ಕೆಪಿಎಸ್ಸಿ ನೇಮಕಾತಿ ಅಕ್ರಮಗಳ ಕುರಿತು ಮಾತನಾಡುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ. ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನೇಮಕಾತಿ ಮತ್ತು 200 ಕೋಟಿ ರೂಪಾಯಿಗಳ ಆರೋಪದ ಬಗ್ಗೆ ಮಾತನಾಡುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು (ಆ.29): ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ನೇಮಕಾತಿ ಅಕ್ರಮಗಳ ಕುರಿತು ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕೆಪಿಎಸ್ಸಿ ಅಧ್ಯಕ್ಷರ ನೇಮಕಾತಿಯ ಬಗ್ಗೆಯೂ ಮಾತನಾಡುವ ಧೈರ್ಯ ತೋರಿಸಲಿ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.
ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದು ಯಾರು?
ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಎಸ್ಸಿ ನೇಮಕಾತಿಯಲ್ಲಿ ಅಕ್ರಮದ ಬಗ್ಗೆ ಮಾತನಾಡುವ ಕುಮಾರಸ್ವಾಮಿ ಅವರು ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್ಸಿ ಅಧ್ಯಕ್ಷರನ್ನಾಗಿ ನೇಮಿಸಿದ್ದು ಯಾರು? ಎಂಬುದನ್ನೂ ಹೇಳಬೇಕು ಎಂದು ಒತ್ತಾಯಿಸಿದರು.
ಸಾಹುಕಾರ್ನ ಮನೆಯಲ್ಲಿ ಯಾರ ಫೋಟೋಗಳಿವೆ?
ಸಾಹುಕಾರ್ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅಥವಾ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಫೋಟೋ ಇಲ್ಲ. ಯಡಿಯೂರಪ್ಪ ಮತ್ತು ವಿಜಯೇಂದ್ರ ಅವರ ಫೋಟೋ ಇದೆ ಎಂದು ಹೇಳಲಾಗುತ್ತಿದೆ. 200 ಕೋಟಿ ರು. ನೀಡಿ ಅವರನ್ನು ಕೆಪಿಎಸ್ಸಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು ಎಂದು ಬಿಜೆಪಿ ಮಾಜಿ ಶಾಸಕರೇ ಆರೋಪಿಸಿದ್ದಾರೆ. ಇದು ನಿಜವೇ? ಇದರ ಬಗ್ಗೆ ಮಾತನಾಡಲು ಕುಮಾರಸ್ವಾಮಿ ಅವರಿಗೆ ಧೈರ್ಯವಿದೆಯೇ? ಎಂದು ಸವಾಲು ಹಾಕಿದರು.
ನನ್ನ ನಾಲಿಗೆಯ ಬಗ್ಗೆ ಮಾತನಾಡಲು ಜೆಡಿಎಸ್ನವರಿಗೆ ಯಾವ ನೈತಿಕತೆ ಇದೆ? ಈವರೆಗೂ ಬಿಜೆಪಿಯ ನಾಯಕರಿಗೆ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಪ್ರಿಯಾಂಕ್ ಖರ್ಗೆ ಬೇಕಿತ್ತು. ಈಗ ಜೆಡಿಎಸ್ಗೂ ಅನಿವಾರ್ಯ ಎಂದಾದರೆ ಮಾತನಾಡಿಕೊಳ್ಳಲಿ ಒಳ್ಳೆಯದು ಎಂದರು.


