ಸಣ್ಣ ಕೈಗಾರಿಕೆಗಳು ನಮ್ಮ ಆರ್ಥಿಕತೆಯ ಬೆನ್ನೆಲುಬು. ನನಗೆ ಅವುಗಳ ಶಕ್ತಿ ಮತ್ತು ಸವಾಲುಗಳ ಬಗ್ಗೆ ಸಂಪೂರ್ಣ ಅರಿವಿದೆ. ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಇದ್ದಾಗ ಮಾತ್ರ ಗುಣಮಟ್ಟ ಹೆಚ್ಚಾಗುತ್ತದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ದಾಬಸ್‍ಪೇಟೆ (ಜೂ.29): ಸಣ್ಣ ಕೈಗಾರಿಕೆಗಳು ನಮ್ಮ ಆರ್ಥಿಕತೆಯ ಬೆನ್ನೆಲುಬು. ನನಗೆ ಅವುಗಳ ಶಕ್ತಿ ಮತ್ತು ಸವಾಲುಗಳ ಬಗ್ಗೆ ಸಂಪೂರ್ಣ ಅರಿವಿದೆ. ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಇದ್ದಾಗ ಮಾತ್ರ ಗುಣಮಟ್ಟ ಹೆಚ್ಚಾಗುತ್ತದೆ. ಹಾಗಾಗಿ, ನಮ್ಮ ಕೈಗಾರಿಕೆಗಳಿಗೆ ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ ಇನ್ನಷ್ಟು ಹೊಸ ಶಕ್ತಿ ತುಂಬಲು ನಮ್ಮ ಸರ್ಕಾರ ಸಿದ್ದವಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸೋಂಪುರ ಹೋಬಳಿಯ ಅವ್ವೇರಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಹೊನ್ನೇನಹಳ್ಳಿ ಗ್ರಾಮದ ಸಮೀಪ ನೂತನವಾಗಿ ನಿರ್ಮಾಣಗೊಂಡಿರುವ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ (ಕಾಸಿಯಾ) ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಹಾಗೂ ವಸ್ತು ಪ್ರದರ್ಶನ ಕೇಂದ್ರದ ಕಟ್ಟಡಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

Add Asianetnews Kannada as a Preferred SourcegooglePreferred

ಉದ್ಯೋಗಗಳನ್ನು ಸೃಷ್ಟಿಸುವುದು ಗುರಿ: ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ತಂತ್ರಜ್ಞಾನದ ಪ್ರಗತಿಯನ್ನು ನಮ್ಮ ರಾಜ್ಯದಲ್ಲಿ ಅಳವಡಿಸಿಕೊಳ್ಳುತ್ತಿದ್ದೇವೆ. ಈ ತಂತ್ರಜ್ಞಾನ ಮತ್ತು ಪ್ರತಿಭೆಗಳ ಸಮ್ಮಿಲನದಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗಗಳನ್ನು ಸೃಷ್ಟಿಸುವುದು ನಮ್ಮ ಪ್ರಮುಖ ಗುರಿಯಾಗಿದೆ. ವಿಶೇಷವಾಗಿ ವಿಶ್ವದ ಉನ್ನತ ಹುದ್ದೆಗಳಲ್ಲಿರುವ ಅನೇಕರು ಬೆಂಗಳೂರಿನಲ್ಲೇ ವಿದ್ಯಾಭ್ಯಾಸ ಮಾಡಿದವರು, ಇಲ್ಲೇ ತಮ್ಮ ವೃತ್ತಿಜೀವನ ರೂಪಿಸಿಕೊಂಡವರಾಗಿದ್ದು, ಇದು ನಮ್ಮ ಶಿಕ್ಷಣ ವ್ಯವಸ್ಥೆ ಮತ್ತು ಪ್ರತಿಭಾ ಪೋಷಣೆಯ ಸಾಮಥ್ರ್ಯಕ್ಕೆ ಸಾಕ್ಷಿಯಾಗಿದೆ ಎಂದರು.

ಟ್ರಾಫಿಕ್ ಸಮಸ್ಯೆಗೆ ಮುಕ್ತಿ: ಬೆಂಗಳೂರಿನ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ಮುಂದಿನ ಮೂರ್ನಾಲ್ಕು ವರ್ಷಗಳಲ್ಲಿ 1 ಲಕ್ಷ ಕೋಟಿ ರುಪಾಯಿಗಳ ಖರ್ಚು ಮಾಡಲು ಅಂದಾಜಿಸಲಾಗಿದೆ. 40 ಕಿಮೀ ಟನಲ್ ರಸ್ತೆ, 113 ಫ್ಲೈಓವರ್, ಮೆಟ್ರೋ ರೈಲು ನಿಲ್ದಾಣ ರೂಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದರು.

20 ತಂತ್ರಜ್ಞಾನದ ತರಬೇತಿ ಕೇಂದ್ರಗಳ ಸ್ಥಾಪನೆ: ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್. ಮುನಿಯಪ್ಪ ಮಾತನಾಡಿ ಕೇಂದ್ರದಲ್ಲಿ ನಾನು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಮಂತ್ರಿ ಆಗಿದ್ದಾಗ ಅಂದು ಭಾರತದಾದ್ಯಂತ 20 ತಂತ್ರಜ್ಞಾನದ ತರಬೇತಿ ಕೇಂದ್ರಗಳನ್ನು ಸ್ಥಾಪನೆ ಮಾಡಲಾಯಿತು. ಅವುಗಳಿಂದ ಹೆಚ್ಚಿನ ಕೈಗಾರಿಕೆಗಳ ಸ್ಥಾಪನೆಗೆ ಸಹಕಾರಿಯಾಯಿತು. ದೇವನಹಳ್ಳಿಯ ಏರೋಸ್ಪೇಸ್ ಸೆಂಟರ್ ಅನ್ನು ಮಂಜೂರು ಮಾಡಿ ಅಲ್ಲಿ ಅನುಕೂಲವಾಗುವ ರೀತಿಯಲ್ಲಿ ಜಾರಿಗೊಳಿಸಿದೆ, ಈ ತರಬೇತಿ ಕೇಂದ್ರದಲ್ಲಿ ಆಧುನಿಕ ತಂತ್ರಜ್ಞಾನ, ಎಕ್ಸ್ಪೋರ್‍ಟ್ ಗುಣಮಟ್ಟದ ಉತ್ಪಾದನೆಯು ವಿದೇಶಗಳಲ್ಲಿ ಹೆಚ್ಚು ಬೇಡಿಕೆಗೆ ಸಹಕಾರಿಯಾಗಬೇಕು ಎಂದರು.

ಸ್ಥಳೀಯರಿಗೆ ಹೆಚ್ಚಿನ ಆದ್ಯತೆ: ಶಾಸಕ ಎನ್.ಶ್ರೀನಿವಾಸ್ ಮಾತನಾಡಿ, ಸೋಂಪುರ ಕೈಗಾರಿಕಾ ಪ್ರದೇಶ ಏಷ್ಯಾದಲ್ಲಿಯೇ ಅತ್ಯಂತ ದೊಡ್ಡ ಕೈಗಾರಿಕಾ ಪ್ರದೇಶ ಎಂದು ಗುರುತಿಸಿಕೊಂಡಿದೆ. ಲಕ್ಷಾಂತರ ಕೈಗಾರಿಕೆಗಳು ಸ್ಥಾಪನೆಯಾಗಿವೆ ಆದರೆ ಅಂದಿನಿಂದಲೂ ಸ್ಥಳೀಯರಿಗೆ ಉದ್ಯೋಗ ನೀಡುವಲ್ಲಿ ತಾರತಮ್ಯ ಮಾಡುತ್ತಿವೆ. ಇನ್ನಾದರೂ ನಮ್ಮ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕಾಸಿಯಾದ ನಿಕಟಪೂರ್ವ ಅಧ್ಯಕ್ಷ ನರಸಿಂಹಮೂರ್ತಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಹಾಗೂ ಉದ್ಯಮಿ ಅಶೋಕ್ ಖೇಣಿ, ಕೆ.ಎಸ್.ಎಸ್.ಐ.ಡಿ.ಸಿ ಯ ವ್ಯವಸ್ಥಾಪಕ ನಿರ್ದೇಶಕರು ಕ್ಯಾಪ್ಟನ್ ಡಾ.ರಾಜೇಂದ್ರ, ಎಂ.ಎಸ್.ಎಂ.ಇ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ನಿರ್ದೇಶಕ ನಿತೀಶ್ ಪಾಟೀಲ್, ಕಾಸಿಯಾ ಅಧ್ಯಕ್ಷ ಎಂ.ಜಿ.ರಾಜಗೋಪಾಲ್, ನಿಕಟಪೂರ್ವ ಅಧ್ಯಕ್ಷ ನರಸಿಂಹಮೂರ್ತಿ, ಕಾಂಗ್ರೇಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷರಾದ ನಾಗರಾಜು, ಜಗದೀಶ್, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.