ನಮ್ಮ ಸರ್ಕಾರದಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ. ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುತ್ತಿರುವುದರಿಂದ ರಾಜಕೀಯ ಭಯ ಹಾಗೂ ಅಭದ್ರತೆಯಿಂದ ಪ್ರತಿಪಕ್ಷಗಳ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. 

ವಿಧಾನಸಭೆ (ಜು.14): ‘ನಮ್ಮ ಸರ್ಕಾರದಲ್ಲಿ ಯಾವುದೇ ವರ್ಗಾವಣೆ ದಂಧೆ ನಡೆದಿಲ್ಲ. ನಾವು ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುತ್ತಿರುವುದರಿಂದ ರಾಜಕೀಯ ಭಯ ಹಾಗೂ ಅಭದ್ರತೆಯಿಂದ ಪ್ರತಿಪಕ್ಷಗಳ ನಾಯಕರು ಸುಳ್ಳು ಆರೋಪ ಮಾಡುತ್ತಿದ್ದಾರೆ. ನನ್ನ ರಾಜಕೀಯ ಇತಿಹಾಸದಲ್ಲಿ ವರ್ಗಾವಣೆ ದಂಧೆ ನಡೆಸಿರುವುದಾಗಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಬಗೆಗಿನ ಚರ್ಚೆಗೆ ಉತ್ತರ ನೀಡಿದ ಅವರು, ‘ನಾವು ಅಧಿಕಾರಕ್ಕೆ ಬಂದು ಎರಡು ತಿಂಗಳೂ ಆಗಿಲ್ಲ. ಆಗಲೇ 5 ಭರವಸೆಗಳಲ್ಲಿ ಮೂರು ಈಡೇರಿಸಿದ್ದೇವೆ. ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ ವರ್ಗಾವಣೆ ಸಹಜ. ಈ ಬಗ್ಗೆ ವರ್ಗಾವಣೆ ದಂಧೆ, ಭ್ರಷ್ಟಾಚಾರ ಎಂದು ಆರೋಪಿಸಿರುವ ಬಸವರಾಜ ಬೊಮ್ಮಾಯಿ, ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆಯನ್ನು ಖಂಡ ತುಂಡವಾಗಿ ಅಲ್ಲಗೆಳೆಯುತ್ತಿದ್ದೇನೆ. ಯಾವುದೇ ಕಾರಣಕ್ಕೂ ನಮಲ್ಲಿ ವರ್ಗಾವಣೆ ದಂಧೆ ಆಗಿಲ್ಲ’ ಎಂದು ಸಮರ್ಥಿಸಿಕೊಂಡರು.

ಜಿಲೆಟಿನ್‌ ಬಳಕೆ: ಶಾಸಕ ಮುನಿರತ್ನ ಸೇರಿ 5 ಮಂದಿ ಮೇಲೆ ಕೇಸ್‌

‘ಇನ್ನು ನಾನು ಮೊದಲ ಬಾರಿಗೆ 1983ರಲ್ಲಿ ಶಾಸಕನಾಗಿ ಆಯ್ಕೆಯಾಗಿದ್ದೆ. ಬಳಿಕ ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ, ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಇಷ್ಟುಸುದೀರ್ಘ ರಾಜಕಾರಣದಲ್ಲಿ ಯಾವತ್ತೂ ಕೂಡ ನನಗೆ ವರ್ಗಾವಣೆಯಲ್ಲಿ ಭ್ರಷ್ಟಾಚಾರ ಮಾಡಿರುವ ಆರೋಪ, ಕಳಂಕ ನನ್ನ ಮೇಲೆ ಇಲ್ಲ’ ಎಂದು ಸ್ಪಷ್ಟಪಡಿಸಿದರು.

‘ನಾನು ಮೊದಲ ಸಚಿವ ಸಂಪುಟ ಸಭೆಯಲ್ಲೇ ಯಾವ ಕಾರಣಕ್ಕೂ ವರ್ಗಾವಣೆಯಲ್ಲಿ ಭ್ರಷ್ಟಾಚಾರ ನಡೆಯಬಾರದು ಎಂದು ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆ’ ಎಂದು ಹೇಳಿದರು. ‘ಇನ್ನು ನನ್ನ ಇಲಾಖೆಗಳಾದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ, ವಾಣಿಜ್ಯ ತೆರಿಗೆ, ಖಜಾನೆ ಇಲಾಖೆಗಳಲ್ಲಿ ಯಾವ ವರ್ಗಾವಣೆಯನ್ನೂ ಮಾಡಿಲ್ಲ. ಹೀಗಾಗಿ ಭ್ರಷ್ಟಾಚಾರ ನಡೆಯಲು ಸಾಧ್ಯವೇ ಇಲ್ಲ. ನಮಗೆ ಕಣ್ಣಿಗೆ ಕಾಣದೆ ಯಾವುದಾದರೂ ಭ್ರಷ್ಟಾಚಾರ ಆಗಿದ್ದರೆ ಗೊತ್ತಿಲ್ಲ. ಆದರೆ ಗೊತ್ತಿದ್ದೂ ಯಾವುದೇ ಅಕ್ರಮ, ಅವ್ಯವಹಾರ ನಡೆಯಲು ಬಿಟ್ಟಿಲ್ಲ, ಬಿಡುವುದೂ ಇಲ್ಲ’ ಎಂದು ಸ್ಪಷ್ಟವಾಗಿ ಹೇಳಿದರು.

ಸಿದ್ದುಗೆ ಡಾ.ಹೆಗ್ಗಡೆ ಶ್ಲಾಘನೆ: ರಾಜ್ಯ ಬಜೆಟ್‌ನಲ್ಲಿ ಜನರಿಗೆ ಉಪಯುಕ್ತವಾದ ಅನೇಕ ಯೋಜನೆ, ಕಾರ್ಯಕ್ರಮಗಳನ್ನು ನೀಡಿರುವುದಕ್ಕೆ ಅಭಿನಂದನೆ ತಿಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಪತ್ರ ಬರೆದಿದ್ದಾರೆ. ತಮ್ಮ ಪತ್ರದಲ್ಲಿ ಸರ್ಕಾರದ ಮಹತ್ವದ ಐದು ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಗೆ ಪರೋಕ್ಷವಾಗಿ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ‘ಧರ್ಮಸ್ಥಳಕ್ಕೆ ಬರುವ ಭಕ್ತರು ವಿಶೇಷವಾಗಿ ಮಹಿಳೆಯರು ಸಂತೋಷ ವ್ಯಕ್ತಪಡಿಸುತ್ತಿದ್ದಾರೆ. ಅನೇಕ ಮಹಿಳೆಯರು ನಿಮ್ಮ ಹೆಸರಲ್ಲಿ ಮಂಜುನಾಥ ಸ್ವಾಮಿಗೆ ಸೇವೆ ಮತ್ತು ಕಾಣಿಕೆ ಸಲ್ಲಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Bengaluru: ಗಂಡ ಹೆಂಡತಿ ಜಗಳಕ್ಕೆ ಕಾರು ಪಲ್ಟಿ: ತಪ್ಪಿದ ಅನಾಹುತ

‘ರಾಜ್ಯದಲ್ಲಿ 14ನೇ ಬಜೆಟ್‌ ಮಂಡಿಸಿದ ನಿಮಗೆ ಅಭಿನಂದನೆಗಳು. ಅನೇಕ ಯೋಜನೆಗಳ ಮೂಲಕ ಜನರಿಗೆ ಉಪಯುಕ್ತ ಕಾರ್ಯಕ್ರಮಗಳನ್ನು ನೀಡಿದ್ದೀರಿ. ಬಜೆಟ್‌ನಲ್ಲಿ ಜೈನ ಸಮುದಾಯಕ್ಕೆ ವಿಶೇಷ ಅನುದಾನ ನೀಡಿ ಪ್ರೋತ್ಸಾಹಿಸಿರುವ ವಿಚಾರ ತಿಳಿದು ಇಡೀ ಸಮಾಜಕ್ಕೆ ಸಂತೋಷವಾಗಿದೆ. ಎಲ್ಲರ ಪರವಾಗಿ ಅಭಿನಂದನೆಗಳು’ ಎಂದು ಹೆಗ್ಗಡೆ ತಿಳಿಸಿದ್ದಾರೆ. ಅಲ್ಲದೆ, ಅವಕಾಶ ಇದ್ದಾಗ ಬಂದು ಮಂಜುನಾಥ ಸ್ವಾಮಿಯ ದರ್ಶನ ಪಡೆದುಕೊಂಡು ಹೋಗಬೇಕಾಗಿ ಅಪೇಕ್ಷಿಸಿರುವ ಅವರು, ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ನಿಮ್ಮ ಮೇಲಿರಲಿ ಎಂದು ತಮ್ಮ ಪತ್ರದಲ್ಲಿ ಆರೈಸಿದ್ದಾರೆ.