ಕೆಪಿಸಿಸಿ ಅಧ್ಯಕ್ಷರ ಅಧಿಕಾರ ಸ್ವೀಕಾರ ಕಾರ್ಯಕ್ರಮ ಸಂಬಂಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ತೊಡೆತಟ್ಟಿದ್ದಾರೆ.

ಬೆಂಗಳೂರು, (ಜೂನ್.09): ಕೆಪಿಸಿಸಿಯ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪದಗ್ರಹಣ ಸಮಾರಂಭಕ್ಕೆ ಮತ್ತೆ ಅನುಮತಿ ನಿರಾಕರಿಸಿರುವ ಸರ್ಕಾರದ ಕ್ರಮವನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ತೀವ್ರವಾಗಿ ಖಂಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಕಾರದ ಈ ನಿರ್ದಾರ ರಾಜಕೀಯ ಪ್ರೇರಿತ. ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪದಗ್ರಹಣ ಸಮಾರಂಭಕ್ಕೆ ಎರಡನೇ ಬಾರಿ ಸರ್ಕಾರ ಅನುಮತಿ ನಿರಾಕರಿಸಿದೆ. ಇದು ಪ್ರತಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನವಾಗಿದೆ. ಸರ್ಕಾರ ರಾಜಕೀಯ ದುರುದ್ದೇಶದಿಂದ ಈ ತೀರ್ಮಾನ ಕೈಗೊಂಡಿದೆ. 

ಡಿಕೆಶಿಗೆ ಏಕೋ ಮುಹೂರ್ತ ಕೂಡಿ ಬರ್ತಿಲ್ಲ: ಕೆಪಿಸಿಸಿ ಅಧ್ಯಕ್ಷರ ಆಟಕ್ಕೆ ಸರ್ಕಾರ ಅಡ್ಡಗಾಲು

ದೇಶದ ಗೃಹ ಸಚಿವರಾದ ಅಮಿತ್ ಶಾ ಅವರು ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ವರ್ಚುವಲ್ ರ್ಯಾಲಿ ನಡೆಸುವಾಗ ಅನ್ವಯ ಆಗದ ನಿಯಮಗಳು ಕೆಪಿಸಿಸಿ ಅಧ್ಯಕ್ಷರ ಪದಗ್ರಹಣ ಸಮಾರಂಭಕ್ಕೆ ಅನ್ವಯ ಆಗುವುದೇ ಎಂದು ಸಿದ್ದರಾಮಯ್ಯ ಅವರು ಪ್ರಶಿಸಿದ್ದಾರೆ. 

ಸರ್ಕಾರ ಕೂಡಲೇ ಪದಗ್ರಹಣ ಸಮಾರಂಭಕ್ಕೆ ಅನುಮತಿ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಸರ್ಕಾರ ಏನೇ ದಮನಕಾರಿ ಪ್ರವೃತ್ತಿ ತೋರಿಸಿದರೂ ನಾವು ಕಾರ್ಯಕ್ರಮ ಮಾಡುತ್ತೇವೆ. ನಾವು ಕಾನೂನು ಗೌರವಿಸುವವರೇ ಹೊರತು ಕಾನೂನು ಭಂಗ ಮಾಡುವವರಲ್ಲ. ಕಾನೂನಿನ ಅಡಿಯಲ್ಲೇ ನಾವು ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.