ಕಲಬುರಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಯಮದಂತೆ ಅನುಮತಿ ಇರುವ ಸ್ಥಳದಲ್ಲಿ ಮಾತ್ರ ಮರಳು ತೆಗೆಯಲು ಅವಕಾಶ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದರು. 

ಬೆಂಗಳೂರು (ಜೂ.17): ಕಲಬುರಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ನಿಯಮದಂತೆ ಅನುಮತಿ ಇರುವ ಸ್ಥಳದಲ್ಲಿ ಮಾತ್ರ ಮರಳು ತೆಗೆಯಲು ಅವಕಾಶ ನೀಡಲಾಗುವುದು ಎಂದು ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಲಬುರಗಿಯ ಜೇವರ್ಗಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಯಲು ಪ್ರಯತ್ನಿಸಿದ ಮುಖ್ಯ ಪೇದೆ ಮೇಲೆ ಟ್ರ್ಯಾಕ್ಟರ್‌ ಹತ್ತಿಸಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೂ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕೃತ್ಯಕ್ಕೆ ಸಂಬಂಧಿಸಿದಂತೆ ಇಬ್ಬರು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಮುಖ್ಯ ಪೇದೆ ಸಾವಿಗೆ ಕಾರಣರಾದ ಯಾರೇ ಆದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಒತ್ತಡಕ್ಕೆ ಮಣಿಯದೆ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಅಲ್ಲದೆ, ಅಕ್ರಮ ಮರಳು ಗಣಿಗಾರಿಕೆ ಮಾಡಲು ನೆರವಾದ ಗೃಹ, ಕಂದಾಯ ಇಲಾಖೆ ಸೇರಿ ಯಾವುದೇ ಇಲಾಖೆಯ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದರು. 

ಜು.1ರಿಂದ ಅನ್ನಭಾಗ್ಯ ಯೋಜನೆಯಡಿ 10 ಕೆ.ಜಿ ಅಕ್ಕಿ ಕೊಡಲು ತೀರ್ಮಾನ: ಡಿ.ಕೆ.ಶಿವಕುಮಾರ್‌

ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವನಾದ ನಂತರ ಸಭೆ ನಡೆಸಿ ನಿಯಮದಂತೆ ಅನುಮತಿಸಿದ ಸ್ಥಳಗಳಲ್ಲಿ ಮಾತ್ರ ಮರಳು ಗಣಿಗಾರಿಕೆ ನಡೆಸುವಂತೆ ತಿಳಿಸಲಾಗಿತ್ತು. ಅಲ್ಲದೆ, ಅಕ್ರಮವಾಗಿ ಮರಳು ಗಣಿಗಾರಿಕೆ ತಡೆಗೆ ಸಂಬಂಧಿಸಿದ ಅಧಿಕಾರಿಗಳು, ಪೊಲೀಸರಿಗೂ ಸೂಚಿಸಲಾಗಿತ್ತು. ಹೀಗೆ ಅಕ್ರಮ ತಡೆಯಲು ಹೋದಾಗ ಮುಖ್ಯ ಪೇದೆ ಸಾವನ್ನಪ್ಪಿದ್ದಾರೆ. ಅವರ ಕುಟುಂಬದವರಿಗೆ ರಾಜ್ಯ ಸರ್ಕಾರದಿಂದ ಸಾಂತ್ವಾನ ಹೇಳಿ, ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಟೆಂಡರ್‌ ಅಕ್ರಮ ತಡೆಯಲು ಕ್ರಮ ಅಳವಡಿಸಿ: ಟೆಂಡರ್‌ ಪ್ರಕ್ರಿಯೆಯಲ್ಲಿನ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ನೂತನ ಸುರಕ್ಷತಾ ಕ್ರಮಗಳು ಹಾಗೂ ಪಾರದರ್ಶಕ ನೀತಿ ಜಾರಿಗೊಳಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದರು. ಕಿಯೋನಿಕ್ಸ್‌ ಸಂಸ್ಥೆ ಪ್ರಗತಿ ಪರಿಶೀಲನೆ ಕುರಿತು ಅಧಿಕಾರಿಗಳೊಂದಿಗೆ ಶುಕ್ರವಾರ ಸಭೆ ನಡೆಸಿ ಮಾತನಾಡಿ, ರಾಜ್ಯದ ಎಲೆಕ್ಟ್ರಾನಿಕ್ಸ್‌ ಕ್ಷೇತ್ರದ ದೈತ್ಯ ಸಂಸ್ಥೆಯಾದ ಕಿಯೋನಿಕ್ಸ್‌ ಸಂಸ್ಥೆಯನ್ನು ಪ್ರಸ್ತುತತೆಗೆ ತರುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕಿದೆ. 

ಸಾಮ, ದಾನ, ಭೇದ, ದಂಡ ನಾಲ್ಕನ್ನು ಬಳಸಿ ಮರು ಮತಾಂತರಕ್ಕೆ ಮುಂದಾಗಬೇಕು: ಸಿ.ಟಿ.ರವಿ

ಸಂಸ್ಥೆಯ ವಹಿವಾಟಿನ ಅಧಿಕೃತ ಪಟ್ಟಿಯಲ್ಲಿರುವ ಎಲ್ಲ ಖಾಸಗಿ ಸರಬರಾಜುದಾರರು ಮತ್ತು ಸೇವಾದಾರರನ್ನು ಪರಿಷ್ಕರಣೆ ಮಾಡಬೇಕು. ಟೆಂಡರ್‌ ಪ್ರಕ್ರಿಯೆಲ್ಲಿ ನಡೆಯುವ ಅಕ್ರಮ ತಡೆಯಲು ನೂತನ ಸುರಕ್ಷತಾ ಕ್ರಮಗಳು ಮತ್ತು ಪಾರದರ್ಶಕ ನೀತಿಯನ್ನು ಜಾರಿಗೊಳಿಸಬೇಕು. ಐಟಿ ಶಿಕ್ಷಣ, ಐಟಿ ಪಾರ್ಕ್ ಕುರಿತು ವಿಶೇಷ ನೀಲಿನಕ್ಷೆ ತಯಾರಿಸಿ ಅದರ ಜಾರಿಗೊಳಿಸಬೇಕು ಎಂದು ಸೂಚಿಸಿದರು. ಕಿಯೋನಿಕ್ಸ್‌ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್‌ ಇತರರಿದ್ದರು.