ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯಕ್ಕೆ ದೊರೆತಿರುವ ಕಾನೂನಾತ್ಮಕ ವಿಜಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಅಡಚಣೆ ನಿವಾರಣೆ ಆಗಿರುವುದರಿಂದ ಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಿದ್ದರಾಮಯ್ಯಸೂಚನೆ ನೀಡಿದ್ದಾರೆ.
ಬೆಂಗಳೂರು (ನ.14): ಮೇಕೆದಾಟು ಯೋಜನೆ ವಿಚಾರದಲ್ಲಿ ರಾಜ್ಯಕ್ಕೆ ದೊರೆತಿರುವ ಕಾನೂನಾತ್ಮಕ ವಿಜಯ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು, ಅಡಚಣೆ ನಿವಾರಣೆ ಆಗಿರುವುದರಿಂದ ಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಬಗ್ಗೆ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್.ಕೆ.ಪಾಟೀಲ್, ‘ಮೇಕೆದಾಟು ಯೋಜನೆಗೆ ರಾಜಕೀಯ, ಕಾನೂನಾತ್ಮಕ ಹೋರಾಟ ಮಾಡಿದ್ದ ಸಿಎಂ, ಡಿಸಿಎಂಗೆ ಸಭೆಯಲ್ಲಿ ಅಭಿನಂದನೆ ಸಲ್ಲಿಸಲಾಯಿತು’ ಎಂದರು.
ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು: ರಾಜ್ಯ ಕಾಂಗ್ರೆಸ್ ಪಕ್ಷವು ಮೇಕೆದಾಟು ವಿಚಾರದಲ್ಲಿ ಪಾದಯಾತ್ರೆ ಮಾಡಿತ್ತು. ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಬಜೆಟ್ನಲ್ಲಿ ಯೋಜನೆ ಘೋಷಿಸಿದ್ದೆವು. ರಾಜಕೀಯ, ಕಾನೂನಾತ್ಮಕ ಹೋರಾಟವನ್ನೂ ನಡೆಸಿದ್ದೆವು. ಇದರ ವಿರುದ್ಧ ತಮಿಳುನಾಡಿನರು ಸುಪ್ರೀಂ ಕೋರ್ಟ್ಗೆ ಹೋಗಿದ್ದರು. ಆದರೆ ಅವರ ಅರ್ಜಿ ವಜಾ ಆಗಿದೆ. ಆ ಮೂಲಕ ಮೇಕೆದಾಟು ಯೋಜನೆಗೆ ಮುಂದಿನ ಹೆಜ್ಜೆಗಳಿಗೆ ಹಸಿರು ನಿಶಾನೆ ತೋರಿದಂತಾಗಿದೆ ಎಂದು ಎಚ್.ಕೆ.ಪಾಟೀಲ್ ಹೇಳಿದರು. ಯೋಜನೆ ಬಗ್ಗೆ ಮುಂದೇನು ಎಂಬ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಯೋಜನೆಗೆ ಅಗತ್ಯವಿರುವ ಕಾನೂನಾತ್ಮಕ ಹಾಗೂ ಇತರೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸಿಎಂ ಸೂಚಿಸಿದ್ದಾರೆ. ಮೊದಲು ಯಾವ ಹೆಜ್ಜೆ ಇಡಬೇಕು ಎಂಬ ಬಗ್ಗೆ ತಿಳಿಸಿದ್ದಾರೆ. ಏನೆಲ್ಲಾ ಸಿದ್ಧತೆ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂಬುದನ್ನು ಈಗಲೇ ಹೇಳಲಾಗುವುದಿಲ್ಲ ಎಂದರು.
ಸಿಎಂ, ಡಿಸಿಎಂ ಭೇಟಿ ಮಾಡಿದ ಶಾಸಕ ನಂಜೇಗೌಡ
ರಾಜ್ಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಮಾಲೂರು ತಾಲೂಕು ವಿಧಾನಸಭಾ ಕ್ಷೇತ್ರದ ಚುನಾವಣೆಯ ಮರು ಎಣಿಕೆ ಫಲಿತಾಂಶ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡರು ಮುಖಂಡರ ಜೊತೆಗೂಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ಭೇಟಿ ಮಾಡಿ ಮರು ಎಣಿಕೆಯಲ್ಲಿ ನಡೆದ ಮಾಹಿತಿ ನೀಡಿದರು. ಸಿಎಂ ಸಿದ್ದರಾಮಯ್ಯ ಮಾತನಾಡಿ, ಮಾಲೂರು ತಾಲೂಕಿನಿಂದ ಮತ್ತೊಮ್ಮೆ ಶುಭ ಸೂಚನೆ ಸಿಕ್ಕಿದ್ದು ಕಾನೂನಿನಲ್ಲಿ ನಮಗೆ ಗೌರವವಿದೆ, ನೀವು ಯಾವುದೇ ಎದೆಗುಂದದೆ ಮುಂದೆ ಪಕ್ಷ ಬಲಪಡಿಸಿ ಜನರ ಸೇವೆ ಮಾಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ನಂಜೇಗೌಡರಿಗೆ ಶುಭ ಹಾರೈಸಿದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, ವಿಶೇಷವಾಗಿ ನಂಜೇಗೌಡರನ್ನು ಬೆನ್ನು ತಟ್ಟಿ ಶುಭ ಹಾರೈಸಿ, ಉತ್ತಮ ಜನರ ಸೇವೆ ಶ್ರೀರಕ್ಷೆ, ಜನರ ನಂಬಿಕೆ ಉಳಿಸಿಕೊಂಡಿದ್ದೀರಿ, ಜಿಲ್ಲೆಯಲ್ಲಿ ಹಾಗೂ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಿ ಎಂದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಮಲಿಯಪ್ಪನಹಳ್ಳಿ ಎಂ.ಎಸ್.ಶ್ರೀನಿವಾಸ್, ದಿನ್ನಹಳ್ಳಿ ರಮೇಶ್, ಕಾಂಗ್ರೆಸ್ ಮುಖಂಡ ಪ್ರಗತಿ ಶ್ರೀನಿವಾಸ್, ಮುನೇಗೌಡ, ಬಾಳಿಗನಹಳ್ಳಿ ಶ್ರೀನಿವಾಸ್, ಜಿ.ವಿ.ಕೆ.ಚಂದ್ರಶೇಖರ್ ಇದ್ದರು.
