Asianet Suvarna News Asianet Suvarna News

ಲೋಕಸಭೆ ಚುನಾವಣೆಯಲ್ಲಿ ಸಚಿವರು ಸ್ಪರ್ಧೆ ಮಾಡಿದರೆ ತಪ್ಪೇನು?: ಸಚಿವ ದಿನೇಶ್ ಗುಂಡೂರಾವ್

ಲೋಕಸಭೆ ಚುನಾವಣೆಯಲ್ಲಿ ಹಲವು ಸಚಿವರು ಕಣಕ್ಕಿಳಿಯುವ ಸಾಧ್ಯತೆ ಇದೆ. ಸಚಿವರು ಸ್ಪರ್ಧೆ ಮಾಡಿದರೆ ತಪ್ಪೇನು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು. 

What is wrong if a minister contests in the Lok Sabha elections Says Minister Dinesh Gundu Rao gvd
Author
First Published Feb 7, 2024, 9:14 AM IST

ಮೈಸೂರು (ಫೆ.07): ಲೋಕಸಭೆ ಚುನಾವಣೆಯಲ್ಲಿ ಹಲವು ಸಚಿವರು ಕಣಕ್ಕಿಳಿಯುವ ಸಾಧ್ಯತೆ ಇದೆ. ಸಚಿವರು ಸ್ಪರ್ಧೆ ಮಾಡಿದರೆ ತಪ್ಪೇನು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಆಂತರಿಕವಾಗಿ ನಡೆದಿರುವ ಚರ್ಚೆಯನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಇದು ಹೈಕಮಾಂಡ್ ನಿರ್ಧಾರ, ಅವರ ತೀರ್ಮಾನಕ್ಕೆ ಎಲ್ಲರೂ ಬದ್ಧ. ಅವರು ಹೇಳಿದರೆ ಸ್ಪರ್ಧೆ ಮಾಡಲೇಬೇಕು, ಇದು ಒಳ್ಳೆಯ ಬೆಳವಣಿಗೆ ಎಂದರು.

ದಕ್ಷಿಣ ಭಾರತ, ಉತ್ತರ ಭಾರತ ಪ್ರತ್ಯೇಕತೆ ಬಗ್ಗೆ ಸಂಸದ ಡಿ.ಕೆ. ಸುರೇಶ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಆ ರೀತಿಯ ಹೇಳಿಕೆ ಸರಿಯಲ್ಲ, ಆ ರೀತಿ ಹೇಳಬಾರದು. ಇದನ್ನು ನಾನು, ಸಿಎಂ ಸೇರಿದಂತೆ ಎಲ್ಲರೂ ಹೇಳಿದ್ದೇವೆ. ಆದರೆ, ಅವರು ಹೇಳಿರುವ ಉದ್ದೇಶ ಬೇರೆ ರೀತಿಯಲ್ಲಿ ಇದೆ ಎಂದು ಹೇಳಿದರು. ಲೋಕಸಭಾ ಚುನಾವಣೆ ನಂತರ ಗ್ಯಾರಂಟಿ ಯೋಜನೆಗೆ ಬ್ರೇಕ್ ಬೀಳಲಿದೆ ಎಂದು ಶಾಸಕ ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಬಾಲಕೃಷ್ಣ ಹೇಳಿದರೂ, ರಾಜಣ್ಣ ಹೇಳಿದರೂ, ಯಾರು ಏನೇ ಹೇಳಿದರೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಸಿಎಂ ಸಿದ್ದರಾಮಯ್ಯನವರು ಹೇಳಿದ ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ತಿಳಿಸಿದರು.

‘ನಾವು ಯಾರಪ್ಪನ ಹಣ ಕೇಳ್ತಿಲ್ಲ, ತೆರಿಗೆ ಹಣ ಕೇಳ್ತಿದ್ದೇವೆ’: ಸಚಿವ ಭೈರತಿ ಸುರೇಶ್

4 ತಿಂಗಳಲ್ಲಿ ಔಷಧ ಖರೀದಿ ಲೋಪ ದೋಷವನ್ನು ಸರಿಪಡಿಸಲಾಗುವುದು: ಆರೋಗ್ಯ ಇಲಾಖೆಯಲ್ಲಿ ಔಷಧಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೆಲವು ಆಡಳಿತಾತ್ಮಕ ಲೋಪ ದೋಷಗಳಿಂದಾಗಿ ಇತ್ತೀಚೆಗೆ ರಾಜ್ಯದಲ್ಲಿ ಸಮರ್ಪಕವಾಗಿ ಔಷಧ ವಿತರಿಸಲು ಸಾಧ್ಯವಾಗುತ್ತಿಲ್ಲ. ಮುಂದಿನ ನಾಲ್ಕು ತಿಂಗಳಲ್ಲಿ ಈ ದೋಷವನ್ನು ಸರಿಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಔಷಧ ಖರೀದಿ, ದಾಸ್ತಾನು, ಅವಧಿ ಮುಗಿದ ಔಷಧಗಳ ದಾಖಲೀಕರಣ, ಟೆಂಡರ್ ಪ್ರಕ್ರಿಯೆಯಲ್ಲಿ ಆಗಿರುವ ಕೆಲವು ವ್ಯತ್ಯಾಸದಿಂದ ಸಮರ್ಪಕವಾಗಿ ಔಷಧಿ ಖರೀದಿಸಿ ವಿತರಸಿಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಇತ್ತೀಚೆಗೆ ನಡೆದ ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಇಲಾಖೆ ವತಿಯಿಂದ ನ್ಯಾಯಾಲಯಕ್ಕೆ ಬೇಕಾದ ಅಗತ್ಯ ಮಾಹಿತಿಗಳನ್ನು ಒದಗಿಸಿಕೊಡಲಾಗಿದೆ. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ ಎಂದರು. ವೈದ್ಯರು ತಮ್ಮ ಸೇವಾ ಅವಧಿ ಮುಗಿದ ನಂತರ ಖಾಸಗಿಯಾಗಿ ಪ್ರಾಕ್ಟೀಸ್ ಮಾಡಲು ಅವಕಾಶವಿದೆ. ಆದರೆ, ಸರ್ಕಾರಿ ಆಸ್ಪತ್ರೆಗಳಿಗೆ ಬರುವ ರೋಗಿಗಳನ್ನು ಖಾಸಗಿ ಆಸ್ಪತ್ರೆಗೆ ರವಾನಿಸಿ ದುಬಾರಿ ವೆಚ್ಚದಲ್ಲಿ ಚಿಕಿತ್ಸೆ ಪಡೆಯುವಂತೆ ಮಾಡುವುದು ತಪ್ಪು ಎಂದು ಅವರು ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 22 ಸ್ಥಾನ: ಸಚಿವ ಈಶ್ವರ ಖಂಡ್ರೆ

ಕೆಪಿಎಂಎ ಕಾಯಿದೆ ಪ್ರಕಾರ ಎಲ್ಲಾ ಖಾಸಗಿ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆಗಳಿಗೆ ಸರ್ಕಾರ ಇಂತಿಷ್ಟು ಹಣವೆಂದು ದರ ನಿಗಧಿಗೊಳಿಸಿದೆ. ಆದರೆ, ಬಹುತೇಕ ಆಸ್ಪತ್ರೆಗಳಲ್ಲಿ ಅವುಗಳನ್ನು ಎಲ್ಲರಿಗೂ ಕಾಣುವಂತೆ ಬೋರ್ಡ್‌ ನಲ್ಲಿ ಹಾಕಿಲ್ಲ. ರೋಗಿಗಳು ಚಿಕಿತ್ಸೆಗಾಗಿ ದಾಖಲಿಸಿದ ಸಂದರ್ಭದಲ್ಲಿ ಅವರ ಮೊಬೈಲ್‌ ಗೆ ಚಿಕಿತ್ಸೆ ವೆಚ್ಚಕ್ಕೆ ಸಂಬಂಧಿಸಿದ ಮಾಹಿತಿ ಹೋಗುವಂತೆ ಮಾಡಲಾಗುವುದು ಎಂದರು. ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಹೆಚ್ಚಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದ್ದು, ಸದ್ಯದಲ್ಲೇ 800 ಮಂದಿ ಶುಶ್ರೂಷಕಿಯರನ್ನು ನೇಮಿಸಿಕೊಳ್ಳಲಾಗುವುದು ಎಂದು ಅವರು ತಿಳಿಸಿದರು. ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ನಿರ್ದೇಶಕಿ ಬಿ.ಎಸ್. ಪುಷ್ಪಲತಾ ಇದ್ದರು.

Follow Us:
Download App:
  • android
  • ios