Asianet Suvarna News Asianet Suvarna News

ನುಡಿದಂತೆ ನಡೆದಿದ್ದೇವೆ, ವಿಪಕ್ಷಗಳಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಸಿದ್ದರಾಮಯ್ಯ

ನಮ್ಮ ಸರ್ಕಾರವು ನುಡಿದಂತೆ ನಡೆದುಕೊಂಡಿದೆ. ಕೊಟ್ಟಮಾತಿನಂತೆ ನಡೆದುಕೊಳ್ಳದ ಬಿಜೆಪಿಯವರಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. 

The opposition has no morals to talk about us Says CM Siddaramaiah gvd
Author
First Published Jun 3, 2023, 3:00 AM IST

ಬೆಂಗಳೂರು (ಜೂ.03): ನಮ್ಮ ಸರ್ಕಾರವು ನುಡಿದಂತೆ ನಡೆದುಕೊಂಡಿದೆ. ಕೊಟ್ಟಮಾತಿನಂತೆ ನಡೆದುಕೊಳ್ಳದ ಬಿಜೆಪಿಯವರಿಗೆ ನಮ್ಮ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಪ್ರತಿಪಕ್ಷಗಳು ಟೀಕೆ ಮಾಡುತ್ತಿವೆ. ಹಿಂದಿನ ಸರ್ಕಾರದ ಅವಧಿಯಲ್ಲಿ (2013-18) ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೇವೆ. ಇದೇ ಭರವಸೆಯಲ್ಲಿ ಜನರು ನಮಗೆ ಪೂರ್ಣ ಬಹುಮತ ನೀಡಿದ್ದು, ಎರಡನೇ ಸಚಿವ ಸಂಪುಟ ಸಭೆಯಲ್ಲೇ ಐದೂ ಗ್ಯಾರಂಟಿ ಯೋಜನೆ ಅನುಷ್ಠಾನ ನಿರ್ಧಾರ ಮಾಡಿದ್ದೇವೆ. 

ಕೊಟ್ಟ ಮಾತಿಗೆ ತಪ್ಪುವ ವಚನ ಭ್ರಷ್ಟ ಪ್ರತಿಪಕ್ಷಗಳಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ ಎಂದು ತಿರುಗೇಟು ನೀಡಿದರು. ನಮ್ಮ ಬಗ್ಗೆ ಮಾತನಾಡುವ ರಾಜ್ಯ ಬಿಜೆಪಿ ನಾಯಕರು 2018ರ ಪ್ರಣಾಳಿಕೆಯಲ್ಲಿ ನೀಡಿದ್ದ 600 ಭರವಸೆಗಳಲ್ಲಿ ಎಷ್ಟುಈಡೇರಿಸಿದ್ದಾರೆ ಎಂಬುದನ್ನು ಬಹಿರಂಗಪಡಿಸಲಿ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರು. ಹಾಕಿದ್ದಾರೆಯೇ? ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡಿದ್ದಾರೆಯೇ? ಪೆಟ್ರೋಲ್‌ - ಡೀಸೆಲ್‌ ಬೆಲೆ ಇಳಿಕೆ ಮಾಡಿದ್ದಾರೆಯೇ? ಇವುಗಳ ಬಗ್ಗೆ ಮೊದಲು ಉತ್ತರ ನೀಡಲಿ ಎಂದು ಸವಾಲು ಹಾಕಿದರು.

ಕೆಜಿಎಫ್‌ ಮಾದರಿ ತಾಲೂಕಾಗಿಸುವ ಪ್ರಯತ್ನಕ್ಕೆ ಸ್ಪಂದಿಸಿ: ಶಾಸಕಿ ರೂಪಕಲಾ

ತಾರತಮ್ಯವಿಲ್ಲದೆ ಯೋಜನೆ: ನಾವು ನೀಡಿರುವ ಐದು ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ಜಾತಿ, ಧರ್ಮ ಹಾಗೂ ಲಿಂಗ ತಾರತಮ್ಯದ ನಿರ್ಬಂಧ ಇರುವುದಿಲ್ಲ. ಈ ಗ್ಯಾರಂಟಿಗಳ ಯೋಜನೆಗಳ ಅನುಷ್ಠಾನದಿಂದ ರಾಜ್ಯ ಬೊಕ್ಕಸಕ್ಕೆ ಎಷ್ಟುಹೊರೆಯಾಗಲಿದೆ? ಈ ಯೋಜನೆಗಳ ಜಾರಿಗೆ ಅಗತ್ಯವಿರುವ ಹಣವನ್ನು ಹೇಗೆ ಹೊಂದಿಸುವಿರಿ? ಎಂಬ ಮಾಧ್ಯಮದವರ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಸವಿವರವಾಗಿ ಉತ್ತರಿಸುವುದಾಗಿ ಸಿದ್ದರಾಮಯ್ಯ ಅವರು ತಿಳಿಸಿದರು.

11ರಿಂದ ಸ್ತ್ರೀಯರ ಬಸ್‌ ಪ್ರಯಾಣ ಉಚಿತ: ಬಡವರು, ಶ್ರೀಮಂತರು ಎಂಬ ಭೇದವಿಲ್ಲದೆ ವಿದ್ಯಾರ್ಥಿನಿಯರು ಸೇರಿದಂತೆ ಎಲ್ಲಾ ಮಹಿಳೆಯರೂ ರಾಜ್ಯದ ಎಲ್ಲಾ ಸರ್ಕಾರಿ ಸಾರಿಗೆ ನಿಗಮಗಳ ಬಸ್‌ಗಳಲ್ಲಿ ರಾಜ್ಯಾದ್ಯಂತ ಸಂಚರಿಸಲು ಅವಕಾಶ ನೀಡುವ ‘ಶಕ್ತಿ’ ಯೋಜನೆ ಜೂ.11ರಿಂದ ಜಾರಿಯಾಗಲಿದೆ. ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡಿರುವ ನಿರ್ಧಾರದಂತೆ ‘ಶಕ್ತಿ’ ಯೋಜನೆಯಡಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಒಳಗೊಂಡಂತೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ನಿಗಮಗಳ ಸಾಮಾನ್ಯ, ತಡೆ-ರಹಿತ ಹಾಗೂ ವೇಗದೂತ ಬಸ್‌ಗಳಲ್ಲಿ ವಿದ್ಯಾರ್ಥಿನಿಯರೂ ಸೇರಿದಂತೆ ರಾಜ್ಯದ ಎಲ್ಲಾ ಮಹಿಳೆಯರಿಗೆ ರಾಜ್ಯಾದ್ಯಂತ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುವುದು. ಶಕ್ತಿ ಯೋಜನೆಗೆ ಜೂನ್‌ 11ರಂದು ಅಧಿಕೃತವಾಗಿ ಚಾಲನೆ ನೀಡಲಾಗುವುದು.

ಪ್ಲಾಸ್ಟಿಕ್‌ ಮುಕ್ತ ಚಿಕ್ಕಬಳ್ಳಾಪುರ ಮಾಡುವುದೇ ನನ್ನ ಗುರಿ: ಶಾಸಕ ಪ್ರದೀಪ್‌ ಈಶ್ವರ್‌

ಸರ್ಕಾರಿ ನೌಕರರು, ಮಹಿಳೆಯರು, ವಿದ್ಯಾರ್ಥಿನಿಯರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ಪ್ರತಿಯೊಬ್ಬರಿಗೂ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗುವುದು. ಆದರೆ, ಎ.ಸಿ. ಸೌಲಭ್ಯದ ಬಸ್‌, ಎ.ಸಿ. ಹಾಗೂ ನಾನ್‌ ಎ.ಸಿ. ಸ್ಲೀಪರ್‌, ಐರಾವತ ಬಸ್‌ ಸೇರಿದಂತೆ ಸುಖಾಸೀನ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿಲ್ಲ. ಉಳಿದಂತೆ ಶೇ.94ರಷ್ಟುಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ರಾಜ್ಯದ ಮಹಿಳೆಯರು ನಗರ ಸಾರಿಗೆ ಬಸ್‌ಗಳಲ್ಲಿ ಮಾತ್ರವಲ್ಲದೆ ಬೆಂಗಳೂರಿನಿಂದ ಬೀದರ್‌ವರೆಗೆ ಎಲ್ಲಿ ಬೇಕಾದರಲ್ಲಿಗೆ ಉಚಿತವಾಗಿ ಪ್ರಯಾಣಿಸಬಹುದು. ಆದರೆ, ಹೊರ ರಾಜ್ಯದ ತಿರುಪತಿ, ತಿರುವನಂತಪುರಂ, ಹೈದರಾಬಾದ್‌, ಚೆನ್ನೈಗೆ ಉಚಿತವಾಗಿ ಪ್ರಯಾಣಿಸಲು ಅವಕಾಶವಿಲ್ಲ.

Follow Us:
Download App:
  • android
  • ios