ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ರಾಜ್ಯ ಸರ್ಕಾರದ ಇಂತಹ ಅಸಹಕಾರದ ಪರಿಣಾಮ, ವಿಕಸಿತ ಸಂಕಲ್ಪ ಯಾತ್ರೆ ಅಭಿಯಾನ ಬ್ಯಾಂಕಿನವರು ಆಯೋಜಿಸಬೇಕಾಗಿದೆ ಎಂದು ಟೀಕಿಸಿದರು. 

ಯಾದಗಿರಿ (ಡಿ.29): ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ ಎಂದು ಆರೋಪಿಸಿದ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ರಾಜ್ಯ ಸಚಿವ ಎ.ನಾರಾಯಣಸ್ವಾಮಿ, ರಾಜ್ಯ ಸರ್ಕಾರದ ಇಂತಹ ಅಸಹಕಾರದ ಪರಿಣಾಮ, ವಿಕಸಿತ ಸಂಕಲ್ಪ ಯಾತ್ರೆ ಅಭಿಯಾನ ಬ್ಯಾಂಕಿನವರು ಆಯೋಜಿಸಬೇಕಾಗಿದೆ ಎಂದು ಟೀಕಿಸಿದರು.

Add Asianetnews Kannada as a Preferred SourcegooglePreferred

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಹಾಲಗೇರಾ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವ ಉದ್ದೇಶದಿಂದ ಏರ್ಪಡಿಸಿದ್ದ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸಾರಥ್ಯದಲ್ಲಿ ಕೇಂದ್ರ ಸರ್ಕಾರ ರೂಪಿಸಿದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸಲು ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರುತ್ತಿದೆ. ಕೇಂದ್ರ ಸರ್ಕಾರದ ಯೋಜನೆ ಅನುಷ್ಠಾನದ ಹೊಣೆಗಾರಿಕೆಯಿಂದ ರಾಜ್ಯ ಸರ್ಕಾರ ಜಾರಿಕೊಳ್ಳುತ್ತಿದೆ ಎಂದರು.

ರಾಜ್ಯದ ಅಭಿವೃದ್ಧಿಯಲ್ಲಿ ರಾಜಕಾರಣಿಗಳ ಭಾವನೆ ಒಂದೇ ಆಗಿರಬೇಕು: ಸಚಿವ ಕೆ.ಜೆ.ಜಾರ್ಜ್‌

ಈ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ಕೇಂದ್ರದ ಅಧೀನದಲ್ಲಿರುವ ಬ್ಯಾಂಕಿನವರು ಮಾಡುತ್ತಿದ್ದಾರೆ. ಕಾರಣ, ಕೇಂದ್ರದ ಯೋಜನೆಗಳನ್ನು ಕರ್ನಾಟಕ ರಾಜ್ಯ ಸರ್ಕಾರ ಮೋದಿ ಗ್ಯಾರಂಟಿಗಳ ಬಗ್ಗೆ ಮಾತಾಡೋಲ್ಲ ಎಂದು ಘೋಷಣೆ ಮಾಡಿರುವುದರಿಂದ ಬ್ಯಾಂಕಿನವರು ಈ ಕೆಲಸ ಮಾಡುತ್ತಿದ್ದಾರೆಂದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರ ಯಾವುದೋ ಒಂದು ಕಾರ್ಯಕ್ರಮಕ್ಕೆ ಜೋತು ಬಿದ್ದಿಲ್ಲ, ನರೇಂದ್ರ ಮೋದಿ ಅವರು ರಾಜಕೀಯ ಪಕ್ಷವೊಂದರಿಂದ ಆಯ್ಕೆಯಾದರೂ ಪ್ರಧಾನಿ ಹುದ್ದೆ ಅಲಂಕರಿಸಿದ್ದಾರೆ. ಈ ಹುದ್ದೆ ಪಕ್ಷಾತೀತ ಘನತೆ ಹೊಂದಿದೆ. ದೇಶದ ಎಲ್ಲ ನಾಗರಿಕರು, ಧರ್ಮ, ಕುಟುಂಬದ ಜವಾಬ್ದಾರಿ ತನ್ನದೆಂದು ಕೇಂದ್ರ ಸರ್ಕಾರ ಭಾವಿಸಿದೆ ಎಂದರು.

ದೇಶದ ಎಲ್ಲಾ ನಾಗರಿಕರಿಗೂ ಹಲವು ಕಾರ್ಯಕ್ರಮಗಳನ್ನು ನೀಡಬೇಕೆನ್ನುವುದು ವಿಕಸಿತ ಭಾರತ ಸಂಕಲ್ಪ ಯಾತ್ರೆ ಉದ್ದೇಶ. ಕೇಂದ್ರ ಸರ್ಕಾರದ ಯೋಜನೆಗಳನ್ನು ಬಡವರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮ ಇದಾಗಿದೆ. ಸರ್ಕಾರದ ಯೋಜನೆಗಳನ್ನು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಸಿದ್ದರಾಮಯ್ಯ ಅವರನ್ನು ಅವಹೇಳನ ಮಾಡಿಲ್ಲ, ನನ್ನ ಹೇಳಿಕೆಯನ್ನು ತಿರುಚಿದ್ದಾರೆ: ಪ್ರತಾಪ್‌ ಸಿಂಹ

ಕಾರ್ಯಕ್ರಮಕ್ಕೂ ಮುನ್ನ ವಿಕಸಿತ ಭಾರತ ಸಂಕಲ್ಪ ಯಾತ್ರೆ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಿದ ಸಂವಾದ ಕಾರ್ಯಕ್ರಮವನ್ನು ವೀಕ್ಷಿಸಲಾಯಿತು. ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಆದೇಶ ಪತ್ರ ವಿತರಿಸಲಾಯಿತು. ಆರೋಗ್ಯ ಇಲಾಖೆ ವತಿಯಿಂದ ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಲಾಯಿತು.