ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದರು.

ತುಮಕೂರು (ಅ.18): ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಿಯಾಂಕ್‌ ಖರ್ಗೆಯವರಿಗೆ ಎಲ್ಲ ರೀತಿಯ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜತೆಗೆ ಇದರ ಹಿಂದೆ ಯಾರಾದರೂ ಇದ್ದರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು. ಶಾಲಾ ಕಾಲೇಜು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿ ಬೇರೆ ಬೇರೆ ಖಾಸಗಿ ಸಂಸ್ಥೆಗಳಿಗೆ ಕಾರ್ಯಕ್ರಮ ಮಾಡಲು ಅವಕಾಶ ಕೊಡಬಾರದು ಎಂದು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆರ್‌ಎಸ್‌ಎಸ್‌ನವರು ಪಥಸಂಚಲನ ನಡೆಸುವ ಸಂಬಂಧ ಪೊಲೀಸರ ಅನುಮತಿ ಪಡೆಯಬೇಕು. ಕಾನೂನು ಕ್ರಮಗಳನ್ನು ಪಾಲಿಸಿ ಪಥಸಂಚಲನ ನಡೆಸಬೇಕು ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆ ಇದೆ

ನನಗೂ ಮುಖ್ಯಮಂತ್ರಿಯಾಗಬೇಕೆನ್ನುವ ಆಸೆಯಿದೆ. ಯಾಕಾಗಬಾರದು ಎಂದು ಪ್ರಶ್ನಿಸಿದರು. ನಿಮಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆಯಾ? ಎಂಬ ಪ್ರಶ್ನೆಗೆ ಗೃಹಸಚಿವರು ಉತ್ತರಿಸಿದ ರೀತಿಯಿದು. ಸಚಿವ ಸಂಪುಟ ವಿಸ್ತರಣೆ, ಪುನರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ ಹಾಗೂ ಅವರ ವಿವೇಚನೆಗ ಬಿಟ್ಟಿರುವ ವಿಚಾರ. ಸೂಕ್ತ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ. ಎಲ್ಲ ಶಾಸಕರಿಗೂ ಸಚಿವರಾಗಬೇಕು ಎಂಬ ಆಸೆ ಇರುತ್ತದೆ. ಸಚಿವ ಸಂಪುಟ ಪುನರ್‌ ರಚನೆ, ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಸೇರಿ ಇನ್ನಿತರ ವಿಷಯಗಳ ಬಗ್ಗೆ ಮುಖ್ಯಮಂತ್ರಿ, ಹೈಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಸ್ಪಷ್ಟಪಡಿಸಿದರು.

ಮೊಸರಲ್ಲಿ ಕಲ್ಲು ಹುಡುಕುವ ಕೆಲಸ: ಮುಖ್ಯಮಂತ್ರಿಗಳು, ಸಚಿವರಿಗೆ ಔತಣಕೂಟ ಕರೆಯುವುದು ಸಾಮಾನ್ಯ. ಮುಖ್ಯಮಂತ್ರಿಗಳು ಶಾಸಕರಿಗೆ, ಸಚಿವರಿಗೆ ಸೋಮವಾರ ಊಟಕ್ಕೆ ಕರೆದಿದ್ದಾರೆ ಎನ್ನುವುದಕ್ಕೆ ಮಹತ್ವ ಕೊಡಬೇಕಾಗಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಇದರಿಂದ ಬಿಜೆಪಿಯವರ ಮನಸ್ಥಿತಿ ಏನು ಎಂಬುದು ತಿಳಿಯುತ್ತದೆ. ಮುಖ್ಯಮಂತ್ರಿಗಳು ಇದೇ ಮೊದಲ ಬಾರಿಗೆ ಊಟಕ್ಕೆ ಕರೆದಿಲ್ಲ. ಪ್ರತಿ ಅಧಿವೇಶನದ ಸಂದರ್ಭದಲ್ಲೂ ಸಾಮಾನ್ಯವಾಗಿ ಊಟಕ್ಕೆ ಕರೆಯುತ್ತಾರೆ.

ಇದೆಲ್ಲ ಸಾಮಾನ್ಯವಾಗಿ ನಡೆಯುವ ಪ್ರಕ್ರಿಯೆ. ಇದಕ್ಕೆ ವಿಶೇಷ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.ಪೊಲೀಸ್ ಇಲಾಖೆಯಲ್ಲಿ 15 ಸಾವಿರ‌ ಹುದ್ದೆಗಳು ಖಾಲಿ ಇದ್ದು, 4,600 ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. 545 ಪಿಎಸ್ಐಗಳ ನೇಮಕಾತಿ ಮಾಡಿ ಅವರಿಗೆ ತರಬೇತಿ ನೀಡಲಾಗುತ್ತಿದೆ. ಅಲ್ಲದೆ, ಹೊಸದಾಗಿ 402 ಪಿಎಸ್ಐ ನೇಮಕಾತಿಗೆ ಆದೇಶ ಹೊರಡಿಸಲಾಗಿದೆ. ಅದರ ಜತೆಗೆ ಇನ್ನೂ 600 ಪಿಎಸ್ಐಗಳ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.