ಮುಂದಿನ ಚುನಾವಣೆಯಲ್ಲಿ 150 ಬಿಜೆಪಿ ಶಾಸಕರು ಆಯ್ಕೆ|  ಮತ್ತೆ ಅಧಿಕಾರಕ್ಕೇರುತ್ತೇವೆ: ಶಾಗೆ ಯಡಿಯೂರಪ್ಪ

ಬಾಗಲಕೋಟೆ(ಜ.18): ಮುಂಬರುವ ಚುನಾವಣೆಗಳಲ್ಲಿ ಪಕ್ಷವನ್ನು ಸ್ವಂತ ಬಲದಿಂದ ಅಧಿಕಾರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲುವ ಮೂಲಕ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇನೆ. ಈ ನಿಟ್ಟಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಭರವಸೆ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಬಾಗಲಕೋಟೆ ಜಿಲ್ಲೆಯ ಕೆರಕಲಮಟ್ಟಿಗ್ರಾಮದ ಬಳಿ ನಿರಾಣಿ ಸಮೂಹ ಸಂಸ್ಥೆಗಳ ವಿವಿಧ ಘಟಕಗಳಿಗೆ ಚಾಲನೆ, ವಿವಿಧ ಹೊಸ ಯೋಜನೆಗಳಿಗೆ ಭೂಮಿ ಪೂಜೆ ನೆರವೇರಿಸಿ ಹಾಗೂ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶದ ಸಮಾರೋಪದಲ್ಲಿ ಅವರು ಮಾತನಾಡಿದರು.

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಇಡೀ ರಾಜ್ಯವೇ ಅಚ್ಚರಿಪಡುವಂತೆ ಕಾಂಗ್ರೆಸ್‌, ಜೆಡಿಎಸ್‌ ನೆಲಸಮವಾಗಿವೆ. ಮುಂದಿನ ತಾಪಂ, ಜಿಪಂ ಚುನಾವಣೆಯಲ್ಲೂ ಇದೇ ರೀತಿ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕಿದೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರ ಶ್ರಮದಿಂದ ಪಕ್ಷದ ಎಲ್ಲ ಮೋರ್ಚಾಗಳನ್ನು ಬಲಪಡಿಸಬೇಕಿದೆ ಎಂದರು.

ಒಂದು ಕಾಲ ಇತ್ತು. ಚುನಾವಣೆಯಲ್ಲಿ ಹಣಬಲ, ತೋಳ್ಬಲ, ಹೆಂಡ, ಅಧಿಕಾರದಿಂದ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್‌ ಇತ್ತು. ಆದರೆ, ಈಗ ಅದು ನಡೆಯುವುದಿಲ್ಲ. ರಾಜ್ಯದಲ್ಲಿ 15 ವಿಧಾನಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರಿಗೆ ಕರ್ನಾಟಕದ ಬಗ್ಗೆ ಹೆಮ್ಮೆಯಿದೆ. ಲೋಕಸಭೆ ಚುನಾವಣೆಯಲ್ಲಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದಿದ್ದೇವೆ. ಗ್ರಾಪಂ ಚುನಾವಣೆಯಲ್ಲೂ ಹೆಚ್ಚಿನ ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಹೀಗಾಗಿ ರಾಜ್ಯದ ಜನತೆ ಬಿಜೆಪಿ ಪರ ಇದ್ದಾರೆ ಎಂದು ತಿಳಿಸಿದರು.

ಅಂಗಡಿ ಋುಣ ತೀರಿಸಬೇಕಿದೆ:

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರನ್ನು ಕಳೆದುಕೊಂಡು ನಾವು ತಬ್ಬಲಿಗಳಾಗಿದ್ದೇವೆ. ಅವರ ಋುಣ ತೀರಿಸಬೇಕಿದೆ. ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಯಾರೇ ಆದರೂ ಅವರನ್ನು ಎರಡೂವರೆ ಲಕ್ಷ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ನಾವು ಸುರೇಶ ಅಂಗಡಿ ಮತ್ತು ಪಕ್ಷದ ಕಾರ್ಯಕರ್ತ ದಿ. ರಾಜು ಚಿಕ್ಕನಗೌಡರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಬೇಕಾಗಿದೆ ಎಂದರು.