ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ. ಹಾಗಾಗಿ ಅವರು ಮುಂದೆಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.

ಬೆಂಗಳೂರು (ಅ.31): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ. ಹಾಗಾಗಿ ಅವರು ಮುಂದೆಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ ಎಐಸಿಸಿ ಅಧ್ಯಕ್ಷರು, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರೂ ಸೇರಿ ಎಲ್ಲರೂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣಕ್ಕೆ ಅನಿವಾರ್ಯ ಎಂದಿದ್ದಾರೆ.

Add Asianetnews Kannada as a Preferred SourcegooglePreferred

ಇದನ್ನು ಯಾರೂ ವಿರೋಧ ಮಾಡಿಲ್ಲ. ಸಿದ್ದರಾಮಯ್ಯ ಅವರು ಮುಂದಿನ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆ ಎಂಬ ನಂಬಿಕೆ ನಮ್ಮದು ಎಂದರು. ನಮ್ಮ ಪಕ್ಷದ ಶಾಸಕರಾಗಲಿ, ಮಂತ್ರಿಗಳಾಗಲಿ ಅಥವಾ ನಾಯಕರಾಗಲಿ ಯಾರೂ ಪಕ್ಷದ ವಿರುದ್ಧ, ನಾಯಕತ್ವದ ವಿರುದ್ಧ ಹೇಳಿಕೆಗಳನ್ನು ನೀಡಿಲ್ಲ ಎಂದರು. ಅವರೆಲ್ಲರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಪರವಾಗಿಯೇ ಹೇಳಿಕೆಗಳನ್ನು ನೀಡಿದ್ದಾರೆ ಎಂದರು.

ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಬಹಳಷ್ಟು ರಾಜಕೀಯ ಚಟುವಟಿಕೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ನಾವೆಲ್ಲಾ ಕಾಂಗ್ರೆಸ್ ಪಕ್ಷದ ಕಟ್ಟಾಳುಗಳು. ಕಾಂಗ್ರೆಸ್ ಪಕ್ಷಕ್ಕೆ ಒಳ್ಳೆಯದಾಗಬೇಕಾದರೆ ಸಿದ್ದರಾಮಯ್ಯ ಅವರು ಚುನಾವಣೆಗೆ ಸ್ಪರ್ಧೆ ಮಾಡಲೇಬೇಕು ಎಂದು ಸುರೇಶ್ ಹೇಳಿದರು.

ಸಂಪುಟ ಪುನರ್‌ರಚನೆ ಹೈಕಮಾಂಡ್ ನಿರ್ಧಾರ

ಸಚಿವ ಸಂಪುಟ ಪುನರ್‌ ರಚನೆ, ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ನೇಮಕಾತಿ ಸೇರಿ ಇನ್ನಿತರ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳಲು ಹೈಕಮಾಂಡ್ ಸಮರ್ಥವಾಗಿದೆ. ಈ ಬಗ್ಗೆ ನಾವು ಅನಗತ್ಯವಾಗಿ ಮಾತನಾಡುವ ಅವಶ್ಯಕತೆಯಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ಅವರಿದ್ದಾರೆ. ಮುಂದೆ ಏನಾಗಬೇಕು? ಏನು ನಿರ್ಧಾರ ತೆಗೆದುಕೊಳ್ಳಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಹೈಕಮಾಂಡ್‌ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು.