ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದಾಗಿನಿಂದ ಡೀಸೆಲ್ ಬೆಲೆ 5.5 ರು. ಹಾಗೂ ಪೆಟ್ರೋಲ್ ಬೆಲೆ 3 ರು. ಹೆಚ್ಚಳ ಮಾಡಿ ಜನರ ಮೇಲೆ ಭಾರಿ ಹೊರೆ ಹೊರಿಸಿದ್ದೀರಿ ಎಂದು ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ನ.14): ಅಸಂಘಟಿತ ಕಾರ್ಮಿಕರ ಸೌಲಭ್ಯಕ್ಕಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಹೆಚ್ಚುವರಿ ತೆರಿಗೆ ಪ್ರಸ್ತಾಪಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಪ್ರಸ್ತಾಪದಿಂದ ಕಾಂಗ್ರೆಸ್ ಸರ್ಕಾರ ಜನಸಾಮಾನ್ಯರ ಜೇಬಿಗೆ ಮತ್ತೊಮ್ಮೆ ಕತ್ತರಿ ಬೀಳಲಿದೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದಾಗಿನಿಂದ ಡೀಸೆಲ್ ಬೆಲೆ 5.5 ರು. ಹಾಗೂ ಪೆಟ್ರೋಲ್ ಬೆಲೆ 3 ರು. ಹೆಚ್ಚಳ ಮಾಡಿ ಜನರ ಮೇಲೆ ಭಾರಿ ಹೊರೆ ಹೊರಿಸಿದ್ದೀರಿ. ಈಗ ಮತ್ತೊಮ್ಮೆ ಪೆಟ್ರೋಲ್ ಬೆಲೆ ಒಂದು ರು. ಹೆಚ್ಚಳ ಮಾಡಲು ಹೊರಟಿದ್ದೀರಲ್ಲ ಸ್ವಾಮಿ. ನಿಮ್ಮ ಕಾಂಗ್ರೆಸ್ ಸರ್ಕಾದ ದುರಾಡಳಿತ, ಅಸಮರ್ಥತೆ, ಭ್ರಷ್ಟಾಚಾರಕ್ಕೆ ಕನ್ನಡಿಗರು ಇನ್ನೆಷ್ಟು ಬೆಲೆ ತೆತ್ತಬೇಕು ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಮೊಬೈಲ್‌ ಕೇಸ್‌ ಎನ್‌ಐಎಗೆ ವಹಿಸಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಂಕಿತ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಬ್ಬ ಭಯೋತ್ಪಾದಕ ಮೊಬೈಲ್‌ ಬಳಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಹೆಚ್ಚು ತನಿಖೆ ಮಾಡಿದರೆ ಹೊಸ ವಿಚಾರಗಳು ಗೊತ್ತಾಗುತ್ತದೆ. ಇದು ದೇಶದ ಭದ್ರತೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಾದಿಸಿದರು.

ಡಾಕ್ಟರ್‌ಗಳು ಸೇರಿ ಹೆಚ್ಚು ಶಿಕ್ಷಣ ಪಡೆದ ಮುಸ್ಲಿಮರೇ ಭಯೋತ್ಪಾದಕರಾಗಿ ಬದಲಾಗುತ್ತಿದ್ದಾರೆ. ಆದ್ದರಿಂದ ಕಾಂಗ್ರೆಸ್‌ ಈ ಬಗ್ಗೆ ಹೆಚ್ಚು ಎಚ್ಚರ ವಹಿಸಬೇಕಿದೆ. ಅಧಿಕಾರಕ್ಕೆ ಬರಲು ಓಲೈಕೆ ಮಾಡುವುದರಿಂದ ಹೀಗೆಲ್ಲ ಆಗುತ್ತಿದೆ. ಪರಪ್ಪನ ಅಗ್ರಹಾರದಲ್ಲೂ ಕಾಂಗ್ರೆಸ್‌ನ ತಪ್ಪಿನಿಂದಲೇ ಉಗ್ರವಾದಿಗಳು ಮೊಬೈಲ್‌ ಬಳಸುವಂತಾಗಿದೆ. ಇಂಥ ವೈಫಲ್ಯ ಒಪ್ಪಿಕೊಂಡು ಕಾಂಗ್ರೆಸ್‌ ನಾಯಕರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಇದು ಮನಮೋಹನ್‌ ಸಿಂಗ್‌ ಸರ್ಕಾರವಲ್ಲ. ಪ್ರಧಾನಿ ಮೋದಿ ಸರ್ಕಾರದಲ್ಲಿ ಭಯೋತ್ಪಾದಕರಿಗೆ ಯಾವುದೇ ವಿನಾಯ್ತಿ ನೀಡುವುದಿಲ್ಲ ಎಂಬುದು ಇಡೀ ಜಗತ್ತಿಗೆ ತಿಳಿದಿದೆ. ಈ ಘಟನೆ ವಿರುದ್ಧವೂ ಕೇಂದ್ರ ಸರ್ಕಾರ ಕಠಿಣ ಕ್ರಮ ವಹಿಸಲಿದೆ. ಕಾಂಗ್ರೆಸ್‌ ಇದ್ದಾಗ ನಕ್ಸಲ್‌ ಚಟುವಟಿಕೆ ಅಧಿಕವಾಗಿತ್ತು. ಅದನ್ನು ಗೃಹ ಸಚಿವ ಅಮಿತ್‌ ಶಾ ಬಹುತೇಕ ನಿರ್ಮೂಲನೆ ಮಾಡಿದ್ದಾರೆ. ಅದೇ ರೀತಿ ಭಯೋತ್ಪಾದನೆ ಕೂಡ ನಿರ್ಮೂಲನೆಯಾಗಲಿದೆ ಎಂದರು.