ಸರಣಿ ಹತ್ಯೆಯಿಂದ ಕರಾವಳಿಯಲ್ಲಿ ಬೂದಿಮುಚ್ಚಿದ ಕೆಂಡದಂತಿದೆ. ಇದರ ಮಧ್ಯೆ  ಕೇಂದ್ರ ಗೃಹ ಸಚಿವ ಅಮಿತ್ ಶಾ ಎರಡು ದಿನ ಪ್ರವಾಸ ಕೈಗೊಂಡಿದ್ದಾರೆ.

ಬೆಂಗಳೂರು, (ಆಗಸ್ಟ್.01): ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದಿಢೀರ್ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.

Add Asianetnews Kannada as a Preferred SourcegooglePreferred

ಹೌದು....ಅಮಿತ್ ಶಾ ಅವರು ಆಗಸ್ಟ್ 3 ಹಾಗೂ 4ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಹತ್ಯೆ ಗಲಾಟೆ ಮಧ್ಯೆ ಅಮಿತ್ ಶಾ ಪ್ರವಾಸ ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ ನಾಯಕರು ತಲೆಯೆತ್ತಿ ನಡೆಯಲಾಗುತ್ತಿಲ್ಲ: ಬಿವೈ ವಿಜಯೇಂದ್ರ ಅಸಮಾಧಾನ

ಪ್ರವೀಣ್ ನೆಟ್ಟಾರ್ ಹತ್ಯೆ ಬೆನ್ನಲ್ಲೇ ರಾಜ್ಯದಲ್ಲಿ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ನಿರುಪಯುಕ್ತ ಸಿಎಂ, ಕೈಲಾಗದ ಗೃಹ ಸಚಿವ ಎಂದು ಬಿಜೆಪಿ ಕಾರ್ಯಕರ್ತರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರಿಂದ ಬಿಜೆಪಿ ಸರ್ಕಾರದ ಕಾರ್ಯವೈಖರಿಗೆ ಸ್ವಪಕ್ಷದ ನಾಯಕರು ಹಾಗೂ ಹಿಂದೂ ಸಂಘಟನೆ ಮುಖಂಡರುಗಳು ಆಕ್ರೋಶಗೊಂಡಿದ್ದಾರೆ. ಇದರಿಂದ ಬಿಜೆಪಿಗೆ ಮುಖಭಂಗವಾಗಿದೆ. ಅಲ್ಲದೇ ಇದು ಮುಂದಿನ ಚುನಾವಣೆ ಮೇಲೆ ಭಾರೀ ಹೊಡೆತ ಬೀಳುವ ಸಾಧ್ಯತೆಗಳಿವೆ.

ಇದರ ಮಧ್ಯೆ ಶಾ ಕರ್ನಾಟಕಕ್ಕೆ ಬರುತ್ತಿರುವುದು ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿದೆ. ಆಗಸ್ಟ್ 3 ಮತ್ತು 4 ಕರ್ನಾಟಕದಲ್ಲಿ ಇರುವ ಅಮಿತ್ ಶಾ ಅವರು ಸರ್ಕಾರದ ನಡೆ ಹಾಗೂ ನಾಯಕರ ಕಾರ್ಯಚಟುವಟಿಕೆಗಳ ಬಗ್ಗೆ ಸಮಲೋಚನೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.ಇನ್ನು ಪ್ರವೀಣ್ ಹತ್ಯೆಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದ್ದು, ಅದನ್ನು ಕಂಟ್ರೋಲ್ ಮಾಡಲು ರಾಜ್ಯ ಪ್ರವಾಸ ಕೈಗೊಂಡಿದ್ದಾರೆ ಎಂದು ಎನ್ನಲಾಗುತ್ತಿದೆ.

ಅಲ್ಲದೇ ಮಂಗಳೂರಿನ ಬೆಳ್ಳಾರೆಯಲ್ಲಿ ಹತ್ಯೆಯಾದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ನಿವಾಸಕ್ಕೂ ಭೇಟಿ ನೀಡುವ ಸಾಧ್ಯತೆಗಳಿವೆ.

ಒಟ್ಟಿನಲ್ಲಿ ಅಮಿತ್ ಶಾ ದಿಢೀರ್ ಕರ್ನಾಟಕ ಪ್ರವಾಸ ಒಂದು ಕಡೆ ಕುತೂಹಲ ಮೂಡಿಸಿದ್ರೆ, ಮತ್ತೊಂದೆಡೆ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ.