ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿರುವ ತಾರತಮ್ಯ ನಿವಾರಣೆಗೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರತಿಕ್ರಿಯಿಸಿದರು.

ಬೆಂಗಳೂರು (ಮಾ.29): ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಬೆಳವಣಿಗೆ, ನೀರಾವರಿ ಸೌಲಭ್ಯ ಮತ್ತು ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಮಾಡುತ್ತಿರುವ ತಾರತಮ್ಯ ನಿವಾರಣೆಗೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್‌ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಪ್ರತಿಕ್ರಿಯಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಉತ್ತರ ಕರ್ನಾಟಕ ಅಭಿವೃದ್ಧಿ ಕುರಿತು ಅರವಿಂದ್ ಬೆಲ್ಲದ್‌ ಸಾಮಾಜಿಕ ಜಾಲತಾಣದಲ್ಲಿ ಮಾಡಿರುವ ಪೋಸ್ಟ್‌ಗೆ ಉತ್ತರಿಸಿರುವ ಎಂ.ಬಿ.ಪಾಟೀಲ್‌, ಕೇಂದ್ರ ಸರ್ಕಾರ ರಾಜ್ಯಕ್ಕೆ ಬರುತ್ತಿರುವ ಸೆಮಿಕಂಡಕ್ಟರ್ ಯೋಜನಾ ಪ್ರಸ್ತಾವನೆಗಳಿಗೆ ಆದ್ಯತೆ ಮೇರೆಗೆ ಒಪ್ಪಿಗೆ ನೀಡುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ, ನೀರಾವರಿ ಸೌಲಭ್ಯ ಹಾಗೂ ಉತ್ಕೃಷ್ಟ ಸಂಸ್ಥೆಗಳ ಸ್ಥಾಪನೆ ವಿಚಾರದಲ್ಲೂ ಕೇಂದ್ರ ತಾರತಮ್ಯ ತೋರುತ್ತಿದೆ. ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕಳಕಳಿ ವ್ಯಕ್ತಪಡಿಸಿರುವ ಅರವಿಂದ ಬೆಲ್ಲದ್‌ ಅವರು ಕೇಂದ್ರದ ತಾರತಮ್ಯದ ಬಗ್ಗೆ ಗಮನಹರಿಸಬೇಕು. ಅದಕ್ಕೆ ನಮ್ಮ ಸಹಕಾರ ಇರಲಿದೆ ಎಂದು ತಿರುಗೇಟು ನೀಡಿದರು.

ರಾಜ್ಯದಲ್ಲಿ 59 ಅತೀ ಹಿಂದುಳಿದ ತಾಲೂಕುಗಳಿದ್ದು, ಎಲ್ಲವೂ ತಾಲೂಕುಗಳು ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕ ಭಾಗದ್ದಾಗಿವೆ. ಅಲ್ಲಿ ನೀರಾವರಿ ಸೌಲಭ್ಯ ಒದಗಿಸಲು ಎಲ್ಲ ಸರ್ಕಾರಗಳು ಪ್ರಯತ್ನಿಸಿವೆ. ಉತ್ತರ ಕರ್ನಾಟಕದಲ್ಲಿಯೂ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳಿದ್ದು ಇನ್ನೂ ಹೆಚ್ಚಿನ ಸಂಸ್ಥೆಗಳಿಗೆ ಅವಕಾಶಗಳಿವೆ. ನಮ್ಮ ಸರ್ಕಾರ ಅತೀ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದರು.

ನಮ್ಮತ್ತಲೂ ಗಮನಹರಿಸಬೇಕು

ಕೈಗಾರಿಕಾ ವಿಚಾರದಲ್ಲಿ ಸರ್ಕಾರ ಎಲ್ಲ ಸೌಲಭ್ಯಗಳನ್ನೂ ಒದಗಿಸಲಿದೆ. ಆದರೆ, ಸೆಮಿಕಂಡಕ್ಟರ್‌ ಉತ್ಪಾದನಾ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ನೆರವಾಗಬೇಕು. ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡುತ್ತಿದ್ದು, ನಮ್ಮತ್ತಲೂ ಗಮನಹರಿಸಬೇಕು. ಇದಕ್ಕಾಗಿ ಅರವಿಂದ ಬೆಲ್ಲದ್‌ ನೆರವಾಗಬೇಕು. ತಮ್ಮ ಪಕ್ಷದ ಸಂಸದರು ಮತ್ತು ಹಿರಿಯ ನಾಯಕರ ನಿಯೋಗವನ್ನು ದೆಹಲಿಗೆ ಕೊಂಡೊಯ್ದು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದರು.