ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಅಧಿಕಾರಿಗಳು ಕ್ರಿಯಾಶೀಲರಾಗಿ ಹಾಗೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಯೋಜನೆಯ ಫಲ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಿ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ್‌ ಎಚ್ಚರಿಕೆ ನೀಡಿದರು. 

ತಿಪಟೂರು (ಆ.13): ಸರ್ಕಾರದ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕಾದರೆ ಅಧಿಕಾರಿಗಳು ಕ್ರಿಯಾಶೀಲರಾಗಿ ಹಾಗೂ ಜವಾಬ್ದಾರಿಯಿಂದ ಕೆಲಸ ಮಾಡಬೇಕು. ಯೋಜನೆಯ ಫಲ ಅರ್ಹ ಫಲಾನುಭವಿಗಳಿಗೆ ತಲುಪಿಸಿ ಸಮಾಜಮುಖಿಯಾಗಿ ಕೆಲಸ ನಿರ್ವಹಿಸಿ ಎಂದು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್‌ ಎಚ್ಚರಿಕೆ ನೀಡಿದರು. ನಗರದ ಕೆಐಟಿ ಆಡಿಟೋರಿಯಂನಲ್ಲಿ ಜಿಲ್ಲಾ ಮತ್ತು ತಾಲೂಕು ಆಡಳಿತ, ತಾಲೂಕು ಪಂಚಾಯಿತಿ ವತಿಯಿಂದ ನಡೆದ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Add Asianetnews Kannada as a Preferred SourcegooglePreferred

ಪ್ರಧಾನಿಯಾಗಿದ್ದ ಮನಮೋಹನ್‌ ಸಿಂಗ್‌ರವರು ಗಾಂಧೀಜಿಯವರ ಉದ್ಯೋಗಖಾತ್ರಿ ಯೋಜನೆಯನ್ನು ಜಾರಿಗೆ ತಂದು ಗ್ರಾಮಗಳ ಅಭಿವೃದ್ಧಿಗೆ ಪೂರಕವಾದ ಸೌಲಭ್ಯಗಳನ್ನು ಒದಗಿಸಿಕೊಟ್ಟಿದ್ದು ಅವು ಇಂದಿಗೂ ಜಾರಿಯಲ್ಲಿವೆ. ಈ ಹಿಂದೆ ಕಾಂಗ್ರೆಸ್‌ ಸರ್ಕಾರವಿದ್ದಾಗ ಪ್ರಧಾನಮಂತ್ರಿ ಆವಾಸ್‌ ಯೋಜನೆಯಲ್ಲಿ 15 ಲಕ್ಷ ಮನೆಗಳನ್ನು ಕಟ್ಟಿಸಿಕೊಟ್ಟಿತ್ತು. ನಂತರ ಬಂದ ಸರ್ಕಾರ ಅದಕ್ಕೆ ಆದ್ಯತೆ ಕೊಡಲಿಲ್ಲ. ಈಗ ನಾವು ಮತ್ತೆ ಅಧಿಕಾರಕ್ಕೆ ಬಂದ ಮೇಲೆ ಅದಕ್ಕೆ ಮರುಚಾಲನೆಯನ್ನು ದೊಡ್ಡ ಮಟ್ಟದಲ್ಲಿ ನೀಡಿದ್ದು, ಪ್ರತಿಯೊಬ್ಬರು ಸ್ವಂತ ಸೂರನ್ನು ಹೊಂದಬೇಕೆಂಬುದೇ ನಮ್ಮ ಗುರಿಯಾಗಿದೆ ಎಂದರು.

ಕಸಾಪಗೆ 1 ಕೋಟಿ ಸದಸ್ಯರ ನೋಂದಣಿ ಗುರಿ: ಮಹೇಶ್‌ ಜೋಶಿ

ಶಾಸಕ ಕೆ. ಷಡಕ್ಷರಿ ಮಾತನಾಡಿ, ಗುಡಿಸಲು ರಹಿತ ತಾಲೂಕು ಮಾಡಬೇಕೆಂಬ ಗುರಿ ಹೊಂದಿದ್ದು, ಶಾಸಕನಾಗಿ ಆಯ್ಕೆಯಾದ ಮೇಲೆ 10 ಸಾವಿರಕ್ಕೂ ಹೆಚ್ಚು ಮನೆಗಳನ್ನು ಮಂಜೂರು ಮಾಡಿದ್ದೇನೆ. ಈ ಬಾರಿ ನಗರದಲ್ಲಿ 1200 ಮನೆಗಳನ್ನು ಕಟ್ಟಿಸಿ ಅಂಗವಿಕಲರಿಗೆ, ನಿರ್ಗತಿಕರಿಗೆ, ವಯಸ್ಸಾದವರಿಗೆ ನೀಡಲಾಗುತ್ತಿದ್ದು ಇದಕ್ಕೆ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಸಹ ಎಲ್ಲಾ ರೀತಿಯ ಮೂಲಭೂತ ಸೌಲಭ್ಯಗಳನ್ನು ಒದಗಿಸಲಾಗಿದ್ದು ರಸ್ತೆ, ಕುಡಿಯುವ ನೀರು ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೋಟ್ಯಂತರ ರು. ವೆಚ್ಚದಲ್ಲಿ ಪ್ರಾರಂಭಿಸಲಾಗಿದೆ. ಬಡವರಿಗೆ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದರು.

ಜಿಪಂ ಕಾರ್ಯನಿರ್ವಾಹಣಾಧಿಕಾರಿ ಜಿ. ಪ್ರಭು ಮಾತನಾಡಿ, ಸರ್ಕಾರದ ಯೋಜನೆಗಳ ಮೂಲಕ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗಾಗಿ ಶ್ರಮಿಸಲಾಗುತ್ತಿದೆ. ಸರ್ಕಾರ ಎಲ್ಲಾ ಯೋಜನೆಗಳು ಹಾಗೂ ಕಾಮಗಾರಿಗಳು ಅತ್ಯಂತ ವೇಗವಾಗಿ ಅನುಮೋದನೆ ಪಡೆಯಲಿವೆ. ಗ್ರಾಮ ಪಂಚಾಯಿತಿ-500 ಎಂಬ ವಿಶೇಷ ಕಾರ್ಯಕ್ರಮ ನಡೆಸಲಾಗುತ್ತಿದೆ. 500 ರೈತರಿಗೆ ಕೂಲಿ ಆಧಾರಿತ ಕೆಲಸವನ್ನು ಕೊಡುವ ನಿಟ್ಟಿನಲ್ಲಿ ನೀರು, ಆರೋಗ್ಯ, ಸ್ವಚ್ಛತೆ, ನೈರ್ಮಲ್ಯ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಸುಮಾರು 7631 ಕಾಮಗಾರಿಗೆ 300 ಕೋಟಿ ರು. ವೆಚ್ಚದಲ್ಲಿ ಅನುಮೋದನೆ ಕೊಡಲಾಗಿದೆ. ಅದರಂತೆ ಕಾಮಗಾರಿ ಆದೇಶ ಪತ್ರ ವಿತರಣೆ ಮಾಡಲಾಗುತ್ತಿದ್ದು, ವಸತಿ ರಹಿತರಿಗೆ ಹಂತವಾಗಿ ವಸತಿ ಕಲ್ಪಿಸಲಾಗುತ್ತಿದ್ದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಲೋಪಕ್ಕೆ ಎಡೆಮಾಡಿ ಕೊಡದೆ ತ್ವರಿತವಾಗಿ ಮನೆಗಳ ಕಾಮಗಾರಿಗೆ ಮುಂದಾಗಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್‌. ಶ್ರೀನಿವಾಸ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಾಹುಲ್‌ಕುಮಾರ್‌ ಶಹಪುರವಾಡ್‌, ಅಪರ ಜಿಲ್ಲಾಧಿಕಾರಿ ಶಿವಾನಂದ್‌ ಕರಾಳೆ, ಜಿ.ಪಂ ಅಭಿವೃದ್ಧಿ ಉಪ ಕಾರ್ಯದರ್ಶಿ ನರಸಿಂಹಮೂರ್ತಿ, ಜಿಪಂ ಸಿಪಿಪ ಸಣ್ಣಬಸಪ್ಪ, ಜಿಪಂ ಪಿ.ಡಿ. ನಾರಾಯಣಸ್ವಾಮಿ, ಉಪವಿಭಾಗಾಧಿಕಾರಿ ಬಿ.ಕೆ. ಸಪ್ತಶ್ರೀ, ಕೃಷಿ ಇಲಾಖೆಯ ಉಪನಿರ್ದೇಶಕ ಟಿ.ಎನ್‌. ಅಶೋಕ್‌, ತಹಸೀಲ್ದಾರ್‌ ಪವನ್‌ಕುಮಾರ್‌, ತಾಪಂ ಕಾರ್ಯನಿರ್ವಹಣಾಧಿಕಾರಿ ಸುದರ್ಶನ್‌, ನಗರಸಭೆ ಪೌರಾಯುಕ್ತ ವಿಶ್ವೇಶ್ವರ ಬದಗಡೆ, ಎಲ್ಲಾ ಇಲಾಖೆಯ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಸದಸ್ಯರು, ಫಲಾನುಭವಿಗಳಿದ್ದರು.

ಎಚ್‌ಎಎಲ್‌ನಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡಿ: ಸಚಿವ ಪರಮೇಶ್ವರ್‌

ಆದೇಶ ಪತ್ರ ವಿತರಣೆ: ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಡಿ ತಾಲೂಕಿನ 283 ಫಲಾನುಭವಿಗಳಿಗೆ ಮನೆ ನಿರ್ಮಾಣಕ್ಕೆ ವಸತಿ ಯೋಜನೆ ಕಾಮಗಾರಿ ಆದೇಶ ಪ್ರತಿ ನೀಡಲಾಯಿತು. ಶೇ.60ರಷ್ಟುಎಸ್ಸಿ ಎಸ್ಟಿ, ಶೇ.25ರಷ್ಟುಸಾಮಾನ್ಯ, 15ರಷ್ಟು ಅಲ್ಪಸಂಖ್ಯಾತರಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಪ್ರಾರಂಭದ ಆದೇಶ ಪ್ರತಿ ಸೇರಿದಂತೆ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪ್ರತಿ ನೀಡಲಾಯಿತು.