ರವಿಶಾಸ್ತ್ರಿ 2014ರಿಂದ 2016ರವರೆಗೆ ಭಾರತ ತಂಡದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ಬೆಂಗಳೂರು(ಜೂ.29): ರವಿಶಾಸ್ತ್ರಿ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲಿದ್ದಾರೆ ಎಂಬ ವದಂತಿಗೆ ಸಂಬಂಧಿಸಿದಂತೆ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿಯ ಸದಸ್ಯ, ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

"ಯಾರೂ ಬೇಕಾದರೂ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ನಾನು ಆಡಳಿತ ಮಂಡಳಿಯಲ್ಲಿರದಿದ್ದರೆ, ನಾನೂ ಕೂಡಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೆ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಅನಿಲ್ ಕುಂಬ್ಳೆ ರಾಜೀನಾಮೆಯಿಂದ ತೆರವಾದ ಟೀಂ ಇಂಡಿಯಾ ಮುಖ್ಯ ಕೋಚ್ ಹುದ್ದೆಗೆ ವಿರೇಂದ್ರ ಸೆಹ್ವಾಗ್, ಟಾಮ್ ಮೂಡಿ ಸೇರಿದಂತೆ ಈಗಾಗಲೇ ಪ್ರಮುಖ ಐದು ಮಂದಿ ಅರ್ಜಿ ಸಲ್ಲಿಸಿದ್ದಾರೆ.

ಕಳೆದ ಬಾರಿ ಕೋಚ್ ಆಯ್ಕೆ ಸಂದರ್ಭದಲ್ಲಿ ಗಂಗೂಲಿ ಹಾಗೂ ರವಿಶಾಸ್ತ್ರಿ ನಡುವೆ ಸಂದರ್ಶನದ ಕುರಿತಂತೆ ಮಾತಿನ ಚಕಮಕಿ ನಡೆದಿತ್ತು. ಈ ಎಲ್ಲಾ ಕಾರಣಗಳಿಂದ ರವಿಶಾಸ್ತ್ರಿ ಬದಲಾಗಿ, ಅನಿಲ್ ಕುಂಬ್ಳೆ ಕೋಚ್ ಆಗಿ ಆಯ್ಕೆಯಾಗಿದ್ದರು. ರವಿಶಾಸ್ತ್ರಿ 2014ರಿಂದ 2016ರವರೆಗೆ ಭಾರತ ತಂಡದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.