ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾನು ಭವಿಷ್ಯ ನುಡಿಯಲು ಆಗುವುದಿಲ್ಲ. ನಮ್ಮ ರಾಜಕೀಯ ನಿಯಮಾವಳಿಗಳ ಪ್ರಕಾರ ನಾವಿರಬೇಕಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. 

ಧಾರವಾಡ (ಅ.28): ಮುಖ್ಯಮಂತ್ರಿ ಬದಲಾವಣೆ ಬಗ್ಗೆ ನಾನು ಭವಿಷ್ಯ ನುಡಿಯಲು ಆಗುವುದಿಲ್ಲ. ನಮ್ಮ ರಾಜಕೀಯ ನಿಯಮಾವಳಿಗಳ ಪ್ರಕಾರ ನಾವಿರಬೇಕಿದೆ ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ್‌ ಲಾಡ್‌ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲದಕ್ಕೂ ಹೈಕಮಾಂಡ್ ಇದೆ. ಕೆಲವು ವಿಚಾರಗಳನ್ನು ನಮ್ಮಲ್ಲಿಯೇ ಇಟ್ಟುಕೊಳ್ಳಬೇಕಾಗುತ್ತದೆ. ಹೀಗಾಗಿ, ನಾವು ಚರ್ಚೆ ಮಾಡುವಂತಿಲ್ಲ ಎಂದರು. ಹೈಕಮಾಂಡ್ ಹೇಳಿದರೆ ಸಚಿವ ಸಂಪುಟ ವಿಸ್ತರಣೆ ಮಾಡಬೇಕಾಗುತ್ತದೆ. ಯಾರನ್ನು ಸಂಪುಟದಲ್ಲಿ ತೆಗೆದುಕೊಳ್ಳಬೇಕು ಎಂಬುದು ಸಹ ಹೈಕಮಾಂಡ್ ಮತ್ತು ಮುಖ್ಯಮಂತ್ರಿಗೆ ಬಿಟ್ಟಿದ್ದು. ಶಾಸಕ ಕೋನರಡ್ಡಿ ಮಾತ್ರವಲ್ಲದೇ ಬಹಳಷ್ಟು ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ ಎಂದರು.

Add Asianetnews Kannada as a Preferred SourcegooglePreferred

ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ

ಸುಮಾರು ವರ್ಷಗಳ ನಂತರ ಜಿಲ್ಲಾಭಿವೃದ್ಧಿ ಯೋಜನೆ ರೂಪಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದು, ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿಯಿಂದ ರಾಜ್ಯದಲ್ಲಿಯೇ ಮೊದಲನೆಯದಾಗಿ ಅಭಿವೃದ್ಧಿ ಯೋಜನಾ ವರದಿ ಕುರಿತ ಸಭೆ ಆಯೋಜಿಸಲಾಗಿದೆ. ಅಭಿವೃದ್ಧಿ ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಕ್ಸೂಚಿ ಆಗಿರಬೇಕು ಎಂದು ಕಾರ್ಮಿಕ ಇಲಾಖೆ ಸಚಿವ ಸಂತೋಷ ಲಾಡ್ ಹೇಳಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿಯ ಪ್ರಥಮ ಸಭೆ ಜರುಗಿಸಿದ ಅವರು, ಸರ್ಕಾರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವಕಾಶವಾಗುವಂತೆ ಅಗತ್ಯ ಅನುದಾನ ನೀಡಲು ಕ್ರಮವಹಿಸಲಿದೆ.

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳು ತಮ್ಮ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಅಗತ್ಯ ಕಾಮಗಾರಿ, ಕಾರ್ಯಕ್ರಮಗಳನ್ನು ಯೋಜನಾ ವರದಿಯಲ್ಲಿ ಸೇರಿಸಬೇಕು. ಯೋಜನಾ ವರದಿ ಜಿಲ್ಲೆಯ ಸಮಗ್ರ ಅಭಿವೃದ್ಧಿಯ ಮುನ್ನೋಟವಾಗಬೇಕು. ಗ್ರಾಮೀಣ ಅಭಿವೃದ್ಧಿಗೆ ಮತ್ತು ನಗರ ಅಭಿವೃದ್ಧಿಗೆ ವಿಸ್ತೃತ ವರದಿ ರೂಪಿಸಬೇಕು. ಸ್ಥಳೀಯ ಸಂಸ್ಥೆಗಳಿಂದ ನಿಯಮಾನುಸಾರ ಬೇಡಿಕೆ ಪಡೆದುಕೊಳ್ಳಬೇಕು ಎಂದರು. ಮೂಲಭೂತ ಸೌಕರ್ಯಗಳ ಹೆಚ್ಚಳ ಜೊತೆಗೆ ಜನರ ಕಲ್ಯಾಣ ಕಾರ್ಯಕ್ರಮಗಳ ಸೇರ್ಪಡೆ ಮಾಡಿ ಉತ್ತಮ ಯೋಜನೆ ರೂಪಿಸಬೇಕು. ಜನರ ಜೀವನಮಟ್ಟ ಸುಧಾರಣೆಗೆ ಹಾಗೂ ಆರ್ಥಿಕ ಚಟುವಟಿಕೆಗಳ ಹೆಚ್ಚಳಕ್ಕೆ ಅಗತ್ಯ ಕಾರ್ಯಕ್ರಮಗಳನ್ನು ಅಭಿವೃದ್ಧಿ ಯೋಜನಾ ವರದಿಯಲ್ಲಿ ಸೇರಿಸಬೇಕು ಎಂದರು.

ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮ್ಮದ ಮಾತನಾಡಿ, ಜಿಲ್ಲೆಯ ಸಮಗ್ರ ವರದಿಗೆ ಅಧಿಕಾರಿಗಳು ಅಗತ್ಯ ಯೋಜನಾ ವರದಿ ರೂಪಿಸಬೇಕು. ಎಲ್ಲ ಸಮುದಾಯಗಳ ಪ್ರಗತಿಗೆ ಪೂರಕವಾಗಿರಬೇಕು ಎಂದರು. ವಿಧಾನಪರಿಷತ್‌ ಸದಸ್ಯ ಎಫ್.ಎಚ್. ಜಕ್ಕಪ್ಪನವರ ಮಾತನಾಡಿ, ಜಿಲ್ಲೆಯ ಎಸ್.ಸಿ., ಎಸ್.ಟಿ. ಸಮುದಾಯ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಗೊಳ್ಳಬೇಕು ಎಂಬ ಸಲಹೆ ನೀಡಿದರು. ಜಿಲ್ಲಾಧಿಕಾರಿ ದಿವ್ಯಪ್ರಭು ಮಾತನಾಡಿ, ರಾಜ್ಯದಲ್ಲಿ ಮೊದಲ ಬಾರಿಗೆ ಜಿಲ್ಲೆಯಲ್ಲಿ ಜಿಲ್ಲಾ ಯೋಜನಾ ಅಭಿವೃದ್ಧಿ ಸಮಿತಿ ಜರುಗುತ್ತಿದೆ. ಇದು ಪೂರ್ವಭಾವಿ ಸಭೆ ಆಗಿದ್ದು, ಎಲ್ಲ ಸಮುದಾಯ, ಗ್ರಾಮ ಮತ್ತು ನಗರ ಅಭಿವೃದ್ಧಿಗೆ ಅಗತ್ಯವಿರುವ ಯೋಜನೆಯನ್ನು ರೂಪಿಸಲಾಗುತ್ತದೆ. ಮುಂದಿನ ವಾರ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಜಿಲ್ಲಾ ಯೋಜನಾ ವರದಿ ತಯಾರಿಸುವ ಕುರಿತು ಕಾರ್ಯಾಗಾರ ಮಾಡಲಾಗುವುದು ಎಂದರು.