* ರಾಜೀನಾಮೆ ನೀಡದಂತೆ ಸೋದರರಿಂದ ಮನವೊಲಿಕೆ* ರಮೇಶ್‌ ಜಾರಕಿಹೊಳಿ ರಾಜೀನಾಮೆ ನಿರ್ಧಾರ ವಾಪಸ್‌* ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ, ಮಾತುಕತೆ ಸಾಧ್ಯತೆ

ಬೆಳಗಾವಿ(ಜೂ.29): ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದು ನಿರಂತರವಾಗಿ ಪಕ್ಷದ ಹಿರಿಯ ಮುಖಂಡರು, ಆರ್‌ಎಸ್‌ಎಸ್‌ ಮುಖಂಡರು, ಮಠಾಧಿಪತಿಗಳನ್ನು ಭೇಟಿಯಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹೋರಾಟ ಸ್ವಲ್ಪಮಟ್ಟಿಗೆ ಯಶಸ್ವಿಯಾಗಿದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎಂದು ಅವರ ಆಪ್ತರು ಖಚಿತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಮೇಶ್‌ ಜಾರಕಿಹೊಳಿ ಅವರು ಭಾನುವಾರದಂದು ಸಹೋದರರಾದ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಲಖನ್‌ ಜಾರಕಿಹೊಳಿ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದರು. ಈ ವೇಳೆ ಸಹೋದರರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರವನ್ನು ಕೈಬಿಡುವಂತೆ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಆತುರದ ನಿರ್ಧಾರ ತೆಗೆದುಕೊಳ್ಳದೇ ಕಾಯ್ದು ನೋಡೋಣ. ಮತ್ತೆ ಮಂತ್ರಿಯಾಗುತ್ತಿ, ಎಲ್ಲಾ ಸಮಸ್ಯೆ ಬಗೆಹರಿಯುತ್ತದೆ. ಈಗಾಗಲೇ ವರಿಷ್ಠರು ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿ ಮನವರಿಕೆ ಮಾಡೋಣ ಎಂಬ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯಾಧ್ಯಕ್ಷರ ಭೇಟಿ?:

ಸೋಮವಾರ ರಾತ್ರಿ ಬೆಂಗಳೂರಿನ ತಮ್ಮ ನಿವಾಸ ತಲುಪಿರುವ ರಮೇಶ ಜಾರಕಿಹೊಳಿ ಜೂ.29ರಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ್‌ ಕಟೀಲ್‌ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಲಿದ್ದಾರೆ. ಆದರೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗುವ ಕುರಿತು ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡು ದಿನಗಳ ನಂತರ ಮತ್ತೆ ಜು.1ರಂದು ಮತ್ತೆ ಗೋಕಾಕಗೆ ರಮೇಶ ಜಾರಕಿಹೊಳಿ ಮರಳಲಿದ್ದಾರೆ. ಅಲ್ಲಿ ಸಹೋದರರಾದ ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಲಖನ್‌ ಜಾರಕಿಹೊಳಿ, ಅಳಿಯ ಅಂಬಿರಾವ್‌ ಪಾಟೀಲ ಅವರೊಂದಿಗೆ ಜು.3 ಅಥವಾ 4ರಂದು ಪತ್ರಿಕಾಗೋಷ್ಠಿ ನಡೆಸಿ ರಾಜೀನಾಮೆ ಪ್ರಹಸನಕ್ಕೆ ತೆರೆ ಎಳೆಯುವ ಸಾಧ್ಯತೆ ಇದೆ ಹೇಳಲಾಗಿದೆ.