ರಾಜೀವ್‌ಗಾಂಧಿ ಆರೋಗ್ಯ ವಿವಿ ಕಾಲೇಜನ್ನು ಜಿಲ್ಲಾ ಕೇಂದ್ರ ಬಿಟ್ಟು ಕನಕಪುರ ತಾಲೂಕಿಗೆ ಸ್ಥಳಾಂತರ ಮಾಡುವುದು ರಾಮನಗರಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. 

ಚನ್ನಪಟ್ಟಣ (ಆ.28): ರಾಜೀವ್‌ಗಾಂಧಿ ಆರೋಗ್ಯ ವಿವಿ ಕಾಲೇಜನ್ನು ಜಿಲ್ಲಾ ಕೇಂದ್ರ ಬಿಟ್ಟು ಕನಕಪುರ ತಾಲೂಕಿಗೆ ಸ್ಥಳಾಂತರ ಮಾಡುವುದು ರಾಮನಗರಕ್ಕೆ ಮಾಡಿದ ಅವಮಾನವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲಾ ಕೇಂದ್ರ ಬಿಟ್ಟು ಅಲ್ಲೆಲ್ಲೋ ಮೂಲೆಗೆ ಮೆಡಿಕಲ್‌ ಕಾಲೇಜು ಸ್ಥಳಾಂತರ ಮಾಡುವುದು ಅವೈಜ್ಞಾನಿಕವಾಗಿದೆ. ಇದರಿಂದ ವೈದ್ಯಕೀಯ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮೇಲೆ ತೀವ್ರ ಪರಿಣಾಮ ಬೀರಲಿದೆ. ಜೊತೆಗೆ ಕನಕಪುರದಲ್ಲಿ ಮೆಡಿಕಲ್‌ ಕಾಲೇಜು ಪ್ರಾರಂಭವಾದರೆ ವಿದ್ಯಾರ್ಥಿಗಳು ಬರಲ್ಲ ಎಂದು ಪರೋಕ್ಷವಾಗಿ ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕಿಡಿಕಾರಿದರು.

Add Asianetnews Kannada as a Preferred SourcegooglePreferred

ಮೆಡಿಕಲ್‌ ಕಾಲೇಜು ಸ್ಥಳಾಂತರ ವಿರೋಧಿಸಿ ಈಗಾಗಲೇ ಸಾರ್ವಜನಿಕರು, ಸಂಘಟಕರು ಹೋರಾಟ ಆರಂಭಿಸಿದ್ದಾರೆ. ಯಾವುದೇ ಕಾರಣಕ್ಕೂ ಮೆಡಿಕಲ್‌ ಕಾಲೇಜು ಸ್ಥಳಾಂತರ ಮಾಡಬಾರದು ಎಂದು ರಾಜ್ಯ ಆರೋಗ್ಯ ಸಚಿವರು ಹಾಗೂ ಉಪಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು. 2006ರಲ್ಲಿ ರಾಮನಗರಕ್ಕೆ ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಬಂತು. ಜಿಲ್ಲಾ ಕೇಂದ್ರದಲ್ಲಿ ದೊಡ್ಡ ಆಸ್ಪತ್ರೆ ಬೇಕು ಅಂತ ನಾನು ಕನಸು ಕಂಡಿದ್ದೆ. 600 ಕೋಟಿ ರು ವೆಚ್ಚದಲ್ಲಿ ಹಿಂದಿನ ಸರ್ಕಾರ ಎರಡೂ ಸದನದಲ್ಲಿ ಅನುಮೋದನೆ ಕೊಟ್ಟಿತ್ತು. ಈಗ ಮೆಡಿಕಲ್‌ ಕಾಲೇಜು ಸ್ಥಳಾಂತರ ಮಾಡುವುದು ಎಷ್ಟುಸರಿ ಎಂದು ಪ್ರಶ್ನಿಸಿದರು.

ಪಿಎಸ್‌ಐ ಮರು ಪರೀಕ್ಷೆ: ಸಿದ್ದರಾಮಯ್ಯ ಸರ್ಕಾರಕ್ಕೆ ಅಗ್ನಿಪರೀಕ್ಷೆ

ಮೈತ್ರಿ ಸರ್ಕಾರದ ಅವಧಿಯಲ್ಲಿ ಕನಕಪುರಕ್ಕೆ ನಾನೇ ಮೆಡಿಕಲ್‌ ಕಾಲೇಜಿಗೆ 100 ಕೋಟಿ ಹಣ ಕೊಟ್ಟಿದ್ದೆ. ಆಗ ಡಿ.ಕೆ.ಶಿವಕುಮಾರ್‌ ವೈದ್ಯಕೀಯ ಸಚಿವರಾಗಿದ್ದರು. ಟೆಂಡರ್‌ ಕೊಟ್ಟಿದ್ದೂ ಕೂಡಾ ಇನ್ನೂ ಜೀವಂತವಾಗಿದೆ. ಆ ಬಳಿಕ ಬಿಜೆಪಿ ಸರ್ಕಾರ ಬಂದು ಕನಕಪುರಕ್ಕೆ ಕೊಟ್ಟಿದ್ದ ಕಾಲೇಜನ್ನ ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋಯ್ತು. ಈಗ ನಿಮ್ಮದೇ ಸರ್ಕಾರ ಇದೆ. ನಾನು ಕೊಟ್ಟಿದ್ದ ಆ ಮೆಡಿಕಲ್‌ ಕಾಲೇಜಿಗೆ ಜೀವಕೊಡಿ. ಆದರೆ, ರಾಜೀವ್‌ ಗಾಂಧಿ ಮೆಡಿಕಲ್‌ ಕಾಲೇಜು ಸ್ಥಳಾಂತರ ಬೇಡ ಎಂದು ಸಲಹೆ ನೀಡಿದರು.

ಚಿತ್ರದುರ್ಗದ ಹೊರವಲಯದಲ್ಲಿ ಮೆಡಿಕಲ್ ಕಾಲೇಜು ನಿರ್ಮಿಸಿ: IMA ಅಧ್ಯಕ್ಷರಿಂದ ಸರ್ಕಾರಕ್ಕೆ ಒತ್ತಾಯ!

ರಾಮನಗರ ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್‌ ಕಾಲೇಜು ಬಂದ್ರೆ ಸುತ್ತಮುತ್ತಲಿನ ತಾಲೂಕಿಗಳಿಗೂ, ವಿದ್ಯಾರ್ಥಿಗಳಿಗೂ ಅನುಕೂಲವಾಗಲಿದೆ. ಕನಕಪುರಕ್ಕೆ ಮೆಡಿಕಲ್‌ ಕಾಲೇಜು ಬೇಕು ಅಂದ್ರೆ ಅವರದ್ದೇ ಸರ್ಕಾರ ಇದೆ. ಹೊಸ ಕಾಲೇಜು ಮಂಜೂರು ಮಾಡಿಕೊಳ್ಳಲಿ. ಮುಂದಿನ ಬಜೆಟ್‌ನಲ್ಲಿ ರಾಮನಗರಕ್ಕೆ ಮೆಡಿಕಲ್‌ ಕಾಲೇಜು ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವರ ಹೇಳಿಕೆಯನ್ನು ಖಂಡಿಸಿದ ಕುಮಾರಸ್ವಾಮಿ ಅವರು, ಬಜೆಟ್‌ನಲ್ಲಿ ರಾಮನಗರಕ್ಕೆ ತರೋದು ಬೇರೆ ವಿಚಾರ. ಒಂದು ವೇಳೆ ಮುಂದಿನ ಬಜೆಟ್‌ ಮಂಡನೆ ಆಗದಿದ್ರೆ ಏನು ಮಾಡೋದು ಎಂದು ತಿರುಗೇಟು ನೀಡಿದರು.