ರಾಜ್ಯದಲ್ಲಿ ಈ ಬಾರಿ ಬಿಜೆಪಿ 140 ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ವಿಶ್ವಾಸ ವ್ಯಕ್ತಪಡಿಸಿದರು. 

ಮೈಸೂರು (ಏ.14): ರಾಜ್ಯದಲ್ಲಿ ಈ ಬಾರಿ ಬಿಜೆಪಿ 140 ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಬಳಿಕ ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮಿಗಳ ಆಶೀರ್ವಾದ ಪಡೆದರು. 

Add Asianetnews Kannada as a Preferred SourcegooglePreferred

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಾಮಪತ್ರ ಸಲ್ಲಿಸಿದ್ದೇನೆ. ಹೀಗಾಗಿ ಸುತ್ತೂರು ಶ್ರೀಗಳ ಆಶೀರ್ವಾದ ಪಡೆದುಕೊಳ್ಳಲು ಬಂದಿದ್ದೇನೆ ಎಂದರು. ನಾಲ್ಕು ಜಿಲ್ಲೆಗಳಲ್ಲಿ ಪ್ರಚಾರ ಮಾಡುವಂತೆ ಪಕ್ಷ ಸೂಚನೆ ನೀಡಿದೆ. ಏ.24 ರಿಂದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಹಾಸನ ಜಿಲ್ಲೆಗಳ ಪ್ರವಾಸ ಕೈಗೊಂಡು ಪ್ರಚಾರ ನಡೆಸಲಿದ್ದೇನೆ ಎಂದು ಅವರು ಹೇಳಿದರು. ನಮ್ಮಲ್ಲಿ ಅಳೆದು ತೂಗಿ ನೋಡಿ ಟಿಕೆಟ್‌ ಹಂಚಿಕೆ ಮಾಡಿದ್ದಾರೆ. ಟಿಕೆಟ್‌ ಸಿಗದ ನಾಯಕರು ಮುನಿಸಿಕೊಳ್ಳುವುದು ಸರ್ವೆಸಾಮಾನ್ಯ. 

ಸಿದ್ದರಾಮಯ್ಯ ಸೋಲಿಸುವ ಉದ್ದೇಶದಿಂದ ನನ್ನನ್ನು ಕಣಕ್ಕಿಳಿಸಿದ್ದಾರೆ: ಸಚಿವ ವಿ.ಸೋಮಣ್ಣ

ಅಸಮಾಧಾನಿತ ನಾಯಕರ ಜೊತೆ ಪಕ್ಷದ ವರಿಷ್ಠರು ಮಾತುಕತೆ ನಡೆಸಲಿದ್ಧಾರೆ. ಒಂದೆರಡು ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದು ಅವರು ಹೇಳಿದರು. ಇದೇ ವೇಳೆ ಟಿ. ನರಸೀಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ರೇವಣ್ಣ ಅವರು ಸುತ್ತೂರುಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಎಸ್‌.ಟಿ. ಸೋಮಶೇಖರ್‌ ಅವರು ಚಾಮುಂಡಿಬೆಟ್ಟಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.

ಸಚಿವ ಸೋಮಶೇಖರ್‌ ಬಳಿ .28 ಕೋಟಿ ಆಸ್ತಿ: ರಾಜ್ಯ ವಿಧಾನಸಭಾ ಚುನಾವಣೆಗೆ ಯಶವಂತಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ಒಟ್ಟು 27.88 ಕೋಟಿ ರು. ಮೊತ್ತದ ಆಸ್ತಿಯನ್ನು ಹೊಂದಿದ್ದಾರೆ. ಚುನಾವಣಾ ಆಯೋಗಕ್ಕೆ ಸಲ್ಲಿಕೆ ಮಾಡಿರುವ ಆಸ್ತಿ ವಿವರ ಪ್ರಮಾಣಪತ್ರದಲ್ಲಿ ಈ ಮಾಹಿತಿ ನೀಡಿದ್ದಾರೆ. ಸೋಮಶೇಖರ್‌ ಹೆಸರಲ್ಲಿ 5.46 ಕೋಟಿ ರು. ಮೌಲ್ಯದ ಚರಾಸ್ತಿ, 8.91 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರಾಧಾ ಹೆಸರಲ್ಲಿ 53.86 ಲಕ್ಷ ರು. ಮೌಲ್ಯದ ಚರಾಸ್ತಿ, 8.72 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಇದೆ. 

ರಾಮನಗರದ 4 ಕ್ಷೇತ್ರಗಳಲ್ಲೂ ಬಿಜೆಪಿಯದ್ದೇ ಗೆಲುವು: ಸಚಿವ ಅಶ್ವತ್ಥ ನಾರಾ​ಯಣ

ಪುತ್ರ ನಿಶಾಂತ್‌ ಹೆಸರಲ್ಲಿ 48.18 ಲಕ್ಷ ರು. ಚರಾಸ್ತಿ, 3.75 ಕೋಟಿ ರು. ಮೌಲ್ಯದ ಸ್ಥಿರಾಸ್ತಿ ಇದೆ ಎಂದು ಆಸ್ತಿ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಲಾಗಿದೆ. 1.22 ಕೋಟಿ ರು. ಸಾಲವನ್ನು ಹೊಂದಿರುವ ಸೋಮಶೇಖರ್‌ ಅವರು ತಮ್ಮ ಕುಟುಂಬದ ಸದಸ್ಯರಿಗೆ 2.46 ಕೋಟಿ ರು. ಸಾಲ ನೀಡಿದ್ದಾರೆ. ಇದರಲ್ಲಿ ಪುತ್ರನಿಗೆ ಅಧಿಕವಾಗಿ ಸಾಲ ನೀಡಿದ್ದು, 1.23 ಕೋಟಿ ರು. ಸಾಲ ನೀಡಲಾಗಿದೆ. ಪತ್ನಿಗೆ 16 ಲಕ್ಷ ರು., ತಾಯಿ ಸೀತಮ್ಮ ಅವರಿಗೆ ಒಂದು ಕೋಟಿ ರು. ಸಾಲ ನೀಡಿದರೆ, ಸಹೋದರ ಎಸ್‌.ಟಿ.ಶ್ರೀನಿವಾಸ್‌ಗೆ 6.50 ಲಕ್ಷ ರು. ಸಾಲ ನೀಡಿರುವ ಬಗ್ಗೆ ಮಾಹಿತಿ ಒದಗಿಸಲಾಗಿದೆ.