Asianet Suvarna News Asianet Suvarna News

Karnataka election result 2023: ಕಾಂಗ್ರೆಸ್‌ 'ಸಿಎಂ' ಕುರ್ಚಿಗೆ ಕುಸ್ತಿ! ಶಾಸಕಾಂಗ ಸಭೆಯಲ್ಲಿ ಒನ್‌ಲೈನ್‌ ನಿರ್ಣಯ ಪಾಸ್‌

ಕಾಂಗ್ರೆಸ್‌ ಮುಖ್ಯಮಂತ್ರಿ ಆಯ್ಕೆ ವಿಚಾರಕ್ಕೆ ನಡೆಸಲಾದ ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ ಎಂದು ನಿರ್ಣಯ ಕೈಗೊಳ್ಳಲಾಗಿದೆ.

Online resolution of Legislative Assembly for selection of Karnataka Congress Chief minister sat
Author
First Published May 14, 2023, 8:57 PM IST

ಬೆಂಗಳೂರು (ಮೇ 14): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್‌ ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರವಾಗಿ ಇಬ್ಬರು ನಾಯಕರು ಒಮ್ಮತದ ನಿರ್ಧಾರಕ್ಕೆ ಬಾರದ ಹಿನ್ನೆಲೆಯಲ್ಲಿ ಹೈಕಮಾಂಡ್‌ ನಾಯಕರು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ನಿರ್ಣಯ ಕೈಗೊಂಡು ಶಾಸಕಾಂಗ ಸಭೆಯನ್ನು ಪೂರ್ಣಗೊಳಿಸಲಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಿರ್ಣಯಗಳು: ರಾಜ್ಯದ ಆರುವರೆ ಕೋಟಿ ಕನ್ನಡಿಗರು ಕಾಂಗ್ರೆಸ್ ಪಕ್ಷದ ಮೇಲೆ ಇಟ್ಟಿರುವ ನಂಬಿಕೆ ಹಾಗೂ ಪಕ್ಷಕ್ಕೆ ನೀಡಿರುವ ಪ್ರಚಂಡ ಬಹುಮತಕ್ಕೆ ಪಕ್ಷವು ಮೊದಲ ಶಾಸಕಾಂಗ ಪಕ್ಷ ಸಭೆಯಲ್ಲಿ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತದೆ. ಕರ್ನಾಟಕ ರಾಜ್ಯಕ್ಕೆ ಸಿಕ್ಕಿರುವ ಈ ಗೆಲುವು ಸ್ವಾಭಿಮಾನ ಹಾಗೂ ಬ್ರಾಂಡ್ ಕರ್ನಾಟಕದ ಮರುಸ್ಥಾಪನೆಯ ಸೌಹಾರ್ದತೆಗೆ ಸಿಕ್ಕಿರುವ ಜಯವಾಗಿದೆ.

Karnataka election result 2023: ವೀಕ್ಷಕರ ವರದಿ ಆಧರಿಸಿ ಹೈಕಮಾಂಡ್‌ನಿಂದ ಸಿಎಂ ಆಯ್ಕೆ! ನಾಳೆಯೇ ತೀರ್ಮಾನ

ಭಗವಾನ್ ಬಸವಣ್ಣನವರಿಂದ ಅಕ್ಕಮಹಾದೇವಿಯವರವರೆಗೆ, ಕನಕದಾಸರು, ಮಹರ್ಷಿ ವಾಲ್ಮೀಕಿಗಳು, ಶ್ರೀ ನಾರಾಯಣ ಗುರುಗಳು, ಸಂತ ಸೇವಾಲಾಲರು, ಶಿಶುನಾಳ ಶರೀಫರು, ಕೆಂಪೇಗೌಡರು, ಬಾಬಾಸಾಹೇಬ್ ಅಂಬೇಡ್ಕರ್ ಅವರಿಂದ ಕುವೆಂಪುರವರವರೆಗೂ ಇತರೆ ಎಲ್ಲ ಮಹನೀಯರ ಮಾರ್ಗದರ್ಶನದಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಜಾಪ್ರಭುತ್ವ, ಸಮಾನತೆ, ಸಾಮಾಜಿಕ ನ್ಯಾಯ, ಸಮಾಜ ಸುಧಾರಣೆ, ಪಾರದರ್ಶಕ ಹಾಗೂ ದಕ್ಷ ಆಡಳಿತವನ್ನು ನಡೆಸಿಕೊಂಡು ಬರಲಾಗಿದೆ. 2023ರ ಮೇ 13 ರಂದು ಪ್ರಕಟವಾಗಿರುವ ಐತಿಹಾಸಿಕ ಫಲಿತಾಂಶದಲ್ಲಿ ರಾಜ್ಯದ ಒಳಗೆ ಹಾಗೂ ಹೊರಗೆ ದ್ವೇಷ ಹಾಗೂ ವಿಭಜನೆ ರಾಜಕೀಯದಿಂದಾಗಿ ಅಪಾಯದಲ್ಲಿ ಸಿಲುಕಿರುವ ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ರಕ್ಷಣೆಗೆ ಮತ್ತೊಮ್ಮೆ ಕರ್ನಾಟಕ ಮತ್ತೊಮ್ಮೆ ಶಕ್ತಿ ತುಂಬಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷವು ಒಕ್ಕೊರಲಿನಿಂದ ಪಕ್ಷಕ್ಕೆ ಹಾದರ ಸ್ತಂಭವಾಗಿ ಮಾರ್ಗದರ್ಶನ ನೀಡುತ್ತಿರುವ ಶ್ರೀಮತಿ ಸೋನಿಯಾ ಗಾಂಧಿ ಅವರಿಗೆ ಹೃದಯಪೂರ್ವಕ ಧನ್ಯವಾದಗಳು ತಿಳಿಸಿತು. ಕರ್ನಾಟಕ ರಾಜ್ಯ ಚುನಾವಣೆಯಲ್ಲಿ ಅವರತವಾಗಿ ಪ್ರಚಾರ ಮಾಡುತ್ತಾ, ಸೂಕ್ತ ತಂತ್ರಗಾರಿಕೆ ಹಾಗೂ ಮಾರ್ಗದರ್ಶನಗಳನ್ನು ನೀಡಿಕೊಂಡು ಬಂದಿರುವ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಧನ್ಯವಾದಗಳು ತಿಳಿಸಿತು.

ಈ ಬಾರಿ ಚುನಾವಣೆಯಲ್ಲಿ ನಿರಂತರವಾಗಿ ಪ್ರಚಾರ ಕಾರ್ಯಕ್ರಮಗಳನ್ನು ನಡೆಸುತ್ತಾ ರಾಜ್ಯದ ಜನರಿಗೆ ಪಕ್ಷದ ಐದು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಿ ಚುನಾವಣೆಯ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿರುವ ಶ್ರೀಯುತ ರಾಹುಲ್ ಗಾಂಧಿಯವರಿಗೆ ಧನ್ಯವಾದಗಳು ತಿಳಿಸಲಾಗಿದೆ. 2022ರ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ರಾಹುಲ್ ಗಾಂಧಿಯವರು ನಡೆಸಿದ ಭಾರತ್ ಜೋಡೋ ಯಾತ್ರೆ ಕರ್ನಾಟಕ ರಾಜ್ಯದಲ್ಲಿ 21 ದಿನಗಳ ಕಾಲ 600 ಕಿಲೋಮೀಟರ್ ದೂರದಷ್ಟು ಪಾದಯಾತ್ರೆ ಮಾಡಲಾಗಿತ್ತು. ಈ ಮೂಲಕ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ, ಅಕ್ರಮಗಳ ಬಗ್ಗೆ ಜನರಿಗೆ ತಲುಪಿಸಿ ಚುನಾವಣಾ ಪ್ರಚಾರವನ್ನು ಆರಂಭಿಸಲಾಗಿತ್ತು.

ಕಾಂಗ್ರೆಸ್ ಶಾಸಕಾಂಗ ಪಕ್ಷವು ಈ ಬಾರಿ ಚುನಾವಣೆಯಲ್ಲಿ ಬಹಳ ಪ್ರಭಾವಶಾಲಿ ಪ್ರಚಾರ ಹಾಗೂ ರೋಡ್ ಶೋ ಗಳನ್ನು ನಡೆಸಿ ಆ ಮೂಲಕ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಪರಿಣಾಮಕಾರಿಯಾಗಿ ಮುಟ್ಟಿಸಿದ ಶ್ರೀಮತಿ ಪ್ರಿಯಾಂಕ ಗಾಂಧಿ ವಾದ್ರ ಅವರಿಗೂ ಧನ್ಯವಾದ ಅರ್ಪಿಸಿದೆ. ಈ ಚುನಾವಣೆಯಲ್ಲಿ ಅವಿರತ ಶ್ರಮ, ಬದ್ಧತೆಯ ಮೂಲಕ ಪಕ್ಷವನ್ನು ಸಂಘಟಿಸಿದ ಕೆಪಿಸಿಸಿ ಅಧ್ಯಕ್ಷರಾದ ಶ್ರೀಯುತ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ನಾಯಕರ ಶ್ರೀ ಸಿದ್ದರಾಮಯ್ಯ ಹಾಗೂ ಇಡೀ ಕಾಂಗ್ರೆಸ್ ತಂಡಕ್ಕೆ ಧನ್ಯವಾದಗಳನ್ನು ತಿಳಿಸುತ್ತದೆ. ಇಬ್ಬರು ನಾಯಕರು ಹಗಲಿರಳು ಪ್ರಜಾಧ್ವನಿ ಯಾತ್ರೆ ಮೂಲಕ ರಾಜ್ಯದ ಮೂಲೆ ಮೂಲೆ ಪ್ರವಾಸ ಮಾಡಿ ಪ್ರತಿಯೊಂದು ವರ್ಗದ ಜನರನ್ನು ತಲುಪಿ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಲು ಶ್ರಮಿಸಿದ್ದಾರೆ.

ಸಿಎಂ ಕುರ್ಚಿ ಫೈಟ್‌ನಲ್ಲಿ ಒಕ್ಕಲಿಗರ ಒಗ್ಗಟ್ಟು: ಪ್ರಬಲ ಸಮುದಾಯಗಳ ಪಟ್ಟುಗಳಿಗೆ ಥರಗುಟ್ಟಿದ ಹೈಕಮಾಂಡ್‌

ಕಾಂಗ್ರೆಸ್ ಶಾಸಕಾಂಗ ಪಕ್ಷ ವೀಕ್ಷಕರು, ಸಂಯೋಜಕರು ಹಾಗೂ ಎಲ್ಲಾ ಎಐಸಿಸಿ ತಂಡಕ್ಕೆ ಧನ್ಯವಾದಗಳು ಅರ್ಪಿಸಿದೆ. ಈ ಸಂದರ್ಭದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಹಗರಣಗಳು, ಅನ್ಯಾಯಗಳ ವಿರುದ್ಧ ಧ್ವನಿ ಎತ್ತಿ ಹೋರಾಡಿದ ರಾಜ್ಯದ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳಿಗೆ ಶಾಸಕಾಂಗ ಪಕ್ಷವು ಧನ್ಯವಾದಗಳು. ಇದೇ ಸಮಯದಲ್ಲಿ ಪಕ್ಷದ ಪದಾಧಿಕಾರಿಗಳು, ಅಧಿಕಾರವಧಿ ಮುಗಿಸಿರುವ ಕಾಂಗ್ರೆಸ್ ಶಾಸಕರು, ಪಕ್ಷದ ಪ್ರಮುಖ ಘಟಕಗಳು, ವಿಭಾಗಗಳು, ವರುಣ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಪರಿಶ್ರಮವಿಲ್ಲದಿದ್ದರೆ ಈ ಗೆಲವು ಸಾಧ್ಯವಾಗುತ್ತಿರಲಿಲ್ಲ. ಹೀಗಾಗಿ ಕಾಂಗ್ರೆಸ್ ಶಾಸಕಾಂಗ ಪಕ್ಷವು ಇವರಿಗೆ ಹೃತ್ಪೂರ್ವಕ ಧನ್ಯವಾದ ತಿಳಿಸಲಿದೆ. ಈ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕ ರಾಜ್ಯದ ಜನರಿಗೆ ಸಿಕ್ಕಿರುವ ಗೆಲುವು ಕಾಂಗ್ರೆಸ್ ಸಿದ್ಧಾಂತವನ್ನು ತನುಮನದಲ್ಲಿ ಅಳವಡಿಸಿಕೊಂಡಿರುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಯಕರಿಗೆ ಸಂಭ್ರಮವನ್ನು ತಂದುಕೊಟ್ಟಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷವು ಕನ್ನಡ ನಾಡಿನ ಜನರಿಗೆ ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತವನ್ನು ನೀಡಲು ಪರಿಶ್ರಮ ಹಾಗೂ ಒಗ್ಗಟ್ಟಿನ ಮೂಲಕ ಕೆಲಸ ಮಾಡಲು ನಿರ್ಣಯ ಕೈಗೊಳ್ಳಲಾಗಿದೆ. ರಾಜ್ಯದ 6.5 ಕೋಟಿ ಕನ್ನಡಿಗರ ಹಿತ ರಕ್ಷಣೆ ಹಾಗೂ ಸೇವೆ ನಮ್ಮ ಆದ್ಯ ಕರ್ತವ್ಯವಾಗಿದ್ದು, ಸಾಮಾಜಿಕ ನ್ಯಾಯ ಮತ್ತು ಆರ್ಥಿಕ ಸಮಾನತೆ ನಮ್ಮ ಸರ್ಕಾರದ ನೀತಿಗಳ ಮೂಲ ಉದ್ದೇಶವಾಗಿರಲಿದೆ. ಜನರ ಕಲ್ಯಾಣಕ್ಕಾಗಿ ಸರ್ಕಾರವು ಮುಂದಿನ ದಿನಗಳಲ್ಲಿ ರೂಪಿಸುವ ಪ್ರತಿಯೊಂದು ನೀತಿಗಳು ರಾಜ್ಯದ ಪ್ರತಿಯೊಬ್ಬ ವ್ಯಕ್ತಿಯ ಹಾಗೂ ಕುಟುಂಬದ ಜೀವನವನ್ನು ಸುಧಾರಿಸುವ ನಿಟ್ಟಿನಲ್ಲಿ ಕೈಗೊಳ್ಳಲು ನಿರ್ಣಯಿಸಲಾಗಿದೆ. ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಿದೆ. ಕನ್ನಡ ನಾಡಿನ ಸಂಸ್ಕೃತಿ, ಭಾಷೆ ಹಾಗೂ ಭವ್ಯ ಪರಂಪರೆಯನ್ನು ರಕ್ಷಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮರು ಸ್ಥಾಪಿಸಲು ಹಾಗೂ ಭಾರತದಲ್ಲಿ ಕರ್ನಾಟಕ ರಾಜ್ಯ ಶಾಂತಿ, ಪ್ರಗತಿ ಹಾಗೂ ಸೌಹಾರ್ದತೆ ವಿಚಾರಗಳಲ್ಲಿ ಅಗ್ರ ರಾಜ್ಯವನ್ನಾಗಿ ಮಾಡುವುದು ನಮ್ಮ ಗುರಿಯಾಗಿದೆ.

ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ

ಜೈ ಕರ್ನಾಟಕ
ಜೈ ಹಿಂದ್

Follow Us:
Download App:
  • android
  • ios