ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು (ಜ.26): ಕೇಂದ್ರ ಸರ್ಕಾರವು ಭದ್ರಾ ಮೇಲ್ದಂಡೆ ಯೋಜನೆಗೆ 2023-24ನೇ ಸಾಲಿನ ಬಜೆಟ್ನಲ್ಲಿ ಘೋಷಿಸಿ ಬಿಡುಗಡೆ ಮಾಡದ 5,300 ಕೋಟಿ ರು. ಹಣವನ್ನು 2025-26ನೇ ಸಾಲಿನ ಬಜೆಟ್ನಲ್ಲಾದರೂ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಂಬಂಧಪಟ್ಟ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್, ಕೇಂದ್ರ ಜಲಶಕ್ತಿ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಪತ್ರ ಬರೆದು ಅನುದಾನಕ್ಕೆ ಮನವಿ ಮಾಡಿದ್ದಾರೆ.
ಕರ್ನಾಟಕ ರಾಜ್ಯದ ಕೇಂದ್ರದ ಭಾಗದ 2.25 ಲಕ್ಷ ಹೆಕ್ಟೇರ್ ಭೂ ಪ್ರದೇಶಕ್ಕೆ ನೀರುಣಿಸುವ ಮಹತ್ವದ ಉದ್ದೇಶದೊಂದಿಗೆ ಭದ್ರಾ ಮೇಲ್ದಂಡೆ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಹನಿ ನೀರಾವರಿ ಮೂಲಕ 2.25 ಲಕ್ಷ ಹೆಕ್ಟೇರ್ಗೆ ನೀರುಣಿಸುವ ಜತೆಗೆ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ದಾವಣಗೆರೆ ಜಿಲ್ಲೆಯ 367 ಸಣ್ಣ ನೀರಾವರಿ ಕೆರೆಗಳಿಗೆ 29.90 ಟಿಎಂಸಿ ನೀರು ಒದಗಿಸಲು 2008ರಲ್ಲಿ ಯೋಜನೆ ನಿರ್ಮಾಣ ಶುರು ಮಾಡಲಾಯಿತು. ಈವರೆಗೆ 10.121 ಕೋಟಿ ರು. ವೆಚ್ಚ ಮಾಡಲಾಗಿದ್ದು, ಇನ್ನೂ 16,125 ಕೋಟಿ ರು. ಬೇಕಾಗಬಹುದು ಎಂದು ಕೇಂದ್ರ ಸರ್ಕಾರವು ಅಂದಾಜಿಸಿದೆ.
ಸಿಎಂ ಸಿದ್ದರಾಮಯ್ಯ ತಪ್ಪು ಮಾಡಿಲ್ಲ ಅನ್ನೋ ನಂಬಿಕೆ ಇತ್ತು: ಸಚಿವ ದಿನೇಶ್ ಗುಂಡೂರಾವ್
ಇದರ ನಡುವೆಯ 2023-24ನೇ ಸಾಲಿನ ಕೇಂದ್ರದ ಬಜೆಟ್ನಲ್ಲಿ 5,300 ಕೋಟಿ ರು. ಅನುದಾನದ ಜತೆಗೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವುದಾಗಿ ತಿಳಿಸಲಾಗಿತ್ತು. ಆದರೆ ಮೂರು ವರ್ಷವಾದರೂ ಅನುದಾನ ಬಿಡುಗಡೆ ಮಾಡಲಾಗಿಲ್ಲ. ಈ ವರ್ಷವಾದರೂ ಬಿಡುಗಡೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.
ಕೇಂದ್ರ ₹5300 ಕೋಟಿ ನೀಡಬೇಕು: ಬಯಲುಸೀಮೆ ಜಿಲ್ಲೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆ ಸಮರ್ಪಕ ಜಾರಿಯಾಗಬೇಕಾದರೆ ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸರ್ಕಾರ ಪ್ರಸ್ತುತ ವರ್ಷದ ಬಜೆಟ್ನಲ್ಲಿ ₹5300 ಕೋಟಿ ಮೀಸಲಿರಿಸಿ, ತಕ್ಷಣವೇ ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರಾ ಮೇಲ್ದಂಡೆ ಯೋಜನೆ ಆಂದೋಲನಾ ಸಮಿತಿ ಅಧ್ಯಕ್ಷ ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆ ಹೋರಾಟ ಸಮಿತಿಯ ಅಧ್ಯಕ್ಷ ಹಾಗೂ ನಿವೃತ್ತ ಎಂಜಿನಿಯರ್ ತೋರಣಗಟ್ಟೆ ತಿಪ್ಪೇಸ್ವಾಮಿ ಮತ್ತು ನೂರಾರು ಹೋರಾಟಗಾರರು ಪ್ರಧಾನಿ ನರೇಂದ್ರ ಮೋದಿಗೆ ನಾಲ್ಕು ಪುಟಗಳ ಪತ್ರ ಬರೆದಿದ್ದಾರೆ. ಜಗಳೂರು ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮೂಲಕ ನಾಲ್ಕು ಪುಟಗಳ ಪತ್ರವನ್ನು ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ ಮುಟ್ಟಿಸುವಂತೆ ಪತ್ರವನ್ನು ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷರು ಪತ್ರಿಕೆಗೆ ತಿಳಿಸಿದ್ದಾರೆ.
ನೀರಾವರಿ ಯೋಜನೆ ಎಂದರೆ ಅದು ರೈತರ ಜೀವನಾಡಿಯಾಗಿರುತ್ತದೆ. ಯೋಜನೆ ಪೂರ್ಣಗೊಳ್ಳಲು ಕೇಂದ್ರದ ನಿಧಿ ಅತ್ಯಂತ ಅವಶ್ಯಕವಾಗಿದೆ. ಜಗಳುರು ರಾಜ್ಯದಲ್ಲೇ ಅತ್ಯಂತ ಹಿಂದುಳಿದ 2ನೇ ತಾಲೂಕು ಎಂದೇ ಡಾ.ನಂಜುಂಡಪ್ಪ ವರದಿಯಲ್ಲಿ ಉಲ್ಲೇಖವಾಗಿದ್ದು, ಸಮಗ್ರ ನೀರಾವರಿ ಆಗಬೇಕಾದರೆ ಕೇಂದ್ರದ ಸಹಾನುಭೂತಿಯೂ ಅತ್ಯಂತ ಅವಶ್ಯಕವಾಗಿದೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು 1969ರಲ್ಲಿ ಯೋಜನೆ ಬಗ್ಗೆ ಪ್ರಸ್ತಾಪಿಸಿದ್ದರು. ವಾಡಿಕೆಗಿಂತ ಮಳೆ ಪ್ರಮಾಣ ಕಡಿಮೆ ಬೀಳುವ ಜಗಳೂರು ತಾಲೂಕಿಗೆ ಭದ್ರೆ ಹರಿಯಬೇಕು ಎಂಬುದು 60 ವರ್ಷಗಳ ಕನಸು ಸ್ವಾಂತಂತ್ರ್ಯ ಬಂದು 78 ವರ್ಷಗಳಾದರೂ ಕನಸಾಗಿಯೇ ಉಳಿದಿದೆ.
