ಚನ್ನಪಟ್ಟಣದಲ್ಲಿ ಅಭಿವೃದ್ಧಿ ದೀಪ ಹಚ್ಚಿದ್ದೇವೆ. ಈ ದೀಪ ನಿಮ್ಮ ದಾರಿ, ಮನೆ, ಬದುಕು ಬೆಳಗಲಿದೆ.ಕೊಟ್ಟ ಮಾತಿನಂತೆ ಚನ್ನಪಟ್ಟಣವನ್ನು ಅಭಿವೃದ್ಧಿ ಪುಟಕ್ಕೆ ಸೇರಿಸಿ ಮುನ್ನುಡಿ ಬರೆಯುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಚನ್ನಪಟ್ಟಣ (ಸೆ.21): ಚನ್ನಪಟ್ಟಣದಲ್ಲಿ ಅಭಿವೃದ್ಧಿ ದೀಪ ಹಚ್ಚಿದ್ದೇವೆ. ಈ ದೀಪ ನಿಮ್ಮ ದಾರಿ, ಮನೆ, ಬದುಕು ಬೆಳಗಲಿದೆ.ಕೊಟ್ಟ ಮಾತಿನಂತೆ ಚನ್ನಪಟ್ಟಣವನ್ನು ಅಭಿವೃದ್ಧಿ ಪುಟಕ್ಕೆ ಸೇರಿಸಿ ಮುನ್ನುಡಿ ಬರೆಯುತ್ತಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಪಟ್ಟಣದ ಆದಿಲ್ ಷಾ (ಟಿಪ್ಪು) ಮೈದಾನದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ದಾಖಲೆ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚನ್ನಪಟ್ಟಣವನ್ನು ಚಿನ್ನದಂತ ನಾಡು ಮಾಡಲು ತೀರ್ಮಾನಿಸಿದ್ದೇವೆ. ನಾವು ಕೊಟ್ಟ ಮಾತು ಉಳಿಸಿಕೊಳ್ಳಲು ಬಂದಿದ್ದೇವೆ ಎಂದರು. ಕಳೆದ ಮೂರು ತಿಂಗಳಲ್ಲಿ ಚನ್ನಪಟ್ಟಣ ತಾಲೂಕಿನಲ್ಲಿ 500 ಕೋಟಿ ಮೊತ್ತದ ಯೋಜನೆಗಳ ಗುದ್ದಲಿ ಪೂಜೆ ಮಾಡಲಾಗಿದೆ. ಈ ತಾಲ್ಲೂಕಿನಲ್ಲಿ ಆಗುತ್ತಿರುವ ಬದಲಾವಣೆಯನ್ನು ನೀವು ಕಿವಿಯಲ್ಲಿ ಕೇಳುವುದು ಮಾತ್ರವಲ್ಲ, ಕಣ್ಣಾರೆ ನೋಡುತ್ತಿದ್ದೀರಿ ಎಂದು ತಿಳಿಸಿದರು.

Add Asianetnews Kannada as a Preferred SourcegooglePreferred

ಪ್ರತಿ ವಾರ್ಡಿಗೆ 1 ಕೋಟಿ ವೆಚ್ಚದ ಯೋಜನೆಗಳು: ಕಳೆದ ಮೂರು ತಿಂಗಳುಗಳಲ್ಲಿ ಈ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದ ಯೋಜನೆಗಳ ಗುದ್ದಲಿ ಪೂಜೆ ಮಾಡಲಾಗಿದೆ. ವಿಶೇಷ ಅನುದಾನ ತಂದು ಪ್ರತಿ ವಾರ್ಡ್ ನಲ್ಲಿ 1 ಕೋಟಿ ಅನುದಾನದ ಯೋಜನೆಗಳು ನಡೆಯುತ್ತಿದೆ. ಇಂದು 200 ಕೋಟಿ ಅನುದಾನದ ಯೋಜನೆಗಳಿಗೆ ಗುದ್ದಲಿ ಪೂಜೆ ಮಾಡಿದ್ದೇವೆ ಎಂದು ತಿಳಿಸಿದರು. ಕುಮಾರಣ್ಣ ಈ ವಿಚಾರವಾಗಿ ನೀನು ಉತ್ತರ ನೀಡಬೇಕು. ನೀನು ಈ ಕ್ಷೇತ್ರದ ಶಾಸಕನಾಗಿ ಮುಖ್ಯಮಂತ್ರಿ ಆಗಿದ್ದೆ. ನಾವು ಬೆಂಬಲ ನೀಡಿ ನಿಮ್ಮನ್ನು ಮುಖ್ಯಮಂತ್ರಿ ಮಾಡಿದ್ದೆವು. ನಿನಗೆ ಸಹಾಯ ಮಾಡಿದ ಜನರ ಋಣ ತೀರಿಸುವ ಕೆಲಸ ನೀನು ಮಾಡಿಲ್ಲ. ಮತ್ತೆ ಈ ತಾಲೂಕಿನ ಜನರ ಮುಂದೆ ಬಂದು ಮತ ಕೇಳುವ ನೈತಿಕತೆ ಉಳಿಸಿಕೊಂಡಿಲ್ಲ ಎಂದು ಟೀಕಿಸಿದರು.

ಆಟದ ಮೈದಾನ, ವಿವಿಧ ಕಟ್ಟಡಗಳ ಶಂಕುಸ್ಥಾಪನೆ ಮಾಡಿದ್ದೇವೆ. ಎಲ್ಲಾ ವರ್ಗದ ಬಡವರಿಗೂ ನಿವೇಶನ ನೀಡಲಾಗುತ್ತಿದೆ. ಕಾಂಗ್ರೆಸ್ ಎಂದರೆ ಬಡವರು, ಕಾರ್ಮಿಕರು, ರೈತರು, ಶ್ರಮಿಕರು ಸೇರಿದಂತೆ ಎಲ್ಲಾ ವರ್ಗದ ಜನರ ಸರ್ಕಾರ. ರಾಮಲಿಂಗಾ ರೆಡ್ಡಿ ಅವರು ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ನಿಮಗೆ ಗ್ಯಾರಂಟಿ ಯೋಜನೆಗಳು ತಲುಪಿವೆ. ಇದನ್ನು ತಪ್ಪಿಸಲು ಬಿಜೆಪಿ ಹಾಗೂ ಜೆಡಿಎಸ್ ಸಂಚು ರೂಪಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸತ್ತರೂ ಬಿಜೆಪಿ ಧ್ವಜ ಹಾಕ್ಕೊಂಡೆ ಸಾಯ್ತಿನಿ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಏನಾದರು ಮಾಡಿ ಕಾಂಗ್ರೆಸ್ ಸರ್ಕಾರ ಬೀಳಿಸಬೇಕು ಅಂತ ಬಿಜೆಪಿ - ಜೆಡಿಎಸ್ ನವರು ಕಾಯುತ್ತಿದ್ದಾರೆ. ಬಿದ್ದ ತಕ್ಷಣ ಒಡೆದು ಹೋಗಲು ಇದು ಮಡಿಕೆ ಅಲ್ಲ. ಚಿನ್ನದ ಚೊಂಬು, ಕಂಚಿನ ಚೊಂಬು. ನಮ್ಮ ಸರ್ಕಾರ ಸುಭದ್ರವಾಗಿ ಇರಲಿದೆ ಎಂದು ಹೇಳಿದರು.ನಾವು ಇಲ್ಲಿ ಯಾರೂ ಶಾಶ್ವತವಲ್ಲ. ಮನುಷ್ಯನ ಹುಟ್ಟು ಆಕಸ್ಮಿಕ, ಸಾವು ಅನಿವಾರ್ಯ, ಜನನ ಉಚಿತ, ಮರಣ ಖಚಿತ. ಈ ಹುಟ್ಟು ಸಾವಿನ ಮಧ್ಯೆ ನಾವು ಏನು ಮಾಡುತ್ತೇವೆ ಎಂಬುದು ಮುಖ್ಯ. ನಮ್ಮ ಈ ಎರಡು ಕೈ ಕೊಟ್ಟಿರುವುದು, ಒಂದು ನಮ್ಮನ್ನು ನಾವು ಕಾಪಾಡಿಕೊಳ್ಳಲು ಹಾಗೂ ಮತ್ತೊಂದು ಬೇರೆಯವರನ್ನು ರಕ್ಷಣೆ ಮಾಡಲು. ಬೇರೆಯವರು ಈ ಕೆಲಸ ಮಾಡಬಹುದಾಗಿತ್ತು. ಆದರೆ ಮಾಡಲಿಲ್ಲ ಎಂದು ಶಿವಕುಮಾರ್ ಹೇಳಿದರು.