Asianet Suvarna News Asianet Suvarna News

PayCM Posters: ಇಂದು ಪೇಸಿಎಂ ಪೋಸ್ಟರ್‌ ಅಂಟಿಸ್ತೀವಿ: ಡಿಕೆಶಿ, ಸಿದ್ದು ಸವಾಲ್‌

ಪೇಸಿಎಂ ಪೋಸ್ಟರ್‌ ಅಂಟಿಸಿದ್ದಕ್ಕಾಗಿ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಬಿ.ಆರ್‌. ನಾಯ್ಡು ಸೇರಿದಂತೆ ಪಕ್ಷದ ಕಾರ್ಯಕರ್ತರ ಬಂಧನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಆಕ್ರೋಶಗೊಂಡಿದ್ದಾರೆ. 

we will paste paycm posters at govt offices says dk shivakumar and siddaramaaiah gvd
Author
First Published Sep 23, 2022, 2:00 AM IST

ಬೆಂಗಳೂರು (ಸೆ.23): ಪೇಸಿಎಂ ಪೋಸ್ಟರ್‌ ಅಂಟಿಸಿದ್ದಕ್ಕಾಗಿ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಬಿ.ಆರ್‌. ನಾಯ್ಡು ಸೇರಿದಂತೆ ಪಕ್ಷದ ಕಾರ್ಯಕರ್ತರ ಬಂಧನಕ್ಕೆ ರಾಜ್ಯ ಕಾಂಗ್ರೆಸ್‌ ನಾಯಕರು ಆಕ್ರೋಶಗೊಂಡಿದ್ದಾರೆ. ‘ಇದಕ್ಕೆ ಪ್ರತಿಯಾಗಿ ಶುಕ್ರವಾರ ಸರ್ಕಾರಿ ಕಟ್ಟಡಗಳ ಮೇಲೆಯೇ ‘ಪೇ-ಸಿಎಂ’ ಪೋಸ್ಟರ್‌ ಅಂಟಿಸುತ್ತೇವೆ. ತಾಕತ್‌ ಇದ್ದರೆ ನಮ್ಮನ್ನು ಬಂಧಿಸಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಈ ಬಗ್ಗೆ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ‘ಶುಕ್ರವಾರ ಪಕ್ಷದ ಶಾಸಕರು, ಪರಿಷತ್‌ ಸದಸ್ಯರೊಂದಿಗೆ ನಾವೆಲ್ಲರೂ ಸೇರಿ ಸರ್ಕಾರಿ ಕಚೇರಿಗಳ ಮೇಲೆಯೇ ‘ಪೇ-ಸಿಎಂ’ ಪೋಸ್ಟರ್‌ ಅಂಟಿಸುತ್ತೇವೆ’ ಎಂದು ಎಚ್ಚರಿಸಿದರು.

‘ಮುಖ್ಯಮಂತ್ರಿಗಳು ಪೋಸ್ಟರ್‌ ವಿಚಾರಕ್ಕೆ ಇಷ್ಟುತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಯಾಕೆ? ರಾಜಕೀಯಲ್ಲಿ ಇರುವವರನ್ನು ಜನ ಟೀಕಿಸುವುದು, ಪ್ರಶ್ನಿಸುವುದು ಸಹಜ. ಇದು ಅಧಿಕಾರ ದುರ್ಬಳಕೆ, ಭಯ ಹಾಗೂ ದ್ವೇಷ ರಾಜಕಾರಣ ಎಂದರು.  ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ‘ಪೊಲೀಸರ ಮೂಲಕ ಬಾಯಿ ಮುಚ್ಚಿಸಲು ಎಷ್ಟುಮಂದಿಯನ್ನು ಜೈಲಿಗೆ ಹಾಕುತ್ತೀರಿ? ರಾಜ್ಯ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪಕ್ಷದ ಕಾರ್ಯಕರ್ತರ ಜತೆ ನಾನೇ ಪೋಸ್ಟರ್‌ ಅಂಟಿಸುತ್ತೇನೆ. ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ’ ಎಂದು ಸವಾಲು ಹಾಕಿದರು.

Pay CM Posters: ಪೇ ಸಿಎಂ ಪೋಸ್ಟರ್‌ ತನಿಖೆಗೆ ಪೊಲೀಸ್‌ ಆಯುಕ್ತ ಆದೇಶ

‘ರಾಜ್ಯದಲ್ಲಿ ಹೊಸ ಕಾನೂನು ಜಾರಿಯಾಗಿದ್ದು ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧವಾಗಿದೆ. ಪೊಲೀಸರ ಮೂಲಕ ಎಷ್ಟುಜನರ ಬಾಯಿ ಮುಚ್ಚಿಸುತ್ತೀರಿ? ಎಷ್ಟುಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ ಎಚ್ಚರವಾಗಿರಿ’ ಎಂದು ಕಿಡಿ ಕಾರಿದರು. ‘ಏನು ಮುಖ್ಯಮಂತ್ರಿಗಳೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಈಗ ಯಾರೋ ನಿಮಗೆ ಚುಚ್ಚಿದಕ್ಕೆ ನೋವಾಯ್ತಾ? ನಿಮ್ಮ ಭ್ರಷ್ಟಾಚಾರ ದಬಗ್ಗೆ ಧ್ವನಿ ಎತ್ತಿದ್ದಾರೆ ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥರನ್ನು ಬಂಧಿಸಿದ್ದಾರೆ. ನನ್ನ ಮತ್ತು ಡಿ.ಕೆ.ಶಿವಕುಮಾರ್‌ ಬಗ್ಗೆಯೂ ಪೋಸ್ಟರ್‌ ಅಂಟಿಸಿದ್ದಾರಲ್ಲಾ? ಅದರ ಬಗ್ಗೆ ಯಾಕೆ ಮೌನವಾಗಿದ್ದೀರಿ? ಪೊಲೀಸರ ಕಣ್ಣು ಈ ವಿಚಾರದಲ್ಲಿ ಯಾಕೆ ಕುರುಡಾಗಿದೆ’ ಎಂದು ವಾಗ್ದಾಳಿ ನಡೆಸಿದರು.

Pay CM Posters: ಕಾಂಗ್ರೆಸ್‌, ಬಿಜೆಪಿ ಪೋಸ್ಟರ್‌ ಫೈಟ್‌: ಪೇ ಸಿಎಂಗೆ ಕಮಲ ಪಡೆ ಕೌಂಟರ್

‘ಬಿಜೆಪಿಯ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧ ಪ್ರಕಟಿಸಿರುವ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಅಂತಹವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟಗೌರವ. ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ’ ಎಂದು ಟೀಕಿಸಿದರು.

Follow Us:
Download App:
  • android
  • ios