ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ಕೇಂದ್ರ ಸರ್ಕಾರ ಏಕೆ ರದ್ದುಪಡಿಸುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. 

ನವದೆಹಲಿ (ಮೇ.12): ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ಕೇಂದ್ರ ಸರ್ಕಾರ ಏಕೆ ರದ್ದುಪಡಿಸುತ್ತಿಲ್ಲ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ. ಈ ಕುರಿತು ‘ಎಕ್ಸ್‌’ನಲ್ಲಿ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌, ‘ಪ್ರಜ್ವಲ್‌ ರೇವಣ್ಣ ಪರಾರಿಯಾಗಲು ಬಿಟ್ಟಿದ್ದಾದರೂ ಹೇಗೆ?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅವರ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡುವಂತೆ ಪ್ರಧಾನಿಯನ್ನು ತಡೆಯುತ್ತಿರುವ ಅಂಶವಾದರೂ ಏನು? ವಿಜಯ್ ಮಲ್ಯ, ನೀರವ್‌ ಮೋದಿ, ಮೇಹುಲ್‌ ಚೋಕ್ಸಿ ರೀತಿಯಲ್ಲಿ ಹೇಗೆ ಮತ್ತು ಏಕೆ ಪ್ರಜ್ವಲ್‌ ರೇವಣ್ಣ ದೇಶ ಬಿಟ್ಟು ಹೋಗಲು ಅವಕಾಶ ನೀಡಲಾಯ್ತು’ ಎಂದು ಪ್ರಶ್ನಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್‌ ಬಳಸಿ ಜರ್ಮನಿಗೆ ತೆರಳಿದ್ದರು ಎಂದು ಮೇ 2ರಂದು ವಿದೇಶಾಂಗ ಸಚಿವಾಲಯ ತಿಳಿಸಿತ್ತು. ಆದರೆ ಕೇಂದ್ರ ಸರ್ಕಾರ ಪ್ರಜ್ವಲ್‌ಗೆ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿತ್ತು.

ಕಾಂಗ್ರೆಸ್‌ನಿಂದ ಬೃಹತ್‌ ಪ್ರತಿಭಟನೆ: ಪೆನ್‌ಡ್ರೈವ್ ಪ್ರಕರಣದ ಮುಖ್ಯ ರುವಾರಿ ಬಿಜೆಪಿ ಮುಖಂಡ ದೇವರಾಜೇಗೌಡ ಹಾಗೂ ವಿದೇಶದಲ್ಲಿ ತಲೆಮರಿಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಜಿಲ್ಲೆಯಲ್ಲಿ ಬೃಹತ್‌ ಪ್ರತಿಭಟನೆ ನಡೆಸಿತು. ಬಳಿಕ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಲಾಯಿತು. ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ಮಾತನಾಡಿ, ‘ಪೆನ್‌ಡ್ರೈವ್ ಪ್ರಕರಣದ ಮುಖ್ಯ ರುವಾರಿ ಹೊಳೆನರಸಿಪುರದ ಬಿಜೆಪಿಯ ಪರಾಜಿತ ಅಭ್ಯರ್ಥಿದೇವರಾಜೇಗೌಡರಾಗಿದ್ದು, ದಿನಕ್ಕೊಂದು ಹೇಳಿಕೆ ಕೊಡುತ್ತ, ಗೊಂದಲದ ವಾತಾವರಣವನ್ನು ಸೃಷ್ಟಿ ಮಾಡುತ್ತಿದ್ದಾರೆ. 

ರಾಜ್ಯ ಸರ್ಕಾರ ಬೀಳಿಸುವುದು ಅಸಾಧ್ಯ: ಎಚ್ಡಿಕೆಗೆ ಸಚಿವ ಎಂ.ಬಿ.ಪಾಟೀಲ್‌ ಸವಾಲು

ಕಾಂಗ್ರೆಸ್ಸಿನ ಪ್ರಮುಖ ನಾಯಕರ ವಿರುದ್ಧ ವಿನಾಕಾರಣ ಅರೋಪ ಮಾಡುತ್ತ, ಅವರನ್ನು ತೇಜೋವಧೆ ಮಾಡುವ ಮೂಲಕ ಹಲವಾರು ಜನರನ್ನು ಬ್ಲಾಕ್‌ಮೇಲ್ ಮಾಡಿ ವಂಚಿಸಿ, ನಾನೇ ದೊಡ್ಡ ನಾಯಕ ಎಂಬಂತೇ ಬಿಂಬಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸುಳ್ಳಿನ ಸರಮಾಲೆಯನ್ನು ಸೃಷ್ಟಿ ಮಾಡುತ್ತ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುತ್ತಿದ್ದಾರೆ. ಕಳೆದ ೨ ವರ್ಷದಿಂದ ನನ್ನ ಬಳಿ ಪೆನ್‌ಡ್ರೈವ್ ಇದೆ ಎಂದು ಹೇಳುತ್ತ ಹಲವಾರು ಹೆಣ್ಣುಮಕ್ಕಳ ಜೀವನವನ್ನು ಹಾಳು ಮಾಡಿ ಅವರ ಮಾನ ಮರ್ಯಾದೆ ಬೀದಿಗೆ ತಂದು ಈಗ ಕಪಟ ನಾಟಕವಾಡುತ್ತಿದ್ದಾರೆ. ಎಸ್‌ಐಟಿ ಅಧಿಕಾರಿಗಳು ಹಾಗು ಕರ್ನಾಟಕ ಸರ್ಕಾರವು ಕೂಡಲೇ ಇವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದರೆ ಎಲ್ಲಾ ಸತ್ಯಾಂಶವು ಹೊರಬರುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.