ರಾಜ್ಯದಲ್ಲಿ ಉಪ ಚುನಾವಣೆ ಮುಕ್ತಾಯವಾದ ಬಳಿಕ ಮೊದಲ ಬಾರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಅವರನ್ನು ಜಾರಕಿಹೊಳಿ ಭೇಟಿ ಮಾಡಿದ್ದಾರೆ. 

ಬೆಂಗಳೂರು (ಏ.22): ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ನಿವಾಸಕ್ಕೆ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸತೀಶ್‌ ಜಾರಕಿಹೊಳಿ ಬುಧವಾರ ಭೇಟಿ ನೀಡಿ ಕೆಲ ಕಾಲ ಸಮಾಲೋಚನೆ ನಡೆಸಿದರು. 

Add Asianetnews Kannada as a Preferred SourcegooglePreferred

ಉಪಚುನಾವಣೆ ಬಳಿಕ ಮೊದಲ ಬಾರಿಗೆ ಡಿ.ಕೆ.ಶಿವಕುಮಾರ್‌ರನ್ನು ಭೇಟಿಯಾದ ಅವರು ಚುನಾವಣೆಯಲ್ಲಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್‌ ಜಾರಕಿಹೊಳಿ, ಇದು ಸಾಮಾನ್ಯ ಭೇಟಿ ಅಷ್ಟೆ. ಬೆಳಗಾವಿ ಚುನಾವಣೆಯ ಬಗ್ಗೆ ಕೆಪಿಸಿಸಿ ಅಧ್ಯಕ್ಷರಿಗೆ ಮಾಹಿತಿ ನೀಡಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗೊಂದಲದ ಸರ್ಕಾರ: ಇದೇ ವೇಳೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಕೋವಿಡ್‌ ನಿಯಂತ್ರಣ ವಿಚಾರದಲ್ಲಿ ಸರ್ಕಾರ ಎಡವಿದೆ. ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಲ್ಲಿ ಮೊದಲಿನಿಂದಲೂ ಗೊಂದಲದಲ್ಲಿದೆ. 

ಸುಧಾಕರ್‌, ಅಶೋಕ್‌ ಸಭೆ ಮಾಡೋದು ಬಿಟ್ಟು ಕೆಲಸ ಮಾಡಲಿ: ಡಿಕೆಶಿ .

ಮುಖ್ಯಮಂತ್ರಿಗಳು ಒಂದು ಹೇಳಿದರೆ ಸಚಿವರು ಒಂದು ಹೇಳುತ್ತಾರೆ. ಸರ್ಕಾರದಲ್ಲಿ ಸಮನ್ವಯತೆ ಇಲ್ಲ. ಈಗ ರಾಜ್ಯಪಾಲರು ಮಧ್ಯಪ್ರವೇಶಿಸಿದ್ದಾರೆ. ಅವರು ಸಭೆ ಕರೆಯುವ ಬದಲು ತಜ್ಞರ ಸಲಹೆ ಪಡೆಯುವಂತೆ ಸರ್ಕಾರಕ್ಕೆ ಸಲಹೆ ಸೂಚನೆ ನೀಡಬಹುದಿತ್ತು ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಕೊರೋನಾ ನಿಯಂತ್ರಣ ಆಗುವವರೆಗೂ ಮುಂದೂಡಬೇಕೆಂದು ಒತ್ತಾಯಿಸಿದರು.