ಸೂಕ್ತ ಮಾನದಂಡವನ್ನಾಧರಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಎರಡಕ್ಕಿಂತ ಹೆಚ್ಚಿನ ಬಾರಿ ಶಾಸಕರಾಗಿ ಆಯ್ಕೆಯಾದವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಚಿವರ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಯಾವ ಅಸಮಾಧಾನವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರು (ಮೇ.28): ಸೂಕ್ತ ಮಾನದಂಡವನ್ನಾಧರಿಸಿ ಸಚಿವ ಸಂಪುಟ ವಿಸ್ತರಣೆ ಮಾಡಲಾಗಿದೆ. ಎರಡಕ್ಕಿಂತ ಹೆಚ್ಚಿನ ಬಾರಿ ಶಾಸಕರಾಗಿ ಆಯ್ಕೆಯಾದವರನ್ನು ಸಚಿವರನ್ನಾಗಿ ಮಾಡಲಾಗಿದೆ. ಸಚಿವರ ಆಯ್ಕೆ ವಿಚಾರದಲ್ಲಿ ಪಕ್ಷದೊಳಗೆ ಯಾವ ಅಸಮಾಧಾನವೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

Add Asianetnews Kannada as a Preferred SourcegooglePreferred

ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ನಂತರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪೂರ್ಣ ಪ್ರಮಾಣದ ಸಚಿವ ಸಂಪುಟವನ್ನು ರಚಿಸಲಾಗಿದೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ 33 ಜನರಿಗೂ ಸಂಪುಟ ದರ್ಜೆ ಸಚಿವರನ್ನಾಗಿ ಮಾಡಲಾಗಿದೆ. ಇನ್ನೆರಡು ದಿನಗಳೊಳಗೆ ಖಾತೆ ಹಂಚಿಕೆ ಪೂರ್ಣಗೊಳಿಸಲಾಗುವುದು. ಮೊದಲ ಬಾರಿಗೆ ಸಚಿವರಾಗುವವರ ಜತೆಗೆ ಅನುಭವಿಗಳನ್ನು ಕೂಡ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ ಗ್ಯಾರಂಟಿ ಫೈಟ್‌: ಸರ್ಕಾರ-ಪ್ರತಿಪಕ್ಷಗಳ ನಡುವೆ ಕದನ ಆರಂಭ

ಎರಡು ಅಥವಾ ಅದಕ್ಕಿಂತ ಹೆಚ್ಚಿನ ಬಾರಿ ಗೆಲುವು ಸಾಧಿಸಿದವರನ್ನು ಮಾತ್ರ ಸಚಿವ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು, ಸಮತೋಲಿತ ಸಚಿವ ಸಂಪುಟ ರಚಿಸಲಾಗಿದೆ. ಹೀಗಾಗಿಯೇ ಹಾವೇರಿ, ಕೊಡಗು, ಚಿಕ್ಕಮಗಳೂರು, ಹಾಸನ ಸೇರಿ ಇನ್ನಿತರ ಜಿಲ್ಲೆಗಳ ಶಾಸಕರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಸಚಿವ ಸ್ಥಾನ ದೊರಕಿಲ್ಲ ಎಂಬ ಕಾರಣಕ್ಕಾಗಿ ಯಾವುದೇ ಅಸಮಾಧಾನವಿಲ್ಲ. ಎಲ್ಲರೂ ಸಚಿವರ ಆಯ್ಕೆಗೆ ಸಹಮತಿ ನೀಡಿದ್ದಾರೆ ಎಂದರು.

ರಾಜ್ಯದ ಜನರು ಹೊಸತನವನ್ನು ಬಯಸಿದ್ದಾರೆ. ನೂತನ ಸಚಿವ ಸಂಪುಟ ಅದಕ್ಕೆ ಪೂರಕವಾಗಿದೆ. ಜನರಿಗೆ ನೀಡಿದ್ದ ಭರವಸೆ ಈಡೇರಿಸಲು ಸಚಿವರು ಕೆಲಸ ಮಾಡಲಿದ್ದಾರೆ. 5 ಗ್ಯಾರಂಟಿಗಳನ್ನು ಮೊದಲು ಜಾರಿ ಮಾಡಬೇಕಿದೆ. ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು 5 ವರ್ಷಗಳೊಳಗೆ ಅನುಷ್ಠಾನಗೊಳಿಸಬೇಕಿದೆ. ಮುಂದಿನ ಸಚಿವ ಸಂಪುಟದಲ್ಲಿ 5 ಗ್ಯಾರಂಟಿಗಳ ಕುರಿತು ಅಧಿಕೃತ ಆದೇಶ ಹೊರಡಿಸಲಾಗುವುದು. ಅದಕ್ಕಾಗಿ ಅಧಿಕಾರಿಗಳಿಂದ ವರದಿ ಕೇಳಲಾಗಿದೆ ಎಂದು ತಿಳಿಸಿದರು.

ಮಂತ್ರಿಮಂಡಲ ಪೂರ್ಣ ಭರ್ತಿಗೆ ನಿರ್ಧಾರ, 24 ಮಂದಿಗೆ ಸಚಿವ ಸ್ಥಾನ: ಪ್ರಭಾವಿ ಖಾತೆಗೆ ಸಿದ್ದು-ಡಿಕೆಶಿ ಪೈಪೋಟಿ

ಡೆಪ್ಯುಟಿ ಸ್ಪೀಕರ್‌ ಆಗಲು ಪುಟ್ಟರಂಗ ಶೆಟ್ಟಿ ಒಪ್ಪಿಗೆ: ಸಚಿವ ಸ್ಥಾನ ಸಿಗದೇ ಇರುವುದಕ್ಕೆ ಶಾಸಕ ಪುಟ್ಟರಂಗ ಶೆಟ್ಟಿ ಅಸಮಾಧಾನಗೊಂಡಿದ್ದಾರೆ ಎಂಬುದು ಸುಳ್ಳು. ಅವರೊಂದಿಗೆ ಮಾತನಾಡಿದ್ದೇನೆ. ಡೆಪ್ಯುಟಿ ಸ್ಪೀಕರ್‌ ಆಗಲು ಅವರು ಒಪ್ಪಿಕೊಂಡಿದ್ದಾರೆ. ಅಸಮಾಧಾನಗಳಲ್ಲೂ ಸಮಾಧಾನವಿರುತ್ತದೆ. ಅದನ್ನು ಎಲ್ಲರೂ ನೋಡಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.