Asianet Suvarna News Asianet Suvarna News

ಬಿಜೆಪಿ ಜಾತಿ, ಧರ್ಮಗಳ ಮಧ್ಯೆ ಗೋಡೆ ಕಟ್ಟುತ್ತಿದೆ: ವೀರಪ್ಪ ಮೊಯ್ಲಿ

ಕೋಮುವಾದಿ ಮತೀಯ ಶಕ್ತಿಗಳು ಇಂದು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಜಾತಿ, ಧರ್ಮಗಳ ಹೆಸರಲ್ಲಿ ಜನರ ಏಕ್ಯತೆಗೆ ದಕ್ಕೆ ತರುವ ರೀತಿಯಲ್ಲಿ ಗೋಡೆ ಕಟ್ಟುತ್ತಿದ್ದು ದೇಶದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕಿದೆಯೆಂದು ಮಾಜಿ ಸಿಎಂ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ತಿಳಿಸಿದರು.

Veerappa Moily Slams To BJP At Chikkaballapur gvd
Author
First Published Sep 7, 2022, 10:50 AM IST

ಚಿಕ್ಕಬಳ್ಳಾಪುರ (ಸೆ.07): ಕೋಮುವಾದಿ ಮತೀಯ ಶಕ್ತಿಗಳು ಇಂದು ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಜಾತಿ, ಧರ್ಮಗಳ ಹೆಸರಲ್ಲಿ ಜನರ ಏಕ್ಯತೆಗೆ ದಕ್ಕೆ ತರುವ ರೀತಿಯಲ್ಲಿ ಗೋಡೆ ಕಟ್ಟುತ್ತಿದ್ದು ದೇಶದ ಅಭಿವೃದ್ಧಿ ದೃಷ್ಟಿಯಿಂದ ಎಲ್ಲ ಜಾತಿ, ಧರ್ಮಗಳನ್ನು ಒಗ್ಗೂಡಿಸುವ ಕೆಲಸ ಮಾಡಬೇಕಿದೆಯೆಂದು ಮಾಜಿ ಸಿಎಂ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ ತಿಳಿಸಿದರು.

ನಗರದ ಶ್ರೀದೇವಿ ಪ್ಯಾಲೇಸ್‌ನಲ್ಲಿ ಮಂಗಳವಾರ ಭಾರತ್‌ ಜೋಡೋ ಯಾತ್ರೆ ಪೂರ್ವಭಾವಿಯಾಗಿ ಜಿಲ್ಲಾ ಕಾಂಗ್ರೆಸ್‌ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪಕ್ಷದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧ ದಿಕ್ಕಿನಲ್ಲಿ ಬಿಜೆಪಿ ಸರ್ಕಾರಗಳು ಆಡಳಿತ ನಡೆಸುತ್ತಿವೆಯೆ ಎಂದು ಅವರು ವಾಗ್ದಾಳಿ ನಡೆಸಿದರು.

ಸಮುದಾಯಗಳ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ: ಶಾಸಕ ಸುಬ್ಬಾರೆಡ್ಡಿ

ಧರ್ಮದ ಹೆಸರಲ್ಲಿ ಒಡೆದು ಆಳುವ ನೀತಿ: ದೇಶದಲ್ಲಿಂದು ಜಾತಿ, ಧರ್ಮಗಳ ಹೆಸರಿನಲ್ಲಿ ಜನರನ್ನು ಒಡೆದು ಆಳುವ ಕೆಲಸವನ್ನು ಕೋಮುವಾದಿ ಮತೀಯ ಶಕ್ತಿಗಳು ಮಾಡುತ್ತಿವೆ. ಇದರಿಂದ ದೇಶದಲ್ಲಿಂದು ತಾಲಿಬಾನ್‌, ಆಫ್ಗಾನಿಸ್ತಾನ್‌ ಪರಿಸ್ಥಿತಿ ಇದೆ. ಕೇಂದ್ರ, ರಾಜ್ಯ ಸರ್ಕಾರಗಳು ತಮ್ಮ ಆಡಳಿತದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಜನರನ್ನು ಹಾದಿ ತಪ್ಪಿಸುತ್ತಿವೆ. ಇದಕ್ಕಾಗಿ ಜಾತಿ, ಧರ್ಮಗಳ ಕಲಹಗಳನ್ನು ಮುನ್ನಾಲೆಗೆ ತಂದು ದೇಶದ ಐಕ್ಯತೆ, ಸಮಗ್ರತೆಗೆ ಧಕ್ಕೆ ತರುವ ಕೆಲಸ ಮಾಡುತ್ತಿವೆಂದರು.

ದೇಶ ಅಭಿವೃದ್ಧಿ ಶೂನ್ಯವಾಗಿದೆ. ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ. ಉದ್ಯೋಗ ಸೃಷ್ಟಿಆಗದೇ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಜನರಿಗೆ ನೆಮ್ಮದಿ, ಶಾಂತಿ ಇಲ್ಲವಾಗಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗಿ ಸಾಮಾನ್ಯರು, ಕೂಲಿ ಕಾರ್ಮಿಕರ ಬದುಕು ತತ್ತರಗೊಳ್ಳುವಂತಾಗಿದೆ. ದೇಶದಲ್ಲಿಂದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಪ್ರಮುಖವಾಗಿ ಕರ್ನಾಟಕದಲ್ಲಿ ಮತೀಯ ಗಲಭೆಗಳು ಹೆಚ್ಚಾಗಿ ಜನರಿಗೆ ನೆಮ್ಮದಿ ಇಲ್ಲದಂತಾಗಿದೆ. ಇದಕ್ಕೆ ಬಿಜೆಪಿ ಸರ್ಕಾರದ ದುರಾಡಳಿತ ಕಾರಣ ಎಂದು ಮೊಯ್ಲಿ ಟೀಕಿಸಿದರು.

ಜಿಲ್ಲೆಯಲ್ಲಿ ಸಂಘಟನೆಗೆ ಒತ್ತು ನೀಡಿ: ಎಐಸಿಸಿ ಕಾರ್ಯದರ್ಶಿ ಅಭಿಷೇಕ್‌ ದತ್‌ ಮಾತನಾಡಿ, ಕೇಂದ್ರ, ರಾಜ್ಯ ಸರ್ಕಾರಗಳ ದುರಾಡಳಿತದ ವಿರುದ್ದ ಜನ ಬೇಸತ್ತಿದ್ದಾರೆ. ಪಕ್ಷದ ಕಾರ್ಯಕರ್ತರು ಈ ಐತಿಹಾಸಿಕ ಭಾರತದ ಐಕ್ಯತಾ ಯಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಜಿಲ್ಲೆಯಲ್ಲಿ ಪಕ್ಷದ ಸಂಘಟನೆಗೆ ಕಾರ್ಯಕರ್ತರು ಹೆಚ್ಚು ಒತ್ತು ಕೊಡಬೇಕೆಂದು ಸೂಚಿಸಿದರು.

ಜಿಲ್ಲಾ ಉಸ್ತುವಾರಿ ವಿ.ಎಸ್‌.ಉಗ್ರಪ್ಪ ಮಾತನಾಡಿ, ಜನರ ಸಮಸ್ಯೆಗಳಿಗೆ ಸ್ಪಂದಿಸಲಾಗದೇ ಬಿಜೆಪಿ ಸರ್ಕಾರ ಜನೋತ್ಸವ ಹೆಸರಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ. ಬಿಜೆಪಿ ಸರ್ಕಾರದ ಭ್ರಷ್ಟಾಚಾರದಿಂದ ಇಡೀ ಕರ್ನಾಟಕ ದೇಶದ ಮುಂದೆ ತಲೆ ತಗ್ಗಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಯಿಂದ ಬೆಳೆ ಕಳೆದುಕೊಂಡು ರೈತರು ಸಂಕಷ್ಟದಲ್ಲಿರುವಾಗ ರೈತರ ಸಮಸ್ಯೆಗಳಿಗೆ ಸ್ಪಂದಿಸಲಾಗದ ಬಿಜೆಪಿ ಸರ್ಕಾರ ನಾಚಿಕೆ ಇಲ್ಲದೇ ಜನೋತ್ಸವ ಮಾಡುತ್ತಿದೆಯೆಂದು ಟೀಕಿಸಿದರು.

ರಾಜ್ಯ, ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರ ನಿಶ್ಚಿತ: ಸಚಿವ ಸುಧಾಕರ್‌

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಎಸ್‌.ಎಂ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಎನ್‌.ಕೇಶವರೆಡ್ಡಿ, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಮಾಜಿ ಅಧ್ಯಕ್ಷ ಯಲುವಹಳ್ಳಿ ರಮೇಶ್‌, ಕೆಪಿಸಿಸಿ ಸದಸ್ಯ ಎನ್‌.ವಿನಯ್‌, ಜಿಲ್ಲಾ ಕಾರ್ಯದರ್ಶಿ ಸುರೇಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಜಯರಾಮ್‌, ಯುವ ಮುಖಂಡ ಕೆ.ಎನ್‌.ರಘು, ಮಮತಾಮೂರ್ತಿ, ಸೈಯದ್‌ ಅನುಮಾನಲ್ಲಾ, ಅಡ್ಡಗಲ್‌ ಶ್ರೀಧರ್‌ ಸೇರಿದಂತೆ ಮತ್ತಿತರರು ಇದ್ದರು.

Follow Us:
Download App:
  • android
  • ios