Asianet Suvarna News Asianet Suvarna News

ನಾನು, ವಿಜಯೇಂದ್ರ ಜೋಡೆತ್ತುಗಳು, ಬಿಜೆಪಿ ಅಧಿಕಾರಕ್ಕೆ ತರಲು ಹೋರಾಟ: ಆರ್‌.ಅಶೋಕ್‌

ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಬಿಜೆಪಿಯ ಶಾಸಕಾಂಗ ಪಕ್ಷದ ನೂತನ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. 

Struggle to bring BJP to power Says R Ashok gvd
Author
First Published Nov 18, 2023, 8:03 AM IST

ಬೆಂಗಳೂರು (ನ.18): ಭ್ರಷ್ಟ ಕಾಂಗ್ರೆಸ್‌ ಸರ್ಕಾರವನ್ನು ತೊಲಗಿಸಿ ಮತ್ತೊಮ್ಮೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ನಾವೆಲ್ಲ ಒಗ್ಗಟ್ಟಿನಿಂದ ಹೋರಾಟ ಮಾಡಬೇಕು ಎಂದು ಬಿಜೆಪಿಯ ಶಾಸಕಾಂಗ ಪಕ್ಷದ ನೂತನ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಪಕ್ಷದ ನೂತನ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನಾನು ಜೋಡೆತ್ತು ರೀತಿ ರಾಜ್ಯದಲ್ಲಿ ಪ್ರವಾಸ ಕೈಗೊಂಡು ಸಂಘಟನೆ ಬಲಪಡಿಸುತ್ತೇವೆ ಎಂದೂ ಅವರು ತಿಳಿಸಿದ್ದಾರೆ. ಶುಕ್ರವಾರ ಸಂಜೆ ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನೂತನ ವಿರೋಧ ಪಕ್ಷದ ಅಧ್ಯಕ್ಷನಾಗಿ ಆಯ್ಕೆಯಾದ ಬಳಿಕ ಅವರು ಮಾತನಾಡಿದರು. 

ನಾನು ಬಿಜೆಪಿಯಲ್ಲಿ 45 ವರ್ಷ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಈದ್ಗಾ ಹೋರಾಟ, ಅಯೋಧ್ಯಾ ಹೋರಾಟ ಸೇರಿದಂತೆ ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದೆ. ನನ್ನ 17ನೇ ವಯಸ್ಸಿನಲ್ಲಿ ತುರ್ತು ಪರಿಸ್ಥಿತಿ ವೇಳೆ ಇಂದಿರಾ ಗಾಂಧಿ ವಿರುದ್ಧ ಹೋರಾಟ ಮಾಡಿ ಒಂದು ತಿಂಗಳು ಜೈಲುವಾಸ ಅನುಭವಿಸಿದ್ದೆ. ಬಿಜೆಪಿ ಪಕ್ಷ ಹಾಗೂ ಪಕ್ಷದ ಹಿರಿಯರು ನನ್ನ ಮೇಲೆ ವಿಶ್ವಾಸವಿಟ್ಟು ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನೀಡಿದ್ದಾರೆ. ಎಲ್ಲರ ಸಹಕಾರ ಪಡೆದು ಮತ್ತೆ ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಹೋರಾಟ ಮಾಡುವೆ ಎಂದರು.

ಕಾಂಗ್ರೆಸ್‌ ಸೇಡಿನ ರಾಜಕೀಯಕ್ಕೆ ಜಗ್ಗೋಲ್ಲ, ಯಾವ ತನಿಖೆಗೂ ಸಿದ್ಧ: ಎಚ್‌ಡಿಕೆ ಸವಾಲ್‌

ನಮ್ಮ ಮುಂದೆ ಸವಾಲುಗಳಿವೆ: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಹಕಾರದೊಂದಿಗೆ ನಾವೆಲ್ಲ ಮುನ್ನಡೆಯಬೇಕಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತು ನನಗೆ ಮುಂದೆ ಬಹಳ ಸವಾಲುಗಳಿವೆ. ಮುಂಬರುವ ಲೋಕಸಭಾ ಚುನಾವಣೆ, ಜಿಲ್ಲಾ ಪಂಚಾಯಿತಿ ಚುನಾವಣೆ, ಬಿಬಿಎಂಪಿ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಫಲಿತಾಂಶ ತರುವ ಜವಾಬ್ದಾರಿ ನಮ್ಮ ಮೇಲಿದೆ. ಈ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣ ಎಂದು ಹೇಳಿದರು. 

28 ಸ್ಥಾನ ಗೆಲ್ಲುವ ಪರಿಸ್ಥಿತಿ ಇದೆ: ರಾಜ್ಯದಲ್ಲಿ ನಾವು ಸೋತಿದ್ದೇವೆ. ಆ ಸೋಲಿನ ಭಯ ಬಿಟ್ಟು ಮತ್ತೆ ಸೂರ್ಯ ಉದಯಿಸುವ ಭರವಸೆಯಲ್ಲಿ ಪಕ್ಷವನ್ನು ಮತ್ತೆ ಅಧೀಕಾರಕ್ಕೆ ತರಲು ಕೆಲಸ ಮಾಡಬೇಕಿದೆ. ಈ ಬಾರಿ ಪಕ್ಷವು ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 23-24 ಸ್ಥಾನ ಗೆಲ್ಲುವ ಪರಿಸ್ಥಿತಿ ಇತ್ತು. ಕಳೆದ ಆರು ತಿಂಗಳಲ್ಲಿ ಕಾಂಗ್ರೆಸ್‌ನ ದುರಾಡಳಿತದಿಂದ ಜನ ಬೇಸರಗೊಂಡಿದ್ದಾರೆ. ಮುಖ್ಯಮಂತ್ರಿ ಪುತ್ರನೇ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ. ಇದನ್ನೆಲ್ಲಾ ಜನ ಗಮನಿಸಿದ್ದಾರೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರವೂ ಸೇರಿದಂತೆ 28 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳೇ ಗೆಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು. 

ಜೆಡಿಎಸ್‌ನ ಜಿಟಿಡಿ ಜತೆ ಡಿ.ಕೆ.ಶಿವಕುಮಾರ್‌ ರಹಸ್ಯ ಮಾತುಕತೆ ಸಂಚಲನ

ನಾನು ಯಾವುದೇ ವೈಯಕ್ತಿಕ ತೀರ್ಮಾನ ತೆಗೆದುಕೊಳ್ಳುವುದಿಲ್ಲ. ಪಕ್ಷದ ಹಿರಿಯರು-ಕಿರಿಯರ ಸಹಕಾರ ಪಡೆಯುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುವೆ. ಮುಂದಿನ ಬೆಳಗಾವಿ ಅಧಿವೇಶನದಿಂದಲೇ ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹೋರಾಟ ಮಾಡೋಣ. ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ಕಾ ಸಾಥ್‌ ಸಬ್‌ ಕಾ ವಿಕಾಸ್‌ ಘೋಷಣೆಯಂತೆ ನಾವೆಲ್ಲರೂ ಪಕ್ಷವನ್ನು ಬೆಳೆಸೋಣ. ನನ್ನಂತಹ ಸಾಮಾನ್ಯ ಕಾರ್ಯಕರ್ತನಿಗೆ ವಿರೋಧ ಪಕ್ಷದ ನಾಯಕನ ಸ್ಥಾನ ನೀಡಿದೆ ಪಕ್ಷ ಹಾಗೂ ಪಕ್ಷದ ಹಿರಿಯರಿಗೆ ವಂದಿಸುವೆ ಎಂದು ಅಶೋಕ್‌ ತಿಳಿಸಿದರು.

Follow Us:
Download App:
  • android
  • ios