ಬಿಜೆಪಿ, ಜೆಡಿಎಸ್‌ ಸ್ಪರ್ಧೆ ಡೌಟ್‌: ಕಾಂಗ್ರೆಸ್ಸಿಗೇ ಮೂರೂ ಸ್ಥಾನ ಲಭಿಸುವ ಸಾಧ್ಯತೆ, ಉಮೇದುವಾರಿಕೆಗೆ ಜೂ.30 ಕೊನೆ ದಿನ, 30ರಂದು ಮತದಾನ, ಅದೇ ದಿನ ಎಣಿಕೆ

ಬೆಂಗಳೂರು(ಜೂ.13): ವಿಧಾನಸಭೆಯಿಂದ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯುವ ಉಪಚುನಾವಣೆಗೆ ಮಂಗಳವಾರ ಅಧಿಸೂಚನೆ ಪ್ರಕಟವಾಗಲಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ತಿಂಗಳ 20ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, 23ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ. ಜೂ.30ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆಯು ನಡೆಯಲಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಪ್ರಕಟವಾಗಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮೂರು ಸ್ಥಾನಗಳು ಬೇರೆ ಬೇರೆ ಅವಧಿಯಲ್ಲಿ ಮುಕ್ತಾಯಗೊಳ್ಳುವುದರಿಂದ ಪ್ರತ್ಯೇಕವಾಗಿ ಮೂರು ಅಧಿಸೂಚನೆಯನ್ನು ಪ್ರಕಟಿಸಲಾಗುತ್ತದೆ. ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ ಕ್ರಮ ಕೈಗೊಳ್ಳಲಿದ್ದು, ಒಂದೇ ದಿನ ಮೂರು ಸ್ಥಾನಗಳಿಗೆ ಪ್ರತ್ಯೇಕ ಚುನಾವಣೆ ನಡೆಯಲಿದೆ. ಸಂಖ್ಯಾಬಲದ ದೃಷ್ಟಿಯಿಂದ ಆಡಳಿತಾರೂಢ ಕಾಂಗ್ರೆಸ್‌ ಪಕ್ಷಕ್ಕೇ ಮೂರು ಸ್ಥಾನಗಳು ಲಭಿಸುವುದು ನಿಶ್ಚಿತವಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಯನ್ನು ಕಣಕ್ಕಿಳಿಸದಿರುವುದಕ್ಕೆ ಜೆಡಿಎಸ್‌ ತೀರ್ಮಾನಿಸಿದೆ. ಬಿಜೆಪಿ ಕೂಡ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನ. ಹೀಗಾಗಿ ಅವಿರೋಧ ಆಯ್ಕೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಭೂಸಾರಿಗೆ ಪ್ರಾಧಿಕಾರ ವಿಧೇಯಕಕ್ಕೆ ಪರಿಷತ್ತಲ್ಲೂ ಒಪ್ಪಿಗೆ

ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಬಾಬುರಾವ್‌ ಚಿಂಚನಸೂರು, ಆರ್‌.ಶಂಕರ್‌ ಮತ್ತು ಲಕ್ಷ್ಮಣ್‌ ಸವದಿ ಅವರು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಂಬಂಧ ಪಕ್ಷ ತೊರೆದು ರಾಜೀನಾಮೆ ನೀಡಿದ ಈ ಹಿನ್ನೆಲೆಯಲ್ಲಿ ಉಪ ಚುನಾವಣೆ ಘೋಷಣೆಯಾಗಿದೆ.

ಬಾಬುರಾವ್‌ ಚಿಂಚನಸೂರು ಅವಧಿಯು 2024ರ ಜೂ.17ರವರೆಗೆ ಇತ್ತು. ಅಂತೆಯೇ ಆರ್‌.ಶಂಕರ್‌ ಅವಧಿಯು 2026ರ ಜೂ.30ಕ್ಕೆ ಮುಕ್ತಾಯವಾಗುತ್ತಿದ್ದು, ಲಕ್ಷ್ಮಣ್‌ ಸವದಿ ಅವಧಿಯು 2028ರ ಜೂ.14ರವರೆಗೆ ಇತ್ತು.