ಶೀಘ್ರ ರಾಜ್ಯ ಸಂಪುಟ ವಿಸ್ತರಣೆ : ಯಾರಿಗೆ ಎಂಟ್ರಿ , ಯಾರಿಗೆ ಎಕ್ಸಿಟ್..?
ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ. ಈ ತಿಂಗಳ ಅಂತ್ಯದೊಳಗೆ ಸಂಪುಟ ವಿಸ್ತರಣೆಯಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಶೀಘ್ರವೇ ಹೈಕಮಾಂಡ್ನೊಂದಿಗೆ ಚರ್ಚಿಸಲಿದ್ದು, ಒಟ್ಟಾರೆ ಈ ಮಾಸಾಂತ್ಯದ ವೇಳೆಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಅವರು ವಿದೇಶ ಪ್ರವಾಸದಲ್ಲಿ ಇದ್ದಾರೆ. ಇತರೆ ನಾಯಕರು ಪ್ರವಾಸದಲ್ಲಿದ್ದಾರೆ. ಎಲ್ಲಾ ನಾಯಕರು ಪ್ರವಾಸ ಪೂರ್ಣಗೊಳಿಸಿದ ನಂತರ ಸಂಪುಟ ವಿಸ್ತರಣೆ ಬಗ್ಗೆ ಸಭೆ ನಡೆಸಿ ಚರ್ಚೆ ನಡೆಸಲಾಗುವುದು ಎಂದು ಅವರು ಹೇಳಿದರು.
ವಾಸ್ತವವಾಗಿ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಸಂಪುಟ ವಿಸ್ತರಣೆ ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದರು. ಆದರೆ, ಫಲಿತಾಂಶಗೊಂಡ ನಂತರ ಸಂಪುಟ ವಿಸ್ತರಣೆ ವಿಚಾರದಲ್ಲಿ ನಾಯಕರಲ್ಲಿ ಉತ್ಸಾಹ ಕಡಿಮೆಯಾಗಿದೆ. ನವೆಂಬರ್ ಎರಡನೇ ವಾರದಲ್ಲಿ ಸಂಪುಟ ವಿಸ್ತರಣೆ ಖಚಿತ ಎನ್ನಲಾಗಿತ್ತು. ಆದರೆ, ಹೈಕಮಾಂಡ್ನ ನಾಯಕರು ಬ್ಯುಸಿ ಇರುವ ಕಾರಣ ಈ ವಿಚಾರದ ಬಗ್ಗೆ ಚರ್ಚೆ ಸಾಧ್ಯವಾಗಿಲ್ಲ ಎಂದು ಹೇಳಲಾಗುತ್ತಿದೆ.
ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅವರು ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಈ ಮಾಸದಲ್ಲಿ ಖಚಿತ ಎಂದೇ ಹೇಳಿದ್ದರು. ಕಾಂಗ್ರೆಸ್ನಿಂದ ಐದು ಹಾಗೂ ಜೆಡಿಎಸ್ನಿಂದ ಒಬ್ಬರು ಸಚಿವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಲಾಗುತ್ತದೆ ಎಂದೇ ಹೇಳಲಾಗಿತ್ತು. ಆದರೆ, ಇದಾದ ನಂತರ ಯಾವುದೇ ಪ್ರಕ್ರಿಯೆ ನಡೆದಿಲ್ಲ.
ರಾಹುಲ್ ಭೇಟಿ ಮಾಡಲಿರುವ ಪರಂ: ಈ ನಡುವೆ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು ಬುಧವಾರ ಸಂಜೆ ದೆಹಲಿಗೆ ತೆರಳಿದ್ದು, ಗುರುವಾರ ಅವರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಹಿರಿಯ ಮುಖಂಡ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಲಿದ್ದಾರೆ.
ಆದರೆ, ಈ ಭೇಟಿಯ ಉದ್ದೇಶ ಸಂಪುಟ ವಿಸ್ತರಣೆ ಕುರಿತು ಅಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೋಢೀಕರಣ ಕುರಿತು ಹಾಗೂ ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಅವರು ಹೈಕಮಾಂಡ್ನೊಂದಿಗೆ ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.