ರಮೇಶ್ರನ್ನ ಕಾಂಗ್ರೆಸ್ಗೆ ಮತ್ತೆ ಕರೆಯಲ್ಲ: ಸತೀಶ್ ಜಾರಕಿಹೊಳಿ
* ರಮೇಶ್ ಪಕ್ಷ ಸೇರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ
* ಅವಧಿ ಮುಗಿದಿರುವ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ
* ಎಲ್ಲಾ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವುದಿಲ್ಲ. ಹಳಬರೂ ಇರಬೇಕು. ಹೊಸಬರೂ ಬರಬೇಕು
ಬೆಂಗಳೂರು(ಜೂ.27): ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮತ್ತೆ ಪಕ್ಷ ಸೇರುವ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಅವರನ್ನು ಕಾಂಗ್ರೆಸ್ಗೆ ಆಹ್ವಾನಿಸುವುದಿಲ್ಲ. ಹೀಗಿರುವಾಗ ಅವರು ಪಕ್ಷವನ್ನು ಸೇರುವ ಪ್ರಶ್ನೆ ಉದ್ಬವಿಸುವುದಿಲ್ಲ ಎಂದರು. ಕೆಪಿಸಿಸಿ ಅಧ್ಯಕ್ಷರೊಂದಿಗೆ ನಡೆದ ಸಭೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚಿಸಲಾಗಿದೆ. ಈ ಬಗ್ಗೆ ಒಂದು ವಾರದಲ್ಲಿ ವರದಿ ನೀಡಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ ಎಂದು ಹೇಳಿದರು.
ಬಿಎಸ್ವೈಗೆ ಟೆನ್ಷನ್ ಕೊಡಲು ಮುಂಬೈಗೆ ಹೋದ ಜಾರಕಿಹೊಳಿಗೆ ಇಂಟರ್ನ್ಯಾಷನಲ್ ಟೆನ್ಷನ್
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಅವಧಿ ಮುಗಿದಿರುವ ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನು ಬದಲಾಯಿಸಲಾಗುತ್ತದೆ. ಕೆಲವು ಜಿಲ್ಲೆಗಳಲ್ಲಿ ಜಿಲ್ಲಾಧ್ಯಕ್ಷರ ಮೂರು ವರ್ಷದ ಅವಧಿ ಪೂರ್ಣಗೊಂಡಿದೆ. ಇನ್ನು ಕೆಲವೆಡೆ ಬದಲಾವಣೆ ಮಾಡುವಂತೆ ಬೇಡಿಕೆ ಇದ್ದರೆ ಮತ್ತೆ ಕೆಲವೆಡೆ ಸ್ವಯಂ ಪ್ರೇರಿತವಾಗಿ ಬಿಟ್ಟುಕೊಡಲು ಸಿದ್ಧರಿದ್ದಾರೆ. ಆದರೆ, ಎಲ್ಲಾ ಜಿಲ್ಲಾಧ್ಯಕ್ಷರನ್ನು ಬದಲಾಯಿಸುವುದಿಲ್ಲ. ಹಳಬರೂ ಇರಬೇಕು. ಹೊಸಬರೂ ಬರಬೇಕು. ಅಂತಿಮ ನಿರ್ಧಾರವನ್ನು ಒಂದು ವಾರದಲ್ಲಿ ತೆಗೆದುಕೊಳ್ಳಲಾಗುವುದು ಎಂದರು.