ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಸಾಮಾಜಿಕ ಹಾಗೂ ಆರ್ಥಿಕ ಗಣತಿ ಹೆಸರಿನಲ್ಲಿ ರಾಜ್ಯದಲ್ಲಿ ಹಿಂದೂಗಳನ್ನು ಮತಾಂತರ ಮಾಡಲು ಪ್ರೋತ್ಸಾಹಿಸುವಂತೆ ಗಣತಿ ನಡೆದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ.

ಧಾರವಾಡ (ಅ.03): ಸಾಮಾಜಿಕ ಹಾಗೂ ಆರ್ಥಿಕ ಗಣತಿ ಹೆಸರಿನಲ್ಲಿ ರಾಜ್ಯದಲ್ಲಿ ಹಿಂದೂಗಳನ್ನು ಮತಾಂತರ ಮಾಡಲು ಪ್ರೋತ್ಸಾಹಿಸುವಂತೆ ಗಣತಿ ನಡೆದಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರವೇ ಜಾತಿ ಗಣತಿ ಮಾಡಲು ನಿರ್ಧರಿಸಿದೆ. ಹೀಗಾಗಿ ಜಾತಿ ಗಣತಿಗೆ ನಮ್ಮ ವಿರೋಧವಿಲ್ಲ. ಆದರೆ, ಇದೀಗ ನಡೆಯುತ್ತಿರುವ ಗಣತಿಯಲ್ಲಿ ವೈಯಕ್ತಿಕ ಪ್ರಶ್ನೆಗಳನ್ನು ಸೇರಿಸಲಾಗಿದೆ. ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಬ್ರಾಹ್ಮಣ ಅಂದರೇನು ಅರ್ಥ? ನೀವು ಯಾವುದಾದರೂ ಸಾಮಾಜಿಕ ಸಂಘಟನೆಗೆ ಸೇರಿದ್ದೀರಾ ಎನ್ನುವ ಪ್ರಶ್ನೆಗಳು ಬೇಕಿತ್ತಾ ಎಂದು ಪ್ರಶ್ನಿಸಿದರು.

Add Asianetnews Kannada as a Preferred SourcegooglePreferred

ಜಾತಿಗೆ ಸಂಬಂಧಿಸಿದ ಮಾಹಿತಿ ನೀಡಲು ತಕರಾರಿಲ್ಲ. ಆದರೆ, ಅನಾವಶ್ಯಕ ಪ್ರಶ್ನೆಗಳಿಗೆ ನಮ್ಮ ತಕರಾರಿದೆ. ಹೀಗಾಗಿ ಅಂತಹ ಪ್ರಶ್ನೆಗಳಿಗೆ ನಮ್ಮ ವಿರೋಧವಿದೆ. ಹಿಂದೂ ಸಮಾಜವನ್ನು ಇಬ್ಭಾಗ ಮಾಡಬೇಕೆನ್ನುವ ಪ್ರಯತ್ನದಲ್ಲಿ ಜಾತಿ ಗಣತಿ ಎಂದು ಮತ್ತೊಮ್ಮೆ ಬೇಸರ ವ್ಯಕ್ತಪಡಿಸಿದರು. ಸಿಎಂ ತಮ್ಮ ಸೀಟು ಉಳಿಸಿಕೊಳ್ಳಲು ಈ ಗಣತಿ ಮಾಡುತ್ತಿದ್ದಾರೆ. ಆದರೆ, ನಮಗೆ ಗಣತಿ ವಿರೋಧಿಗಳು ಎಂದು ಹೇಳುತ್ತಿದ್ದಾರೆ. ಒಕ್ಕಲಿಗ ಸ್ವಾಮಿಗಳು, ಡಿಕೆಶಿ ಇದ್ದ ಸಭೆಯಲ್ಲಿ ಗಣತಿ ಮುಂದೂಡಬೇಕೆಂದು ಹೇಳಿದರಲ್ಲವೇ? ಇದರ ಅರ್ಥವೇನು? ಹಾಗಾದರೆ ಡಿಕೆಶಿ ಗಣತಿ ವಿರೋಧಿ ಅಲ್ಲದೇ ಇನ್ನೇನು ಎಂದರು.

ನಾನೇ ಐದು ವರ್ಷ ಮುಖ್ಯಮಂತ್ರಿ ಎನ್ನುವ ಸಿದ್ದರಾಮಯ್ಯ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಜೋಶಿ, ಡಿಸಿಎಂ ಡಿ.ಕೆ.ಶಿವಕುಮಾರ್‌ರ ಬೆಂಬಲಿಗರು ಮುಂದಿನ ತಿಂಗಳು ಸಿಎಂ ಬದಲಾವಣೆ ಎಂದು ಹೇಳುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಇಲ್ಲ ಎನ್ನುತ್ತಿದ್ದಾರೆ. ಸಿಎಂ ಕುರ್ಚಿ ಹೋಗಲಿದೆ ಎನ್ನುವ ಭಯಕ್ಕೆ ಹಾಗೂ ರಾಹುಲ್ ಗಾಂಧಿ, ಸೋನಿಯಾ ಹಾಗೂ ಪ್ರಿಯಾಂಕಾರನ್ನು ಮೆಚ್ಚಿಸಲು ಜಾತಿ ಗಣತಿ ಮಾಡಲಾಗುತ್ತಿದೆ ಎಂದೂ ಜೋಶಿ ಆರೋಪಿಸಿದರು.

ಜಿಎಸ್‌ಟಿ ಸುಧಾರಣೆಯಿಂದ ವಿಕಸಿತ ಭಾರತಕ್ಕೆ ಶಕ್ತಿ

ಜಿಎಸ್‌ಟಿ ಸುಧಾರಣೆ ವಿಕಸಿತ ಭಾರತಕ್ಕೆ ಶಕ್ತಿ ನೀಡಲಿದೆ. ಯುಪಿಎ ಸರ್ಕಾರದ ಕಾಲಕ್ಕೆ ಹೋಲಿಸಿದರೆ ಕೊರೋನಾ, ಎರಡು ಯುದ್ಧಗಳು, ಆಪರೇಷನ್ ಸಿಂಧೂರ ಕಾರ್ಯಾಚರಣೆಯ ನಡುವೆಯೂ ದೇಶದ ಆರ್ಥಿಕತೆ ಸುಧಾರಿಸಿದೆ. ವಿಶ್ವದ 4ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ. 2047ರ ವೇಳೆಗೆ ದೇಶದ ಆರ್ಥಿಕತೆ 30 ಟ್ರಿಲಿಯನ್ ಡಾಲರ್‌ಗೆ ಹೆಚ್ಚಿಸುವ ಸಂಕಲ್ಪ ನಮ್ಮದಾಗಿದೆ ಎಂದು ಹೇಳಿದರು. ತೆರಿಗೆ ಇಳಿಕೆಯಿಂದ ವಾರ್ಷಿಕ ₹2.75 ಲಕ್ಷ ಕೋಟಿ ಸರ್ಕಾರಕ್ಕೆ ಆದಾಯ ಕಡಿಮೆಯಾಗಲಿದೆ. ಕೈಗೆಟಕುವ ತೆರಿಗೆಯಿಂದ ಬರುವ ಲಾಭವನ್ನು ಬಡವರಿಗೆ ಹಂಚಿಕೆ ಮಾಡಲು ಕೇಂದ್ರ ಬಯಸಿದ್ದು, ಶೇ. 5 ಹಾಗೂ ಶೇ. 18ರಂತೆ ಸ್ಲ್ಯಾಬ್ ಜಿಎಸ್‌ಟಿ ನಿಗದಿ ಪಡಿಸಲಾಗಿದೆ. ಈ ವಿನಾಯಿತಿಯಿಂದ ಜನರ ಕೈಯಲ್ಲಿ ₹1ರಿಂದ ₹1.5 ಲಕ್ಷ ಕೋಟಿ ಉಳಿತಾಯವಾಗಲಿದೆ ಎಂದು ತಿಳಿಸಿದರು.