ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾಪ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರದ ಮಟ್ಟದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಳಗಾವಿ (ಜು.09): ಬೆಳಗಾವಿ ಜಿಲ್ಲಾ ವಿಭಜನೆ ಪ್ರಸ್ತಾಪ ಸಂಬಂಧ ನಿರ್ಧಾರ ತೆಗೆದುಕೊಳ್ಳುವುದು ಸರ್ಕಾರದ ಮಟ್ಟದಲ್ಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ವಿಭಜನೆಗೆ ಎಲ್ಲ ಶಾಸಕರು, ಎಲ್ಲ ಪಕ್ಷದ ನಾಯಕರು ಈಗಾಗಲೇ ಹೇಳಿದ್ದೇವೆ. ಸರ್ಕಾರ ಯಾವಾಗ ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವುದನ್ನು ಕಾಯ್ದುನೋಡಬೇಕು ಎಂದರು. ಹಿಡಕಲ್ ಜಲಾಶಯಕ್ಕೆ ಬಾಗಿನ ಅರ್ಪಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ನಾವು ಆ ಅಧಿಕಾರವನ್ನು ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ ಬಿಟ್ಟು ಕೊಟ್ಟಿದ್ದೇವೆ. ಅವರೇ ಬಾಗಿನ ಅರ್ಪಣೆ ಮಾಡುತ್ತಾರೆ. ಅದಕ್ಕಾಗಿ ಜಗಳ ಬೇಡವೆಂದು ಅವರಿಗೆ ಅಧಿಕಾರ ನೀಡಿದ್ದೇವೆ ಎಂದರು.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು ಚುನಾವಣೆ ಆಗುವುದಾದರೇ ಆಗಲಿ, ನಮ್ಮ ಪಕ್ಷದಿಂದ ನಾವು ಸಿದ್ಧತೆ ಮಾಡಿಕೊಂಡಿದ್ದೇವೆ. ನನ್ನ ಪುತ್ರ ರಾಹುಲ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸ್ಪರ್ಧಿಸುವ ವಿಚಾರ ಇನ್ನೂ 3 ತಿಂಗಳ ಸಮಯವಿದೆ. ಕಾಯ್ದುನೋಡೋಣ ಎಂದರು.ರಾಜ್ಯ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣಜಿತ ಸಿಂಗ್ ಸುರ್ಜೇವಾಲಾ ಅವರು ಇನ್ನು 2 ಬಾರಿ ರಾಜ್ಯಕ್ಕೆ ಬರುತ್ತಾರೆ. ಎಲ್ಲ ಶಾಸಕರನ್ನು ಭೇಟಿ ಮಾಡುತ್ತಾರೆ ಎಂದರು.
ನೀರು ಬಿಡಲು ಸರ್ಕಾರದ ಮಾನದಂಡ ಅಗತ್ಯ: ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಬಿಡುಗಡೆಗೊಳಿಸಲು ಸರ್ಕಾರದ ಮಾನದಂಡ ಅನುಸರಿಸಿ, ನಿಯಮ ಪಾಲಿಸಬೇಕಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಒಯ್ಯುವ ಕಾಮಗಾರಿ ಪ್ರಗತಿ ಹಂತದಲ್ಲಿದ್ದು, ಇಲ್ಲಿಂದ 1 ಟಿಎಂಸಿ ನೀರು ಬಿಡುಗಡೆಗೊಳಿಸುವ ಕುರಿತು ಅಧಿಕಾರಿಗಳು ಈಗಾಗಲೇ ಪತ್ರ ಬರೆದಿದ್ದಾರೆ. ಆದೇಶ ಕೂಡ ಹೊರಡಿಸಿದ್ದಾರೆ ಅದರಂತೆ ನಿಯಮ ಪಾಲಿಸಬೇಕು ಎಂದರು.
ಹಿಡಕಲ್ ಡ್ಯಾಮ್ ನಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಹರಿಸಲು ಆಗುವುದಿಲ್ಲ ಎಂದು ಕಾಮಗಾರಿ ಆರಂಭಕ್ಕೂ ಮುನ್ನ ತಿಳಿಸಿದ್ದೇವು. ಆದರೆ, ಅಧಿಕಾರಿಗಳೊಂದಿಗೆ ಮಾಹಿತಿ ಪಡೆದು ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಸರ್ಕಾರವು ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ ಮಾಡಲು ಆದೇಶಿಸಿದೆ. ಧಾರವಾಡ ಕೈಗಾರಿಕಾ ಪ್ರದೇಶಕ್ಕೆ 0.58 ಟಿಎಂಸಿ ನೀರನ್ನು ಪೂರೈಸಲು ನಿರ್ಧಾರ ಮಾಡಿ ಬಳಿಕ ಕೆಐಎಡಿಬಿ ಟೆಂಡರ್ ಆಗಿದೆ ಎಂದು ಕಾಮಗಾರಿಗಳನ್ನು ಆರಂಭಿಸಲಾಗಿದೆ. ಆದರೆ, ಮುಂದೆ ನೀರು ಬಿಡುಗಡೆ ಮಾಡುವಾಗ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದರು.
2018ರಲ್ಲಿ ಸಿಎಂ ಸಿದ್ದರಾಮಯ್ಯನವರ ಅವಧಿಯಲ್ಲಿ ₹100 ಕೋಟಿ ವೆಚ್ಚದಲ್ಲಿ ಚಾಲನೆ ನೀಡಿದ ರಾಯಬಾಗ ತಾಲೂಕಿನ 39 ಕೆರೆ ತುಂಬಿಸುವ ಯೋಜನೆ ಕಾಮಗಾರಿ ಶೇ.99 ಮುಗಿದಿದ್ದು, ಈ ಯೋಜನೆಯಿಂದ ರಾಯಬಾಗ ತಾಲೂಕಿನ ಮಳೆಯಾಶ್ರಿತ ಪ್ರದೇಶಗಳಿಗೆ ಅನುಕೂಲವಾಗಲಿದೆ. ಈ ಹಿಂದೆ ಸಿದ್ದರಾಮಯ್ಯನವರ ಅವಧಿಯಲ್ಲಿ ಚಾಲನೆ ನೀಡಿದ ಪ್ರಮುಖ ಕಾಮಗಾರಿಗಳು ಮುಕ್ತಾಯದ ಹಂತದಲ್ಲಿದ್ದು, ಶೀಘ್ರವೇ ಸಿಎಂ ಲೋಕಾರ್ಪಣೆಗೊಳಿಸಲಿದ್ದಾರೆ. ಅಲ್ಲದೇ ಸಿಎಂ ಅವರು ಹುದಲಿ ಮೇಲ್ಸೇತುವೆ, ಡಿಸಿ ಕಚೇರಿ ಸೇರಿದಂತೆ ಜಿಲ್ಲೆಯಲ್ಲಿನ ಅಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
