ಬಿಜೆಪಿ ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.  ಏನು ಮುಖ್ಯಮಂತ್ರಿಗಳೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಈಗ ಯಾರೋ ನಿಮಗೆ ಚುಚ್ಚಿದಕ್ಕೆ ನೋವಾಯ್ತಾ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು (ಸೆ.22): ಪೇ ಸಿಎಂ ವಿಚಾರಕ್ಕೆ ಸಂಬಂಧಿಸಿ ಕಾಂಗ್ರೆಸ್- ಬಿಜೆಪಿ ನಡುವೆ ನಡೆಯುತ್ತಿರುವ ಜಟಾಪಟಿ ತಾರಕಕ್ಕೇರಿದೆ. ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಗೆ ಬಿಜೆಪಿ ಪಕ್ಷವು ಸ್ಕ್ಯಾಮ್ ರಾಮಯ್ಯ ಎಂಬ ಹೆಸರಿನಡಿ ಕಾಂಗ್ರೆಸ್ ಅಧಿಕಾರವಧಿಯ ಭ್ರಷ್ಟಾಚಾರದ ಹಗರಣದ ಪುಸ್ತಕ ಬಿಡುಗಡೆ ಮಾಡಿದೆ. ಇದಕ್ಕೆಆಡಳಿತ ಪಕ್ಷ ಬಿಜೆಪಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಬಿಜೆಪಿ ಸರಕಾರದ ವಿರುದ್ಧ ಸರಣಿ ಟ್ವೀಟ್ ಮಾಡುವ ಮೂಲಕ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ ಎಚ್ಚರ! ರಾಜ್ಯ ಸರ್ಕಾರದ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಡಿ.ಕೆ.ಶಿವಕುಮಾರ್ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಮುಖ್ಯಮಂತ್ರಿಗಳು ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ ಕುರುಡಾಗಿದೆ?.

Add Asianetnews Kannada as a Preferred SourcegooglePreferred

ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ.

ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ದದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಅಂತಹವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ.

ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಭಾರತೀಯ ಜನತಾ ಪಕ್ಷಕ್ಕೆ ಸಲ್ಲುತ್ತದೆ. ಏನು ಮುಖ್ಯಮಂತ್ರಿಗಳೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಈಗ ಯಾರೋ ನಿಮಗೆ ಚುಚ್ಚಿದಕ್ಕೆ ನೋವಾಯ್ತಾ? ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಟ್ವೀಟ್ ಮೂಲಕ ಪ್ರಶ್ನಿಸಿದ್ದಾರೆ. 

Scroll to load tweet…

Pay CM Posters: ಪೇ ಸಿಎಂ ಪೋಸ್ಟರ್‌ ತನಿಖೆಗೆ ಪೊಲೀಸ್‌ ಆಯುಕ್ತ ಆದೇಶ

ಏನಿದು ಪೇ ಸಿಎಂ ಜಟಾಪಟಿ:  ಬಿಜೆಪಿ ಸರ್ಕಾರ ಶೇ.40 ಕಮಿಶನ್‌ ಸರ್ಕಾರ ಎಂಬುದನ್ನು ಜನರಿಗೆ ಮುಟ್ಟಿಸಲು ವ್ಯಂಗ್ಯವಾಗಿ ‘ಪೇ-ಸಿಎಂ’ ಕ್ಯೂಆರ್‌ ಕೋಡ್‌ ಇರುವ ಪೋಸ್ಟರ್‌ಗಳನ್ನು ನಗರದಲ್ಲಿ ಅಂಟಿಸಲಾಗಿದ್ದು, ಇದು ಬಿಜೆಪಿಯ ಆಕ್ರೋಶಕ್ಕೆ ಕಾರಣವಾಗಿತ್ತು. ಕಾಂಗ್ರೆಸ್‌ ಪಕ್ಷವು ‘ಪೇಟಿಎಂ’ ಕ್ಯೂಆರ್‌ ಕೋಡ್‌ ಲೋಗೋ ಮರು ವಿನ್ಯಾಸಗೊಳಿಸಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರ ಹಾಗೂ ‘ಇಲ್ಲಿ 40 ಪರ್ಸೆಂಟ್‌ ಸ್ವೀಕರಿಸಲಾಗುತ್ತದೆ’ ಎಂಬ ಟ್ಯಾಗ್‌ಲೈನ್‌ ಹೊಂದಿರುವ ‘ಪೇ-ಸಿಎಂ’ ಪೋಸ್ಟರ್‌ಗಳನ್ನು ಬೆಂಗಳೂರು ನಗರದ ವಿವಿಧೆಡೆ ಅಂಟಿಸಲಾಗಿದೆ. ಕಾಂಗ್ರೆಸ್‌ ಬಿಡುಗಡೆ ಮಾಡಿರುವ ‘ಪೇ-ಸಿಎಂ’ ಕ್ಯೂಆರ್‌ ಅನ್ನು ಸ್ಕ್ಯಾನ್ ಮಾಡಿದರೆ ‘40 ಪರ್ಸೆಂಟ್‌ ಸರ್ಕಾರ’ (40percentsarkara.com ) ಎಂಬ ಬಿಜೆಪಿಯ ಭ್ರಷ್ಟಾಚಾರದ ಬಗೆಗೆ ಕಾಂಗ್ರೆಸ್‌ ಸೃಷ್ಟಿಸಿರುವ ವೆಬ್‌ಸೈಟ್‌ಗೆ ಲಾಗಿನ್‌ ಆಗುತ್ತದೆ. ವೆಬ್‌ಸೈಟ್‌ನಲ್ಲಿ ಬಿಟ್‌ಕಾಯಿನ್‌ ಹಗರಣ, ಪಿಎಸ್‌ಐ ಹಗರಣ, ರಸ್ತೆ ಹಗರಣ ಹೀಗೆ ವಿವಿಧ ಹಗರಗಣ ಬಗ್ಗೆ ಉಲ್ಲೇಖಿಸಲಾಗಿದೆ.

Pay CM Posters: ಕಾಂಗ್ರೆಸ್‌, ಬಿಜೆಪಿ ಪೋಸ್ಟರ್‌ ಫೈಟ್‌: ಪೇ ಸಿಎಂಗೆ ಕಮಲ ಪಡೆ ಕೌಂಟರ್

ಇಬ್ಬರ ಬಂಧನ: ‘ಪೇಸಿಎಂ’ ಪೋಸ್ಟರ್‌ಗಳನ್ನು ಅಂಟಿಸಿದ ಆರೋಪದ ಮೇಲೆ ಕರ್ನಾಟಕ ಕಾಂಗ್ರೆಸ್ ಸಾಮಾಜಿಕ ಮಾಧ್ಯಮ ಸಂಯೋಜಕ ಬಿ ಆರ್ ನಾಯ್ಡು ಮತ್ತು ಕಾಂಗ್ರೆಸ್ ಐಟಿ ಸೆಲ್ ಸದಸ್ಯ ಗಗನ್ ಯಾದವ್ ಅವರನ್ನು ಬೆಂಗಳೂರು ನಗರ ಪೊಲೀಸರು ಬುಧವಾರ ತಡರಾತ್ರಿ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.