* ಕರ್ನಾಟಕದ 30ನೇ ಸಿಎಂ ಆದ ಬಸವರಾಜ ಬೊಮ್ಮಾಯಿ* ನೂತನ ಸಿಎಂಗೆ ಶುಭ ಕೋರಿದ ಪ್ರಧಾನಿ ಮೋದಿ, ಅಮಿತ್ ಶಾ* ಬೊಮ್ಮಾಯಿ ಉತ್ತಮ ಆಡಳಿತ ನೀಡಲಿದ್ದಾರೆ ಎಂಬ ಭರವಸೆ ಇದೆ ಎಂದ ಮೋದಿ

ಬೆಂಗಳೂರು(ಜು.28): ಬಸವರಾಜ ಬೊಮ್ಮಾಯಿ ಕರ್ನಾಟಕದ 30ನೇ ಸಿಎಂ ಆಗಿ ಇಂದು, ಬುಧವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಜಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿಎಸ್‌ವೈ, ಡಿಸಿಎಂ ಗೋವಿಂದ ಕಾರಜೋಳ ಸೇರಿ ಅನೇಕ ಗಣ್ಯರು ಹಾಜರಿದ್ದರು.

ಇನ್ನು ಕರ್ನಾಟಕ ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಶುಭ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಕರ್ನಾಟಕದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿಗೆ ಅಭಿನಂದನೆಗಳು. ಸಾಕಷ್ಟು ಅನುಭವ ಇರುವುದರಿಂದ ಬೊಮ್ಮಾಯಿ ಉತ್ತಮ ಆಡಳಿತ ನೀಡಲಿದ್ದಾರೆ. ಅವರು ಉತ್ತಮ ಕೆಲಸ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

Scroll to load tweet…

ಅತ್ತ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಕೂಡ ನೂತನ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯ ಕೋರಿದ್ದಾರೆ. ಟ್ವೀಟ್ ಮಾಡಿರುವ ಅವರು, ಕರ್ನಾಟಕದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಆತ್ಮೀಯರಾದ ಬಸವರಾಜ ಬೊಮ್ಮಾಯಿ ಅವರಿಗೆ ಶುಭಾಶಯಗಳು ಎಂದು ಹೇಳಿದ್ದಾರೆ.

Scroll to load tweet…

ಇನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಾ ಈ ಬಗ್ಗೆ ಟ್ವೀಟ್ ಮಾಡಿದ್ದು ಕರ್ನಾಟಕದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ತಮ್ಮ ಬುದ್ಧಿವಂತಿಕೆ ಹಾಗೂ ಅನುಭವದಿಂದ ಬಿಜೆಪಿಯ ಸಂಕಲ್ಪದಂತೆ ರಾಜ್ಯದ ಬಡಜನರ ಮತ್ತು ರೈತರ ಸೇವೆ ಮಾಡುತ್ತಾರೆಂಬ ವಿಶ್ವಾಸ ನನಗಿದೆ ಎಂದೂ ಹೇಳಿದ್ದಾರೆ. 
ಕೆಲವರಿಗೆ ಅಸಮಾಧಾನ: 

Scroll to load tweet…

ಲಿಂಗಾಯತ ಸಮುದಾಯದ ಬಿ.ಎಸ್‌.ಯಡಿಯೂರಪ್ಪ ಅವರ ನಿರ್ಗಮನದ ಹಿನ್ನೆಲೆಯಲ್ಲಿ ಉಂಟಾಗಬಹುದಾದ ನಷ್ಟವನ್ನು ಭರಿಸುವ ಉದ್ದೇಶದಿಂದ ಮತ್ತೆ ಲಿಂಗಾಯತರಿಗೆ ಮಣೆ ಹಾಕಿರುವ ಆಡಳಿತಾರೂಢ ಬಿಜೆಪಿಯು ಯಡಿಯೂರಪ್ಪ ಅವರ ‘ಮಾನಸ ಪುತ್ರ’ ಎಂದೇ ಗುರುತಿಸಲ್ಪಡುವ ಬಸವರಾಜ ಬೊಮ್ಮಾಯಿ ಅವರಿಗೆ ಸಿಎಂ ಆಗಿ ಆಯ್ಕೆ ಮಾಡಿರುವುದು ಕೆಲವರನ್ನು ಅಸಮಾಧಾನಗೊಳಿಸಿದೆ. 

ಸಂಘ ಮೂಲದವರಿಗೇ ಮುಂದಿನ ಮುಖ್ಯಮಂತ್ರಿ ಪಟ್ಟನೀಡಬೇಕು ಎಂಬ ಪಕ್ಷದ ಹಲವರ ಪ್ರಯತ್ನಕ್ಕೆ ಹಿನ್ನಡೆ ಉಂಟಾಗಿದೆ. ಜನತಾ ಪರಿವಾರದಿಂದ ವಲಸೆ ಬಂದಿರುವ ಬೊಮ್ಮಾಯಿ ಅವರಿಗೆ ಮಣೆ ಹಾಕುವ ಅನಿವಾರ್ಯ ಸ್ಥಿತಿ ಬಂದೊದಗಿದ್ದು ಹಂಗಾಮಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಹೆಗ್ಗಳಿಕೆ.