ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗಿದೆ. ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ರಾಯಚೂರಿನಿಂದ ಬಳ್ಳಾರಿಯವರೆಗೆ ಈ ಯಾತ್ರೆ ನಡೆಯಲಿದ್ದು, ಸರ್ಕಾರದ ಮೇಲೆ ಒತ್ತಡ ಹೇರುವುದು ಇದರ ಪ್ರಮುಖ ಉದ್ದೇಶವಾಗಿದೆ.

  • ವಾಲ್ಮೀಕಿ ನಿಗಮ ಹಗರಣದ ಆರೋಪ ಹಿನ್ನೆಲೆ
  • ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯ
  • ಮುಂದಿನ ವಾರ ಪಾದಯಾತ್ರೆ ಆರಂಭ ಸಾಧ್ಯತೆ
  • ರಾಯಚೂರಿಂದ ಬಳ್ಳಾರಿಗೆ ಸಾಗಲಿರುವ ಯಾತ್ರೆ
  • ಶ್ರೀರಾಮುಲು ನೇತೃತ್ವ, ಪಕ್ಷದ ಮುಖಂಡರ ಸಾಥ್‌

ಬೆಂಗಳೂರು (ಆ.14): ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಹಗರಣದ ಆರೋಪಿಯಾಗಿರುವ ನೂತನ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರಮುಖ ಪ್ರತಿಪಕ್ಷ ಬಿಜೆಪಿ ಕಲ್ಯಾಣ ಕರ್ನಾಟಕದಲ್ಲಿ ಪಾದಯಾತ್ರೆ ನಡೆಸಲು ಮುಂದಾಗಿದೆ.

ರಾಯಚೂರು ಟು ಬಳ್ಳಾರಿ ಪಾದಯಾತ್ರೆಗೆ ಬಿಜೆಪಿ ಸಜ್ಜು

ಪಕ್ಷದ ವರಿಷ್ಠರು ಒಪ್ಪಿಗೆ ನೀಡಿದಲ್ಲಿ ವಿಧಾನಮಂಡಲದ ಅಧಿವೇಶನದೊಳಗಾಗಿಯೇ ಅಂದರೆ, ಮುಂದಿನ ವಾರದ ವೇಳೆಗೆ ಮಾಜಿ ಸಚಿವ ಬಿ.ಶ್ರೀರಾಮುಲು ನೇತೃತ್ವದಲ್ಲಿ ಪಾದಯಾತ್ರೆ ಆರಂಭವಾಗಲಿದೆ. ರಾಯಚೂರು ಜಿಲ್ಲೆಯಿಂದ ಆರಂಭವಾಗಿ ಯಾದಗಿರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ಮೂಲಕ ಬಳ್ಳಾರಿವರೆಗೆ ಪಾದಯಾತ್ರೆ ನಡೆಸುವ ಉದ್ದೇಶವಿದೆ.

ಹೈಕಮಾಂಡ್ ಒಪ್ಪಿದ್ರೆ ಮುಂದಿನ ವಾರವೇ ಪಾದಯಾತ್ರೆ?

ಗುರುವಾರ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶ್ರೀರಾಮುಲು, ಮಾಜಿ ಸಚಿವ ಶಿವನಗೌಡ ನಾಯಕ ಸೇರಿದಂತೆ ಹಲವು ನಾಯಕರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತ್ತಿತರರೊಂದಿಗೆ ಪಾದಯಾತ್ರೆ ಬಗ್ಗೆ ಚರ್ಚೆ ನಡೆಸಿದರು. ತಾತ್ವಿಕವಾಗಿ ಒಪ್ಪಿಗೆ ನೀಡಿರುವ ವಿಜಯೇಂದ್ರ ಅವರು ವರಿಷ್ಠರ ಗಮನಕ್ಕೆ ತರುವುದಾಗಿ ಹೇಳಿದ್ದಾರೆ. ಅಲ್ಲದೆ, ಪಾದಯಾತ್ರೆಯ ರೂಪುರೇಷೆ ಸಿದ್ಧಪಡಿಸಿಕೊಳ್ಳುವಂತೆಯೂ ಸೂಚಿಸಿದ್ದಾರೆ ಎನ್ನಲಾಗಿದೆ.

ನಾಯಕ ಜನಾಂಗದ ಒಲವು ಗಳಿಸುವ ಲೆಕ್ಕಾಚಾರ?

ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಲು ನಿರಾಕರಿಸಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಅವರ ಸೇರ್ಪಡೆಯನ್ನು ಬಲವಾಗಿ ಪ್ರತಿಪಾದಿಸುತ್ತಿರುವುದರಿಂದ ರಾಜ್ಯ ಸರ್ಕಾರದ ವಿರುದ್ಧ ಮುಗಿಬೀಳಲು ನಿರ್ಧರಿಸಿದೆ. ಹೀಗಾಗಿ, ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಬಿಜೆಪಿ ಪಾದಯಾತ್ರೆ ಹಮ್ಮಿಕೊಳ್ಳಲು ಮುಂದಾಗಿದೆ. ಈ ಮೂಲಕ ಪರಿಶಿಷ್ಟ ಪಂಗಡ ಸಮುದಾಯದ ಒಲವು ಗಳಿಸಬಹುದು ಎಂಬ ಲೆಕ್ಕಾಚಾರ ಅಡಗಿದೆ.