ಸಿಂಧನೂರಿನಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಜನರು ತನ್ನನ್ನು ಹೊಗಳಿದರೂ ಚುನಾವಣೆಯಲ್ಲಿ ಜೆಡಿಎಸ್‌ಗೆ ಮತ ನೀಡುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬದಿಗಿಟ್ಟು ರಾಜ್ಯ ಸರ್ಕಾರದ ಜೊತೆ ನಿಲ್ಲುವುದಾಗಿ ಹೇಳಿದರು.

ಸಿಂಧನೂರು (ಏ.5): ನನ್ನನ್ನು ಹೊಗಳುವ ಜನರು, ಚುನಾವಣೆಯಲ್ಲಿ ಜೆಡಿಎಸ್‌ಗೆ ಮತ ಹಾಕುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

Add Asianetnews Kannada as a Preferred SourcegooglePreferred

ಜನ ನನ್ನ ಹೊಗಳುತ್ತಾರೆ ಚುನಾವಣೆ ಬಂದಾಗ ಮತ ಹಾಕೋಲ್ಲ

ಜನರು ನನ್ನ ಬಗ್ಗೆ ಮಾತನಾಡುತ್ತಾರೆ. ಸಾಲ ಮನ್ನಾದಂತಹ ಕಾರ್ಯಕ್ರಮಗಳನ್ನು ಹಾಡಿ ಹೊಗಳುತ್ತಾರೆ. ಆದರೆ ಚುನಾವಣೆ ಬಂದಾಗ ನಮ್ಮ ಪಕ್ಷಕ್ಕೆ ಮತ ಹಾಕುವುದಿಲ್ಲ. ಜೆಡಿಎಸ್ ಪೂರ್ಣ ಬಹುಮತದ ಸರ್ಕಾರ ಇದುವರೆಗೂ ರಚನೆ ಆಗಿಲ್ಲ. ನಾನು ಎರಡು ಬಾರಿ ಮುಖ್ಯಮಂತ್ರಿ ಆದರೂ ಅದೃಷ್ಟದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಹೇಳಿದರು.

ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಎಚ್ಡಿಕೆ

ರಾಜ್ಯ ಸರ್ಕಾರದ ಜತೆ ಇದ್ದೇನೆ. ಅಭಿವೃದ್ಧಿ ವಿಷಯದಲ್ಲಿ ಯಾರು ರಾಜಕೀಯ ಮಾಡಬಾರದು. ಎಲ್ಲರೂ ಸಂಘಟಿತವಾಗಿ ಕೆಲಸ ಮಾಡಿದರೆ ಮಾತ್ರ ರಾಜ್ಯಕ್ಕೆ ಒಳ್ಳೆದಾಗುತ್ತದೆ. ಅಭಿವೃದ್ಧಿ ವಿಷಯದಲ್ಲಿ ನಾನು ಎಂದೆಂದಿಗೂ ರಾಜ್ಯ ಸರ್ಕಾರದ ಜೊತೆಗೆ ನಿಲ್ಲುತ್ತೇನೆ.

ರಾಯಚೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿಯ ಅನೇಕ ಕೆಲಸಗಳು ಆಗಬೇಕಿದೆ. ಅದಕ್ಕಾಗಿ ರಾಜಕೀಯ ಭಿನ್ನಮತ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾ ಗುತ್ತದೆ. ನನ್ನ ಕಡೆಯಿಂದ ಏನೇ ಕೆಲಸ ಆಗಬೇಕಿದ್ದರೂ ಯಾರೇ ಆಗಲಿ ನನ್ನನ್ನು ಮುಕ್ತವಾಗಿ ಸಂಪರ್ಕಿಸಬಹುದು. ರಾಜ್ಯಕ್ಕೆ ಒಳ್ಳೆಯದು ಮಾಡುವುದು ನನ್ನ ಕರ್ತವ್ಯ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

9 ಕೈಗಾರಿಕೆ ಕ್ಲಸ್ಟರ್ ನೆನಪಿಸಿದ ಹೆಚ್ಡಿಕೆ

ಕರ್ನಾಟಕ ರಾಜ್ಯ ಸಮಾನವಾಗಿ ಅಭಿವೃದ್ಧಿ ಹೊಂದಬೇಕು ಎನ್ನುವ ಉದ್ದೇಶದಿಂದ ಕಾಂಪೀಟ್ ವಿಥ್ ಚೈನಾ ಎನ್ನುವ ಕಾರ್ಯಕ್ರಮ ರೂಪಿಸಿದೆ. 2018ರಲ್ಲಿ ಕಾಂಗ್ರೆಸ್ ಜೊತೆ ನಾನು ಮೈತ್ರಿ ಸರ್ಕಾರ ರಚಿಸಿದಾಗ 9 ಕೈಗಾರಿಕಾ ಕ್ಲಸ್ಟರ್ ಗಳನ್ನು ಸ್ಥಾಪಿಸಿ ರಾಜ್ಯಾದ್ಯಂತ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತಾಸೆ ನೀಡುವ ದೊಡ್ಡ ಪ್ರಯತ್ನ ಮಾಡಿದ್ದೆ. ಅದರಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬೊಂಬೆಗಳ ಕ್ಲಸ್ಟರ್ ಸ್ಥಾಪನೆ ಮಾಡಲು ನಿರ್ಧಾರ ಮಾಡಿದೆ. ಅಷ್ಟರಲ್ಲಿ ನನ್ನ ಸರ್ಕಾರ ಹೋಯಿತು. ಆ ಯೋಜನೆಗಳು ನನೆಗುದಿಗೆ ಬಿದ್ದವೆಂದು ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದರು.