗಿದ್ದು, ಅವರು ಹೇಳಿದ್ದನ್ನು ಅಲ್ಲಗಳೆಯಲಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಇನ್ನು ಗ್ಯಾರಂಟಿಗಳನ್ನು ನಮ್ಮ ಪಕ್ಷ ಸುದೀರ್ಘವಾಗಿ ಚರ್ಚೆ ಮಾಡಿ ಸಮಾಜದ ಬಡವರ ಪರಿಸ್ಥಿತಿಯನ್ನು ಉತ್ತಮಪಡಿಸಬಹುದು ಎಂಬ ಕಾರಣಕ್ಕಾಗಿಯೇ ಜಾರಿ ಮಾಡಿದೆ. ರಂಭಾಪುರಿ ಸ್ವಾಮೀಜಿ ಅವರು ಯಾವ ಅರ್ಥದಲ್ಲಿ ಆ ರೀತಿ ಹೇಳಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಎಂದರು.

- ಉಚಿತ ಸ್ಕೀಂನಿಂದ ಜನ ಸೋಮಾರಿ ಎಂದಿದ್ದ ರಂಭಾಪುರಿ ಶ್ರೀ

- ಶ್ರೀಗಳ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ

- ಬಸ್ಸಲ್ಲಿ ಸ್ತ್ರೀಯರು ಫ್ರೀ ಆಗಿ ಓಡಾಡಿದ್ರೆ ಸೋಮಾರಿ ಆಗ್ತಾರೆಯೇ?

- 2000 ರು. ಗೃಹ ಲಕ್ಷ್ಮೀ ಸ್ಕೀಂನೀಂದ ಮಹಿಳೆಯರ ಸಬಲೀಕರಣ

- ಮಕ್ಕಳ ಶಿಕ್ಷಣಕ್ಕೂ ಗೃಹಲಕ್ಷ್ಮಿ ಯೋಜನೆ ಹಣದಿಂದ ಅನುಕೂಲ

- ಎಲ್ಲರ ಸಬಲೀಕರಣವೂ ಗ್ಯಾರಂಟಿ ಯೋಜನೆಯ ಉದ್ದೇಶ