Vinod Prabhakar Health Update: ಕನ್ನಡ ಚಿತ್ರರಂಗದ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು (ಜೂ.20): ಕನ್ನಡ ಚಿತ್ರರಂಗದ ನಟ ವಿನೋದ್ ಪ್ರಭಾಕರ್ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಾಹಿತಿಯ ಪ್ರಕಾರ, ಮನೆಯಲ್ಲಿ ಇದ್ದ ವೇಳೆ ವಿನೋದ್ ಪ್ರಭಾಕರ್ ಅವರಿಗೆ ರಕ್ತದೊತ್ತಡ (ಬಿಪಿ) ಸಂಬಂಧಿತ ಸಮಸ್ಯೆ ಕಾಣಿಸಿಕೊಂಡಿದ್ದು, ಆರೋಗ್ಯದಲ್ಲಿ ತಕ್ಷಣದ ಬದಲಾವಣೆ ಕಂಡುಬಂದ ಹಿನ್ನೆಲೆ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ನಾಗರಭಾವಿಯ ಖಾಸಗಿ ಆಸ್ಪತ್ರೆಯ ಕಾರ್ಡಿಯಾ ಕೇರ್ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇಂದು ಬೆಳಗ್ಗಿನಿಂದಲೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿನೋದ್ ಪ್ರಭಾಕರ್ ಅವರಿಗೆ ವೈದ್ಯರು ಎಂಆರ್‌ಐ (MRI) ಸ್ಕ್ಯಾನ್, ರಕ್ತ ಪರೀಕ್ಷೆ ಸೇರಿದಂತೆ ಹಲವು ವೈದ್ಯಕೀಯ ತಪಾಸಣೆಗಳನ್ನು ನಡೆಸಿದ್ದಾರೆ.

ಪರೀಕ್ಷೆಗಳ ಎಲ್ಲಾ ವರದಿಗಳು ಸಾಮಾನ್ಯವಾಗಿದ್ದು, ಯಾವುದೇ ಗಂಭೀರ ಆರೋಗ್ಯ ಸಮಸ್ಯೆ ಕಂಡುಬಂದಿಲ್ಲ ಎಂದು ತಿಳಿದುಬಂದಿದೆ. ಇತ್ತೀಚೆಗೆ ತಮ್ಮ ಬಹುನಿರೀಕ್ಷಿತ ‘ಬಲರಾಮ’ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ವಿನೋದ್ ಪ್ರಭಾಕರ್ ತೊಡಗಿಸಿಕೊಂಡಿದ್ದ ಕಾರಣ ಉಂಟಾದ ಒತ್ತಡ ಮತ್ತು ಆಯಾಸದಿಂದ ಆರೋಗ್ಯದಲ್ಲಿ ಸ್ವಲ್ಪ ಏರುಪೇರು ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ ಸಂಜೆ ಡಿಸ್ಚಾರ್ಜ್ ಆಗುವ ಸಾಧ್ಯತೆ: ಸದ್ಯ ವೈದ್ಯರ ಮೇಲ್ವಿಚಾರಣೆಯಲ್ಲಿ 24 ಗಂಟೆಗಳ ಕಾಲ ಅಬ್ಸರ್ವೇಶನ್‌ನಲ್ಲಿ ಇರಿಸಲಾಗಿದ್ದು, ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಎಲ್ಲವೂ ಸರಿಯಾಗಿದ್ದರೆ ನಟ ವಿನೋದ್ ಪ್ರಭಾಕರ್ ಅವರನ್ನು ನಾಳೆ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.

ಪತ್ನಿ ನಿಶಾ ಹೇಳಿದ್ದೇನು?

ವಿನೋದ್ ಪ್ರಭಾಕರ್ ಅವರ ಆರೋಗ್ಯ ಈಗ ಸ್ಥಿರವಾಗಿದೆ. ಕಳೆದ 15 ದಿನಗಳಿಂದ ಬಲರಾಮ ಚಿತ್ರದ ಪ್ರಚಾರ ಕಾರ್ಯಗಳಲ್ಲಿ ಅವರು ನಿರಂತರವಾಗಿ ತೊಡಗಿಸಿಕೊಂಡಿದ್ದರು. ರಾತ್ರಿ-ಹಗಲು ಎನ್ನದೆ ಪ್ರಮೋಶನ್‌ನಲ್ಲಿ ಬ್ಯುಸಿಯಾಗಿದ್ದರಿಂದ ದೈಹಿಕ ಆಯಾಸ ಮತ್ತು ಒತ್ತಡ ಹೆಚ್ಚಾಗಿತ್ತು. ಇಂದು ಬೆಳಿಗ್ಗೆ ಸ್ವಲ್ಪ ಅಸ್ವಸ್ಥತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಿ ಎಲ್ಲಾ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಗಿದೆ. ವೈದ್ಯರು ನೀಡಿರುವ ವರದಿ ಪ್ರಕಾರ ಎಲ್ಲ ಪರೀಕ್ಷೆಗಳ ಫಲಿತಾಂಶಗಳು ಸಾಮಾನ್ಯವಾಗಿವೆ.

ಬಲರಾಮ ಚಿತ್ರವು ದೊಡ್ಡ ಬಜೆಟ್‌ನಲ್ಲಿ ನಿರ್ಮಾಣವಾಗಿದ್ದು, ಇದು ವಿನೋದ್ ಪ್ರಭಾಕರ್ ಅವರ 25ನೇ ಚಿತ್ರವಾಗಿದೆ. ಹಲವು ಖ್ಯಾತ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಿನಿಮಾ ಯಶಸ್ವಿಯಾಗಬೇಕು ಎಂಬ ಕಾಳಜಿಯಿಂದ ಅವರು ತುಂಬಾ ಶ್ರಮಪಟ್ಟಿದ್ದಾರೆ. ಪ್ರಮೋಶನ್‌ನ ಒತ್ತಡ ಮತ್ತು ನಿರಂತರ ಕೆಲಸದ ಪರಿಣಾಮವಾಗಿ ಈ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಸ್ತುತ ಅವರ ಆರೋಗ್ಯದಲ್ಲಿ ಉತ್ತಮ ಚೇತರಿಕೆ ಕಂಡುಬಂದಿದ್ದು, ಎಲ್ಲಾ ವರದಿಗಳು ನಾರ್ಮಲ್ ಆಗಿವೆ. ನಾಳೆ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.