ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರಿಗೆ ಬುದ್ಧಿ ಭ್ರಮಣೆ ಆಗಿದೆ. 

ಮಂಡ್ಯ (ಮಾ.11): ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿಯವರಿಗೆ ಬುದ್ಧಿ ಭ್ರಮಣೆ ಆಗಿದೆ. ಅವರಿಗೆ ನಿಜವಾಗಿಯೂ ಮಾನ-ಮರ್ಯಾದೆ ಇಲ್ಲ. ನಮಗೇ ಕುಡಿಯಲು ನೀರಿಲ್ಲ ಅಂದ ಮೇಲೆ ತಮಿಳುನಾಡಿಗೆ ಏಕೆ ನೀರು ಬಿಡೋಣ ಎಂದು ಕಿಡಿಕಾರಿದರು. ನಗರದ ಪಿಇಟಿ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೀರಿನ ಕೊರತೆಯಿಂದ ಬೆಂಗಳೂರಿಗೆ ನೀರು ಪೂರೈಸಲು ಸಾಧ್ಯವಾಗುತ್ತಿಲ್ಲ. ಶಿವ ಡ್ಯಾಂನಲ್ಲಿ ನೀರೆತ್ತುವ ದೃಷ್ಟಿಯಿಂದ ಕೆಆರ್‌ಎಸ್‌ನಿಂದ ನೀರು ಹರಿಸಲಾಗಿದೆ. 

ನಮ್ಮ ರೈತರಿಗೆ ನಮ್ಮಿಂದ ನೀರು ಕೊಡಲು ಸಾಧ್ಯವಾಗದಿರುವಾಗ ತಮಿಳುನಾಡಿಗೆ ಎಲ್ಲಿಂದ ನೀರು ಕೊಡಲು ಸಾಧ್ಯ ಎಂದು ಪ್ರಶ್ನಿಸಿದರು. ತೆಲಂಗಾಣದವರೂ ನೀರಿಗಾಗಿ ಮನವಿ ಮಾಡಿದ್ದಾರೆ. ನಾವು ನಿಮಗೆ ನೀರು ಕೊಡುತ್ತೇವೆ. ನೀವು ನಮಗೆ ಕೊಡಿ ಎನ್ನುತ್ತಿದ್ದೇವೆ. ಅದರ ಬಗ್ಗೆ ಯೋಚನೆ ಮಾಡುತ್ತಿರುವುದಾಗಿ ಹೇಳಿದ ಡಿ.ಕೆ.ಶಿವಕುಮಾರ್, ನೀರಿನ ಸಮಸ್ಯೆ ನಿವಾರಿಸುವ ದೃಷ್ಟಿಯಿಂದ ಬಿಜೆಪಿ ಮತ್ತು ದೇವೇಗೌಡರು ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ. ನಮ್ಮ ಸರ್ಕಾರದಲ್ಲೇನಿದ್ದರೂ ಮೊದಲು ಕುಡಿಯುವ ನೀರಿಗೆ ಆದ್ಯತೆ. ಇಂಥ ಪರಿಸ್ಥಿಯಿಲ್ಲಿ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದರು.

ರಾಜ್ಯದ ಎಲ್ಲಾ ಬಿಜೆಪಿ ಸಂಸದರು ಕಳ್ಳೆತ್ತುಗಳು: ಸಿಎಂ ಸಿದ್ದರಾಮಯ್ಯ

ಕಲಬುರಗಿಯಿಂದ ಖರ್ಗೆ ಹೆಸರಷ್ಟೇ ಶಿಫಾರಸ್ಸು: ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಟಿಕೆಟ್‌ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಅವರು ಕಲಬುರಗಿಯಿಂದಲೇ ಸ್ಪರ್ಧಿಸಬೇಕು ಎಂಬುದು ಕಾಂಗ್ರೆಸ್‌ ನಾಯಕರ, ಕಾರ್ಯಕರ್ತರ ಒತ್ತಾಯ. ಆದರೆ, ಸ್ಪರ್ಧೆ ಮಾಡುವುದು, ಬಿಡುವುದು ಅವರಿಗೆ ಬಿಟ್ಟ ವಿಚಾರ ಎಂದು ಉಪ ಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಅವರು ಕಲಬುರಗಿಯಿಂದ ಸ್ಪರ್ಧೆ ಮಾಡಬೇಕು ಎಂಬ ಬೇಡಿಕೆ ದೊಡ್ಡದಾಗಿಯೇ ಇದೆ. ಆದರೆ, ಖರ್ಗೆಯವರು ಎಐಸಿಸಿ ಅಧ್ಯಕ್ಷರು. ಇಡೀ ದೇಶದೆಲ್ಲೆಡೆ ಓಡಾಡಬೇಕಾಗುತ್ತದೆ. 

ಬಿಜೆಪಿ ನಾಯಕರ ತಾಳಕ್ಕೆ ಜೆಡಿಎಸ್‌ ಕುಣಿತ: ಸಿಎಂ ಸಿದ್ದರಾಮಯ್ಯ ಆರೋಪ

ಅವರಿಗೆ ಜವಾಬ್ದಾರಿ ಜಾಸ್ತಿ ಇದೆ. ಹೀಗಾಗಿ, ಸ್ಪರ್ಧೆಯ ತೀರ್ಮಾನವನ್ನು ಅವರೇ ಮಾಡುತ್ತಾರೆ ಎಂದರು. ಇದಕ್ಕೂ ಮೊದಲು ಶಿವಕುಮಾರ್‌, ನವದೆಹಲಿಯ ರಾಜಾಜಿ ಮಾರ್ಗದಲ್ಲಿರುವ ಖರ್ಗೆ ನಿವಾಸಕ್ಕೆ ಭೇಟಿ ನೀಡಿ, ಮಾತುಕತೆ ನಡೆಸಿದರು. ಮಾತುಕತೆ ಬಗ್ಗೆ ಪ್ರತಿಕ್ರಿಯಿಸಿ, ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ, ಟಿಕೆಟ್‌ ಹಂಚಿಕೆ ಕುರಿತು ಚರ್ಚೆ ನಡೆಸಲಾಯಿತು ಎಂದರು. ದಲಿತ ಸಿಎಂ ಕುರಿತ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್‌, ‘ಅವರಿಗೆ ಒಳ್ಳೆಯದಾಗಲಿ’ ಎಂದರು. ‘ಸಿಎಂ ಆಗಬೇಕೆಂದು ಮಹದೇವಪ್ಪನವರು ಆಸೆ ಪಡುವುದರಲ್ಲಿ ತಪ್ಪೇನಿಲ್ಲ, ಆಸೆ ಪಡಲಿ ಬಿಡಿ’ ಎಂದರು.